ಮಡಿಕೇರಿ: ಮೈಸೂರು-ಕುಶಾಲನಗರ ನಾಲ್ಕು ಪಥದ ಹೆದ್ದಾರಿಯ (Mysuru-Kushalnagar Four Lane Highway) ಕಾಮಗಾರಿಯನ್ನು ಒಂದು ತಿಂಗಳಲ್ಲಿ ಆರಂಭಿಸಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ (Pratap Simha) ಅವರು ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಅಭಿವೃದ್ಧಿ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ಮೈಸೂರು-ಕುಶಾಲನಗರ ನಾಲ್ಕು ಪಥದ ಹೆದ್ದಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi) ಅವರು ಚಾಲನೆ ನೀಡಿದ್ದು 4,130 ಕೋಟಿ ರೂ. ವೆಚ್ಚದಲ್ಲಿ 93 ಕಿ.ಮೀ. ಉದ್ದದ ಹೆದ್ದಾರಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಪ್ರತಾಪ್ ಸಿಂಹ ಅವರು ತಿಳಿಸಿದರು. ಇದನ್ನೂ ಓದಿ: ಮನೆಗೆ ಅತ್ತೆಯೇ ಸಿನಿಯರ್, ಅತ್ತೆ ಒಪ್ಪಿದ್ರಷ್ಟೇ ಸೊಸೆಗೆ 2,000 – ಲಕ್ಷ್ಮಿ ಹೆಬ್ಬಾಳ್ಕರ್
ಕುಶಾಲನಗರ-ಸಂಪಾಜೆ (Kushalnagar-Sampaje) ಮಾರ್ಗದಲ್ಲಿ ಅಪಘಾತ ಸ್ಥಳಗಳನ್ನು ಗುರುತಿಸಿ ವರದಿ ನೀಡಬೇಕು. ಇಂತಹ ಸ್ಥಳಗಳಲ್ಲಿ ಅಪಘಾತ ತಪ್ಪಿಸಲು ಅಗತ್ಯ ಕ್ರಮವಹಿಸುವಂತೆ ಹೆದ್ದಾರಿ ಇಲಾಖೆಯ ಎಂಜಿನಿಯರ್ಗಳಿಗೆ ಸಂಸದರು ಸೂಚಿಸಿದರು.
ಮದೆನಾಡು ಬಳಿಯ ಕರ್ತೋಜಿ ಗುಡ್ಡ ಮೇಲ್ಭಾಗದಲ್ಲಿ ಬಿರುಕು ಬಿಟ್ಟಿದ್ದು, ಮಳೆಗಾಲದಲ್ಲಿ ಮಣ್ಣು ರಸ್ತೆಗೆ ಬರುವ ಸಾಧ್ಯತೆ ಇದೆ. ಆದ್ದರಿಂದ ತಡೆಗೋಡೆ ನಿರ್ಮಿಸಬೇಕಿದೆ. ಈ ಸಂಬಂಧ ಎಂಜಿನಿಯರ್ಗಳು ಸೂಕ್ತ ಕ್ರಮವಹಿಸಬೇಕು. ಹೆದ್ದಾರಿಯಲ್ಲಿ ಸಾರಿಗೆ ಸಂಚಾರಕ್ಕೆ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ ಗಮನಹರಿಸಬೇಕು ಎಂದು ಪ್ರತಾಪ್ ಸಿಂಹ ಅವರು ನಿರ್ದೇಶನ ನೀಡಿದರು.
ಸದ್ಯದಲ್ಲೇ ಮುಂಗಾರು ಆರಂಭವಾಗಲಿದ್ದು 2018 ರಿಂದ ಇತ್ತೀಚೆಗೆ ಹೆಚ್ಚಿನ ಮಳೆಯಿಂದಾಗಿ ಹಾನಿಗಳು ಸಂಭವಿಸುತ್ತಿವೆ. ಪ್ರವಾಹ ಮತ್ತಿತರ ಅನಾಹುತವನ್ನು ತಪ್ಪಿಸುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.