– ತಮನ್ನಾ ರಾಯಭಾರಿ ನಿರ್ಧಾರ ಹಿಂಪಡೆಯದಿದ್ರೆ ತೀವ್ರ ಪ್ರತಿಭಟನೆ; ಕರವೇ ಎಚ್ಚರಿಕೆ
ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಕಂಪನಿಯ ಪ್ರಾಥಮಿಕ ಗ್ರಾಹಕರು ಕರ್ನಾಟಕದ ಕನ್ನಡಿಗರಾಗಿದ್ದಾರೆ. ಕನ್ನಡ ನಟಿಯರನ್ನ ಹಾಕೊಂಡ್ರೆ ಲಾಭ ಬರಲ್ವಾ ಎಂದು ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ(Narayan Gowda) ಆಕ್ರೋಶ ಹೊರಹಾಕಿದ್ದಾರೆ.
ಪರಭಾಷಾ ನಟಿ ತಮನ್ನಾ ಭಾಟಿಯಾ(Tamanna Bhatia) ಅವರನ್ನು ಮೈಸೂರು ಸ್ಯಾಂಡಲ್ ಸೋಪ್ನ(Mysore Sandal Soap) ರಾಯಭಾರಿಯಾಗಿ ಮಾಡಿದ ಬಗ್ಗೆ ಮಾತನಾಡಿದರು. ಮೈಸೂರು ಸ್ಯಾಂಡಲ್ ಸೋಪ್ ಕಂಪನಿ ತನ್ನ ಬ್ರಾಂಡ್ ಅಂಬಾಸೆಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು 6.2 ಕೋಟಿ ರೂ. ತೆತ್ತು ನೇಮಕ ಮಾಡಿರುವುದು ಅವಿವೇಕದ, ಅಸಂಬದ್ಧ, ಅನೈತಿಕ, ಬೇಜವಾಬ್ದಾರಿಯುತ ತೀರ್ಮಾನವಾಗಿದೆ ಕಿಡಿಕಾರಿದ್ದಾರೆ. ಇದನ್ನೂ ಓದಿ: ಮೈಸೂರು ಸ್ಯಾಂಡಲ್ ಸೋಪ್ಗೆ ಮಿಲ್ಕಿ ಬ್ಯೂಟಿ ರಾಯಭಾರಿ – ಬರೋಬ್ಬರಿ 6.20 ಕೋಟಿ ಸಂಭಾವನೆ
ಇದು ಕರ್ನಾಟಕ ಸರ್ಕಾರದ ಸ್ವಾಮ್ಯದ ಕಂಪನಿ. 1916ರಲ್ಲಿ ಮೈಸೂರು ಸಂಸ್ಥಾನದ ಮಹಾರಾಜ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ್ದಾರೆ. ಈ ಕಂಪನಿಯು ಕರ್ನಾಟಕದಲ್ಲಿ(Karnataka) ಅತ್ಯಂತ ಜನಪ್ರಿಯ ಬ್ರಾಂಡ್ಗಳಲ್ಲಿ ಒಂದಾಗಿದೆ. ಇದರ ಪ್ರಾಥಮಿಕ ಗ್ರಾಹಕರು ಕನ್ನಡಿಗರಾಗಿದ್ದಾರೆ ಎನ್ನುವ ಕನಿಷ್ಠ ತಿಳಿವಳಿಕೆ ಈ ನೇಮಕ ಮಾಡುವಾಗ ಇರಲಿಲ್ಲವೇ? ಐತಿಹಾಸಿಕ ಮತ್ತು ಸಾಂಸ್ಕೃತಿಕ ಮೌಲ್ಯವುಳ್ಳ ಕಂಪನಿಯ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರೇ ಬೇಕಿತ್ತಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮೋದಿಜೀ ಪೊಳ್ಳು ಭಾಷಣ ನಿಲ್ಲಿಸಿ… ಕ್ಯಾಮೆರಾಗಳ ಮುಂದೆ ಮಾತ್ರ ನಿಮ್ಮ ರಕ್ತ ಏಕೆ ಕುದಿಯುತ್ತೆ? – ರಾಗಾ
