ಮೈಸೂರು: ಕಳ್ಳತನದ ವೇಳೆ ಕಳ್ಳನಿಂದ ದಾಳಿಗೊಳಗಾಗಿದ್ದ ವೃದ್ಧೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತ ದುರ್ದೈವಿ ವೃದ್ಧೆಯನ್ನು ನಾಗರತ್ನ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಆರೋಪಿ ರೆಹಮಾನ್ ಷರೀಫ್ನನ್ನು ಪೊಲೀಸರು ಬಂಧಿಸಿದ್ದಾರೆ.
ಏನಿದು ಘಟನೆ?
ಆಗಸ್ಟ್ 21ರಂದು ವೃದ್ಧೆ ನಾಗರತ್ನ ಅವರ ಮನೆಯಲ್ಲಿ ಕಳ್ಳತನವಾಗಿತ್ತು. ಕಳ್ಳತನ ಮಾಡುವ ವೇಳೆ ಖದೀಮ ನಾಗರತ್ನ ಅವರ ಬಾಯಿಗೆ ಬಟ್ಟೆ ತುರುಕಿದ್ದನು. ಪರಿಣಾಮ ನಾಗರತ್ನ ಅವರು ತೀವ್ರ ಅಸ್ವಸ್ಥರಾಗಿ ಬಿದ್ದಿದ್ದರು. ಈ ವೇಳೆ ಕಳ್ಳ ನಾಗರತ್ನ ಧರಿಸಿದ್ದ 7 ಚಿನ್ನದ ಬಳೆ ಕಿತ್ತುಕೊಂಡು ಪರಾರಿಯಾಗಿದ್ದನು.
ಈ ಹಿನ್ನೆಲೆಯಲ್ಲಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವೃದ್ಧೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಪ್ರಕರಣ ಸಂಬಂಧ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.