ಬೆಂಗಳೂರು: ನಾಡಪ್ರಭು ಕೆಂಪೇಗೌಡ ಜಯಂತಿ (Nadaprabhu Kempegowda Jayanti) ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ 15 ಲಕ್ಷ ಸಸಿಗಳನ್ನು ನೆಡುವ ಬೃಹತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಗಿಡ ನೆಟ್ಟು ವಿಶ್ವದಾಖಲೆ ಗುರಿಯೊಂದಿಗೆ ಹಸಿರು ಅಭಿಯಾನ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಗಳೂರು ನಗರ ಪುನಶ್ಚೇತನ ಮಿಷನ್ 2026-30ರ ಅಂಗವಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಈ ಅಭಿಯಾನ ಕೈಗೊಂಡಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ತರಕಾರಿಗಳ ಬೆಲೆ ಗಗನಕ್ಕೆ
ಡಾ. ಶಿವರಾಮ ಕಾರಂತ ಬಡಾವಣೆ, ನಾಡಪ್ರಭು ಕೆಂಪೇಗೌಡ ಬಡಾವಣೆ, ಬನಶಂಕರಿ 6ನೇ ಹಂತ, ಕೆರೆ ದಂಡೆಗಳು, ರಾಜಕಾಲುವೆಗಳ ಇಕ್ಕೆಲಗಳು, ಉದ್ಯಾನಗಳು ಸೇರಿದಂತೆ ವಿವಿಧ ಪರಿಸರ ವಲಯಗಳಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಒಟ್ಟು 243 ಎಕರೆ ಪ್ರದೇಶವನ್ನು 49 ವಲಯಗಳಾಗಿ ವಿಂಗಡಿಸಲಾಗಿದೆ.

ಬೆಳಗ್ಗೆ 11 ಗಂಟೆಗೆ ಕೃಷ್ಣಪಥ ರಸ್ತೆ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಂಪೇಗೌಡರ 7 ಪುರಜ್ಯೋತಿಗಳ ಸ್ವೀಕಾರ ಮಾಡಲಿದ್ದಾರೆ.
ಕಾರ್ಯಕ್ರಮದ ಬಗ್ಗೆ ಬಿಡಿಎ ಅಧ್ಯಕ್ಷ ಎನ್.ಎ.ಹ್ಯಾರಿಸ್ ಮಾತನಾಡಿ, ಇಂದು ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಜಯಂತಿ ಇದೆ. ಈ ದಿನ 15 ಲಕ್ಷ ಸಸಿ ನೆಡುವ ಗಿನ್ನಿಸ್ ದಾಖಲೆ ಕಾರ್ಯಕ್ರಮ ಶುರುವಾಗಲಿದೆ. 12 ಗಂಟೆಗಳಲ್ಲಿ 15 ಲಕ್ಷ ಸಸಿ ನೆಡಲಾಗುತ್ತಿದೆ. ಸುಮಾರು 50 ಸಾವಿರ ಸ್ವಯಂ ಸೇವಕರು ಕೆಲಸ ಮಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರ ಹೆಸರಿನಲ್ಲಿ ಕೃಷ್ಣ ಪಥ ರಸ್ತೆ ಉದ್ಘಾಟನೆಯಾಗಲಿದೆ. ಜನ ತುಂಬಾ ಉತ್ಸುಕತೆಯಿಂದ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದಾರೆ. ಇದನ್ನೂ ಓದಿ: 631 ಕೋಟಿ ವೆಚ್ಚದ ಬಹುನಿರೀಕ್ಷಿತ ʻಎಸ್ಎಂ ಕೃಷ್ಣ ರಸ್ತೆʼ ಶನಿವಾರ ಲೋಕಾರ್ಪಣೆ
ಬಿಜೆಪಿ ಕಾರ್ಯಕ್ರಮ
ಇತ್ತ ಬೆಂಗಳೂರಿನ ಸದಾಶಿವನಗರದಲ್ಲಿ ಕೆಂಪೇಗೌಡ ಜಯಂತಿ ಆಚರಿಸಲಾಗಿದೆ. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಅಶ್ವಥ್ ನಾರಾಯಣ್ ಭಾಗಿಯಾಗಿದ್ದರು. ಕೆಂಪೇಗೌಡ ಪ್ರತಿಮೆಗೆ ಬಿಜೆಪಿ ನಾಯಕರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