ಈ ನೇಮಕಕ್ಕಾಗಿ ಕರ್ನಾಟಕ ಸರ್ಕಾರವು 6.20 ಕೋಟಿ ರೂ.ಗಳ ಭಾರೀ ಮೊತ್ತವನ್ನು ವ್ಯಯಿಸಿರುವುದು ಇನ್ನಷ್ಟು ಆಕ್ಷೇಪಾರ್ಹವಾಗಿದೆ. ಈ ನಿರ್ಧಾರದ ವಿರುದ್ಧ ನಮ್ಮ ತೀವ್ರ ವಿರೋಧವಿದೆ. ತಮನ್ನಾಗೆ ಸರ್ಕಾರವು 6.20 ಕೋಟಿ ರೂ. ವ್ಯಯಿಸಿರುವುದು ಸಂಪೂರ್ಣವಾಗಿ ಅನಗತ್ಯ ಮತ್ತು ಜವಾಬ್ದಾರಿಯಿಲ್ಲದ ನಿರ್ಧಾರವಾಗಿದೆ. ಈ ಹಣವನ್ನು ಕರ್ನಾಟಕದ ಜನರ ಒಳಿತಿಗಾಗಿ, ಉದಾಹರಣೆಗೆ ಶಿಕ್ಷಣ, ಆರೋಗ್ಯ, ಅಥವಾ ಉದ್ಯೋಗ ಸೃಷ್ಟಿಗೆ ಬಳಸಬಹುದಾಗಿತ್ತು. ಸರ್ಕಾರವು ಜನರ ತೆರಿಗೆ ಹಣವನ್ನು ಈ ರೀತಿ ವ್ಯರ್ಥವಾಗಿ ಖರ್ಚು ಮಾಡಿರುವುದು ಖಂಡನೀಯವಾಗಿದೆ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಒಂದೇ ಕಾರ್ಯಕ್ರಮದಲ್ಲಿ ಕಾಣಿಸಕೊಂಡ ಮಾಜಿ ಅತ್ತೆ, ಸೊಸೆ – ಸಮಂತಾ ಮಾತಿಗೆ ಅಮಲಾ ಚಪ್ಪಾಳೆ
ಕರ್ನಾಟಕದಲ್ಲಿ ಅನೇಕ ಪ್ರತಿಭಾವಂತ ಮತ್ತು ಜನಪ್ರಿಯ ಕನ್ನಡ ನಟಿಯರು ಇದ್ದಾರೆ. ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿದರೆ, ಕನ್ನಡಿಗರ ಮನಸ್ಸಿಗೆ ಹತ್ತಿರವಾಗುವುದರ ಜೊತೆಗೆ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡಬಹುದಾಗಿತ್ತು. ಆದರೆ ಕರ್ನಾಟಕ ಸರ್ಕಾರ ಮತ್ತು ಮೈಸೂರು ಸ್ಯಾಂಡಲ್ ಕಂಪನಿಯು ಕನ್ನಡ ನಟಿಯರನ್ನು ಕಡೆಗಣಿಸಿ ಬಾಲಿವುಡ್ ನಟಿಯನ್ನು ಆಯ್ಕೆ ಮಾಡಿರುವುದು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತಿದೆ. ಕರ್ನಾಟಕದ ಸಾಂಸ್ಕೃತಿಕ ಗುರುತನ್ನು ಪ್ರತಿನಿಧಿಸುವ ಕಂಪನಿಯು ಸ್ಥಳೀಯ ಪ್ರತಿಭೆಗಳಿಗೆ ಮೊದಲ ಆದ್ಯತೆ ನೀಡಬೇಕಿತ್ತು ಎಂದು ಹೇಳಿದ್ದಾರೆ.
ಮೈಸೂರು ಸ್ಯಾಂಡಲ್ನ ಪ್ರಾಥಮಿಕ ಗ್ರಾಹಕರು ಕರ್ನಾಟಕದ ಕನ್ನಡಿಗರಾಗಿದ್ದಾರೆ. ಕನ್ನಡಿಗರಿಗೆ ತಮ್ಮ ಸಂಸ್ಕೃತಿ ಮತ್ತು ಭಾಷೆಯೊಂದಿಗೆ ಸಾವಯವ ಸಂಬಂಧವಿರುವ ಕನ್ನಡ ನಟಿಯರೊಂದಿಗೆ ಬ್ರಾಂಡ್ ಅನ್ನು ಬೆಳೆಸುವುದು ಸಹಜವಾಗಿ ಪರಿಣಾಮಕಾರಿಯಾಗಿರುತ್ತದೆ. ಆದರೆ ತಮನ್ನಾ ಅವರಂತಹ ಬಾಲಿವುಡ್ ನಟಿಯನ್ನು ಆಯ್ಕೆ ಮಾಡುವ ಮೂಲಕ ಕಂಪನಿಯು ಕನ್ನಡಿಗರ ಭಾವನೆಗಳಿಗೆ ಮತ್ತು ಸ್ಥಳೀಯ ಮಾರುಕಟ್ಟೆಯ ಸಂವೇದನೆಗೆ ಗೌರವ ನೀಡದಿರುವುದು ಆಕ್ಷೇಪಾರ್ಹವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೆನಿಶಾಗೆ ಕೊಲೆ ಬೆದರಿಕೆ – ಆರತಿ ಸಮಸ್ಯೆಗೆ ನಾನು ಕಾರಣ ಆಗಿದ್ರೆ ಕೋರ್ಟ್ ಮುಂದೆ ನಿಲ್ಲಿಸಿ ಎಂದ ಗಾಯಕಿ
ತಮನ್ನಾ ಕರ್ನಾಟಕದ ಸಂಸ್ಕೃತಿ, ಭಾಷೆ, ಅಥವಾ ಮೈಸೂರು ಸ್ಯಾಂಡಲ್ನ ಇತಿಹಾಸದೊಂದಿಗೆ ಯಾವುದೇ ನೇರ ಸಂಬಂಧ ಹೊಂದಿಲ್ಲ. ಇಂತಹ ಸ್ಥಿತಿಯಲ್ಲಿ ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆ ಮಾಡುವುದು ಸಂಪೂರ್ಣವಾಗಿ ಅಪ್ರಸ್ತುತವಾಗಿದೆ. ಹಿಂದಿ ಚಿತ್ರರಂಗದ ನಟಿಯರನ್ನು ಆಯ್ಕೆ ಮಾಡುವ ಮೂಲಕ ಕರ್ನಾಟಕದ ಸ್ಥಳೀಯ ಸಂಸ್ಕೃತಿಯ ಮೇಲೆ ಹಿಂದಿ ಸಂಸ್ಕೃತಿಯನ್ನು ಹೇರಲು ಪ್ರಯತ್ನಿಸುವುದು ಕರ್ನಾಟಕ ರಕ್ಷಣಾ ವೇದಿಕೆಗೆ ಸ್ವೀಕಾರಾರ್ಹವಲ್ಲ. ಮೈಸೂರು ಸ್ಯಾಂಡಲ್ನಂತಹ ಕರ್ನಾಟಕದ ಐತಿಹಾಸಿಕ ಬ್ರಾಂಡ್ ಕನ್ನಡಿಗರ ಗುರುತನ್ನು ಪ್ರತಿನಿಧಿಸುವ ವ್ಯಕ್ತಿಯನ್ನೇ ಆಯ್ಕೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: 2,200 ಕೋಟಿ ರೂ. ಭ್ರಷ್ಟಾಚಾರ ಕೇಸ್ – ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ವಿರುದ್ಧ ಸಿಬಿಐ ಚಾರ್ಜ್ಶೀಟ್ ಸಲ್ಲಿಕೆ
ಸರ್ಕಾರ ಕೂಡಲೇ ತಮನ್ನಾ ಅವರ ಬ್ರಾಂಡ್ ಅಂಬಾಸಿಡರ್ ನೇಮಕವನ್ನು ತಕ್ಷಣವೇ ರದ್ದುಗೊಳಿಸಬೇಕು. ಇದರ ಬ್ರಾಂಡ್ ಅಂಬಾಸಿಡರ್ ಆಗಿ ಕನ್ನಡ ನಟಿಯರನ್ನು ಆಯ್ಕೆ ಮಾಡಬೇಕು. ಕರ್ನಾಟಕ ಸರ್ಕಾರವು 6.20 ಕೋಟಿ ರೂ. ವೆಚ್ಚದ ಬಗ್ಗೆ ಸಾರ್ವಜನಿಕವಾಗಿ ಸ್ಪಷ್ಟನೆ ನೀಡಬೇಕು ಮತ್ತು ಈ ಹಣವನ್ನು ಕರ್ನಾಟಕದ ಜನರ ಒಳಿತಿಗಾಗಿ ಬಳಸಬೇಕು. ಭವಿಷ್ಯದಲ್ಲಿ ಸ್ಥಳೀಯ ಸಂಸ್ಕೃತಿ ಮತ್ತು ಭಾಷೆಗೆ ಗೌರವ ನೀಡುವಂತಹ ನಿರ್ಧಾರಗಳನ್ನು ಮಾತ್ರ ತೆಗೆದುಕೊಳ್ಳುವಂತೆ ಖಾತರಿ ನೀಡಬೇಕು ಎಂದು ಹೇಳಿದ್ದಾರೆ.
ಈ ನಿರ್ಧಾರವನ್ನು ತಕ್ಷಣವೇ ಹಿಂಪಡೆಯದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆಯು ತೀವ್ರ ಪ್ರತಿಭಟನೆಯನ್ನು ಆಯೋಜಿಸಲಿದೆ. ಕರ್ನಾಟಕ ಸರ್ಕಾರ ಮತ್ತು ಮೈಸೂರು ಸ್ಯಾಂಡಲ್ ಸೋಪ್ಸ್ ಕಂಪನಿಯು ಕನ್ನಡಿಗರ ಭಾವನೆಗಳಿಗೆ ಮನ್ನಣೆ ನೀಡಿ, ಸ್ಥಳೀಯ ಪ್ರತಿಭೆಗಳಿಗೆ ಆದ್ಯತೆ ನೀಡುವಂತೆ ಒತ್ತಾಯಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.