-ಬಸನಗೌಡ ದದ್ದಲ್, ಶರಣಪ್ರಕಾಶ್ ಪಾಟೀಲ್ ರಾಜೀನಾಮೆ ಪಡೆಯಲಿ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Corporation) ಭಾರೀ ಹಗರಣ ಸಂಬಂಧ ನಿಗಮದ ಅಧ್ಯಕ್ಷ ಮತ್ತು ಶಾಸಕ ಬಸನಗೌಡ ದದ್ದಲ್ (Basanagouda Daddal) ಹಾಗೂ ಸಚಿವ ಶರಣಪ್ರಕಾಶ್ ಪಾಟೀಲರ ರಾಜೀನಾಮೆ ಪಡೆದು, ಪ್ರಕರಣದಲ್ಲಿ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ರಾಜೀನಾಮೆ ನೀಡಬೇಕು ಎಂದು ವಿಧಾನಪರಿಷತ್ನ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ (N.Ravikumar) ಆಗ್ರಹಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ (BJP) ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಒಂದಾದ ನಂತರ ಒಂದು ಸಾಕ್ಷ್ಯಾಧಾರಗಳು ಸಿಗುತ್ತಿವೆ. ಇದು ದಲಿತರ ಹಣ ಲೂಟಿಯ ಬ್ರಹ್ಮಾಂಡ ಭ್ರಷ್ಟಾಚಾರದ ಪ್ರಕರಣವಾಗಿದೆ. ಇನ್ನೂ ಬೇರೆ ಬೇರೆ ಇಲಾಖೆಗಳಲ್ಲೂ ಭ್ರಷ್ಟಾಚಾರ ಹಗರಣ ನಡೆದ ವಾಸನೆ ನಮಗೆ ಸಿಗುತ್ತಿದೆ. ಇವುಗಳ ಸಾಕ್ಷ್ಯಾಧಾರ ಸಂಗ್ರಹದ ಪ್ರಯತ್ನ ನಡೆದಿದೆ ಎಂದು ಅವರು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಗ್ಯಾರಂಟಿಗಳನ್ನು ಮತ ಪಡೆಯಲು ನೀಡಿಲ್ಲ, ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ನಿಲ್ಲಿಸಲ್ಲ: ರಾಮಲಿಂಗಾ ರೆಡ್ಡಿ
ಅತ್ಯಂತ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರನ್ ಅವರು ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರು ತಮ್ಮ ಪತ್ರದಲ್ಲಿ ಸಚಿವರ ಮೌಖಿಕ ಸೂಚನೆ ಮೇರೆಗೆ ಹಣದ ವರ್ಗಾವಣೆ ಆಗಿದೆ ಎಂದು ಉಲ್ಲೇಖಿಸಿದ್ದರು. ಇದೀಗ ಲೆಕ್ಕಾಧಿಕಾರಿ ಪರಶುರಾಮ್ ಅವರು 24ರಂದು ವೈದ್ಯಕೀಯ ಶಿಕ್ಷಣ ಸಚಿವರ ಕಚೇರಿಯಲ್ಲಿ ಸಭೆ ಕುರಿತು ಮಾಹಿತಿ ನೀಡಿದ್ದಾರೆ. ಈಗಾಗಲೇ ಸಚಿವ ನಾಗೇಂದ್ರ ಅವರು ರಾಜೀನಾಮೆ ಕೊಟ್ಟಿದ್ದಾರೆ. ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಯಾಕೆ ರಾಜೀನಾಮೆ ಕೊಟ್ಟಿಲ್ಲ? ಅವರನ್ನು ಮುಖ್ಯಮಂತ್ರಿಗಳು ರಕ್ಷಿಸುತ್ತಿರುವುದು ಯಾವ ಕಾರಣಕ್ಕೆ ಎಂದು ಅವರು ಪ್ರಶ್ನಿಸಿದ್ದಾರೆ.
ಕರ್ನಾಟಕದಲ್ಲಿ ಭ್ರಷ್ಟರ ರಕ್ಷಣೆಯ ಖಾತೆಯನ್ನು ಮುಖ್ಯಮಂತ್ರಿಗಳು ಹೊಸದಾಗಿ ಸೇರಿಸಿಕೊಂಡಿದ್ದಾರಾ? ಸಿದ್ದರಾಮಯ್ಯನವರು ಭ್ರಷ್ಟರ ರಕ್ಷಣಾ ಖಾತೆಯ ಮುಖ್ಯಮಂತ್ರಿ ಆಗಿದ್ದಾರೆ. ಅವರು ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರ ರಾಜೀನಾಮೆಯನ್ನು ಕೂಡಲೇ ಪಡೆಯಬೇಕು. ವೈದ್ಯಕೀಯ ಶಿಕ್ಷಣ ಸಚಿವರ ಕಚೇರಿಯಲ್ಲಿ ನಡೆಸಿದ ಸಭೆಯ ಫೂಟೇಜ್ನ್ನು ರಕ್ಷಿಸಬೇಕು. ಪರಶುರಾಮ್ ಅವರು ಈ ಫೂಟೇಜ್, ಸಾಕ್ಷ್ಯಾಧಾರವನ್ನು ರಕ್ಷಿಸಲು ಅಫಿಡವಿಟ್ ಸಲ್ಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಸಚಿವರ ಮೌಲ್ಯಮಾಪನದ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ: ಎಂ.ಬಿ ಪಾಟೀಲ್