ಇಂಪಾಲ: ಮಣಿಪುರದ (Manipur) ಸಿಎಂ ಬಿರೇನ್ ಸಿಂಗ್ (N Biren Singh) ದಿಢೀರ್ ರಾಜೀನಾಮೆ ನೀಡಿದ್ದಾರೆ. ಇಂದು (ಫೆ.9) ಸಂಜೆ ರಾಜ್ಯಪಾಲರಿಗೆ ತಮ್ಮ ರಾಜೀನಾಮೆಯನ್ನು ಹಸ್ತಾಂತರಿಸಿದ್ದಾರೆ.
ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಸುಮಾರು ಎರಡು ವರ್ಷಗಳ ನಂತರ ಬಿರೇನ್ ಸಿಂಗ್ ರಾಜಿನಾಮೆ ನೀಡಿದ್ದಾರೆ. ತಮ್ಮ ನಾಯಕತ್ವದ ವಿರುದ್ಧ ರಾಜ್ಯ ಬಿಜೆಪಿಯಲ್ಲಿನ (BJP) ಭಿನ್ನಮತವನ್ನು ಬಗೆಹರಿಸಲು ಅವರು ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಮಿತ್ರಪಕ್ಷ ಕಾನ್ರಾಡ್ ಸಂಗ್ಮಾ ಅವರ ರಾಷ್ಟ್ರೀಯ ಪೀಪಲ್ಸ್ ಪಾರ್ಟಿ ಈ ಹಿಂದೆ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡಿತ್ತು. ಅದಾಗ್ಯೂ, ಬಿಜೆಪಿಗೆ ಸಂಖ್ಯಾಬಲವಿದ್ದರೂ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯನ್ನು ಬಯಸುತ್ತಿರುವ ಶಾಸಕರು ಬಹುಮತ ಪರೀಕ್ಷೆಯ ಸಂದರ್ಭದಲ್ಲಿ ಪಕ್ಷದ ವಿಪ್ ನಿರ್ಲಕ್ಷಿಸುವ ಸಾಧ್ಯತೆಯಿದೆ ಎಂದು ಮಣಿಪುರದ ಮಾಧ್ಯಮಗಳು ವರದಿ ಮಾಡಿವೆ.
ಸುಮಾರು 12 ಶಾಸಕರು ನಾಯಕತ್ವ ಬದಲಾವಣೆಗೆ ತೀವ್ರವಾಗಿ ಒತ್ತಾಯಿಸುತ್ತಿದ್ದು, ಸುಮಾರು ಆರು ಶಾಸಕರು ಬೇರೆ ಪಕ್ಷಗಳಿಗೆ ಪಕ್ಷಾಂತರವಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಬೆಳಿಗ್ಗೆ ದೆಹಲಿಗೆ ತೆರಳಿದ್ದ ಬಿರೇನ್ ಸಿಂಗ್, ಅಲ್ಲಿ ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು.