ಮೈಸೂರು: ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಸುಪಾರಿ ಬಗ್ಗೆಯೂ ತನಿಖೆ ನಡೆಸುತ್ತಿದ್ದೇವೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಹೇಳಿದ್ದಾರೆ.
ಭಾನುವಾರ ರಾತ್ರಿ ಸೇಠ್ ಅವರ ಮೇಲೆ ನಡೆದ ಹಲ್ಲೆ ಪ್ರಕರಣವಾಗಿ ಮಾತನಾಡಿರುವ ಕಮೀಷನರ್, ಅನುಮಾನಸ್ಪದ ವ್ಯಕ್ತಿಗಳನ್ನು ವಿಚಾರಣೆ ನಡೆಸುತ್ತಿದ್ದೇವೆ. ಸದ್ಯ ತನಿಖೆ ಹಂತದಲ್ಲಿರುವುದರಿಂದ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ. ಕೆಲವು ಸಂಘಟನೆ ಕೈವಾಡ ಇದೆಯೇ ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನು ಓದಿ: ಶಾಸಕ ತನ್ವೀರ್ ಸೇಠ್ ಆರೋಗ್ಯ ಸ್ಥಿತಿ ಗಂಭೀರ
ಈ ಪ್ರಕರಣದಲ್ಲಿ ಯಾವುದನ್ನು ತಳ್ಳಿ ಹಾಕುವಂತಿಲ್ಲ. ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಬಂಧಿತ ಆರೋಪಿ ಕರಕುಶಲ ವಸ್ತುಗಳನ್ನು ತಯಾರಿಸುವ ಕೆಲಸ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ. ಈ ಕೃತ್ಯಕ್ಕೆ ಆ ವೃತ್ತಿಗೆ ಸಂಬಂಧಿಸಿದ ಕತ್ತಿಯನ್ನೆ ಬಳಸಿರಬಹುದು. ಆತನ ಕುಟುಂಬಸ್ಥರಿಂದಲು ಮಾಹಿತಿ ಪಡೆಯುತ್ತಿದ್ದೇವೆ. ಇನ್ನು ಕೆಲವರು ಭಾಗಿಯಾಗಿರುವ ಸಾಧ್ಯತೆ ಇದೆ ಎಂದು ಕಮೀಷನರ್ ಕೆ.ಟಿ.ಬಾಲಕೃಷ್ಣ ಸಂಶಯ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಕೆಲಸ ಸಿಕ್ಕಿಲ್ಲ ಎಂದು ಹಲ್ಲೆ ಮಾಡಿರುವ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅದು ಇನ್ನು ಸಾಬೀತಾಗಿಲ್ಲ. ವಿಚಾರಣೆಯಿಂದ ಎಲ್ಲವೂ ಗೊತ್ತಾಗಲಿದೆ. ಸುಪಾರಿ ಬಗ್ಗೆಯು ವಿಚಾರಣೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನು ಓದಿ: ಕಾಲಿಗೆ ಬಿದ್ದು ಆಶೀರ್ವಾದ ಪಡೆಯುತ್ತಿದ್ದಾನೆ ಎಂದುಕೊಂಡ್ವಿ, ಆದ್ರೆ ಮಚ್ಚಿನಿಂದ ಹೊಡೆದು ಓಡಿ ಹೋದ: ಪ್ರತ್ಯಕ್ಷದರ್ಶಿ
ಭಾನುವಾರ ರಾತ್ರಿ ಮೈಸೂರಿನ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಬನ್ನಿ ಮಂಟಪ ಸಮೀಪದ ಪಾರ್ಟಿ ಹಾಲಿಗೆ ತಮ್ಮ ಆತ್ಮೀಯ ಮಗನ ಮದುವೆಯ ಬೀಗರೂಟಕ್ಕೆ ಆಗಮಿಸಿದ್ದರು. ಈ ವೇಳೆ ಯುವಕ ಫರಾನ್ (24) ಚಾಕುವಿನಿಂದ ಹಲ್ಲೆ ಮಾಡಿದ್ದ. ಅವರ ಕತ್ತಿಗೆ ಭಾಗಕ್ಕೆ ಚಾಕು ಹಾಕಿ ಪರಾರಿಯಾಗುತ್ತಿದ್ದ ಆತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ನಂತರ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಸೇಠ್ ಅವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.