ನವದೆಹಲಿ: ಯುದ್ಧಪೀಡಿತ ಉಕ್ರೇನ್ನಿಂದ ವಿಶೇಷ ವಿಮಾನಗಳ ಮೂಲಕ ಭಾರತಕ್ಕೆ ವಾಪಸ್ಸಾದ ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಭೆ ನಡೆಸಿದ್ದಾರೆ.
ಇದೇ ವೇಳೆ ವೈದ್ಯಕೀಯ ಶಿಕ್ಷಣ ನೀತಿ ವಿಚಾರವಾಗಿ ಹಿಂದಿನ ಸರ್ಕಾರಗಳ ವಿರುದ್ಧ ಪ್ರಧಾನಿ ಮೋದಿ ಹರಿಹಾಯ್ದಿದ್ದಾರೆ. ಹಿಂದಿನ ಸರ್ಕಾರಗಳ ನೀತಿಗಳ ವೈಫಲ್ಯದಿಂದಾಗಿ ವೈದ್ಯಕೀಯ ಶಿಕ್ಷಣಕ್ಕಾಗಿ ಭಾರತೀಯ ವಿದ್ಯಾರ್ಥಿಗಳು ಅಪಾರ ಸಂಖ್ಯೆಯಲ್ಲಿ ವಿದೇಶಗಳಿಗೆ ಹೋಗುವಂತಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಭಾರತದಲ್ಲಿ ವೈದ್ಯಕೀಯ ಶಿಕ್ಷಣ ನೀತಿಗಳಲ್ಲಿ ಸುಧಾರಣೆ ತರುವುದಾಗಿ ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಉಕ್ರೇನ್ನಿಂದ ರಕ್ಷಿಸುವಂತೆ ವೀಡಿಯೋ ಮಾಡಿ ಸಂಕಷ್ಟಕ್ಕೆ ಸಿಲುಕಿದ ಗ್ರಾ.ಪಂ. ಅಧ್ಯಕ್ಷೆ
ಉಕ್ರೇನ್ನಿಂದ ಸ್ಥಳಾಂತರಿಸಲು ಸೂಕ್ತ ವ್ಯವಸ್ಥೆ ಮಾಡಿಲ್ಲ ಎಂದು ಭಾರತೀಯ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ ಈ ವಿಚಾರವನ್ನೂ ಉಲ್ಲೇಖಿಸಿದ ಪ್ರಧಾನಿ ಮೋದಿ, ಬಿಕ್ಕಟ್ಟಿನ ಸನ್ನಿವೇಶದಲ್ಲಿ ಆಕ್ರೋಶಕ್ಕೆ ಒಳಗಾಗುವುದು ಸಹಜ ಎಂದು ತಿಳಿಸಿದ್ದಾರೆ.
ಚಿಕ್ಕ ವಯಸ್ಸಿನಲ್ಲೇ ನೀವು ಸಂಕಷ್ಟದ ಸಂದರ್ಭಗಳನ್ನು ಅನುಭವಿಸಿದ್ದೀರಿ ಎಂದು ವಿದ್ಯಾರ್ಥಿಗಳ ಬಗ್ಗೆ ಪ್ರಧಾನಿ ಮೋದಿ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ. ಇಂತಹ ಸಂದಿಗ್ಧತೆಗಳಿಗೆ ಬಲಿಷ್ಠ ಭಾರತವೇ ಉತ್ತರವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಾಹ್ಯಾಕಾಶ ರಾಕೆಟ್ನಿಂದ ಅಮೆರಿಕ, ಜಪಾನ್ ಧ್ವಜ ತೆಗೆದು ಭಾರತ ಧ್ವಜ ಉಳಿಸಿಕೊಂಡ ರಷ್ಯಾ- Video Viral
ಹಿಂದಿನ ಸರ್ಕಾರಗಳ ಅವಧಿಯಲ್ಲಿ ವೈದ್ಯಕೀಯ ಶಿಕ್ಷಣ ನೀತಿಗಳು ಸರಿಯಾಗಿದ್ದರೆ, ನೀವು ಶಿಕ್ಷಣಕ್ಕಾಗಿ ವಿದೇಶಗಳಿಗೆ ಹೋಗುವ ಅಗತ್ಯವಿರುತ್ತಿರಲಿಲ್ಲ. ಹಿಂದಿನ ಎಲ್ಲಾ ಲೋಪಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಾರ್ಯನಿರ್ವಹಿಸಲಿದೆ ಎಂದು ವಿದ್ಯಾರ್ಥಿಗಳಿಗೆ ಮೋದಿ ಭರವಸೆ ನೀಡಿದ್ದಾರೆ.
ಈ ಹಿಂದೆ 300, 400 ಇದ್ದ ವೈದ್ಯಕೀಯ ಕಾಲೇಜುಗಳ ಸಂಖ್ಯೆಯನ್ನು ನಮ್ಮ ಅವಧಿಯಲ್ಲಿ 700ಕ್ಕೆ ಹೆಚ್ಚಿಸಲಾಗಿದೆ. ಆ ಮೂಲಕ 80,000ದಿಂದ 90,000 ಇದ್ದ ವೈದ್ಯಕೀಯ ಸೀಟ್ಗಳ ಸಂಖ್ಯೆಯನ್ನು 1.5 ಲಕ್ಷಕ್ಕೆ ಏರಿಸಲಾಗಿದೆ ಎಂದು ಮೋದಿ ತಿಳಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಈ ಸಲಹೆ ಪಾಲಿಸಿ- ಕೇಂದ್ರ ವಿದೇಶಾಂಗ ಇಲಾಖೆ
ಪ್ರತಿ ಜಿಲ್ಲೆಯೂ ಒಂದೊಂದು ವೈದ್ಯಕೀಯ ಕಾಲೇಜನ್ನು ಸ್ಥಾಪಿಸುವ ನಿಟ್ಟಿನಲ್ಲಿ ನಾವು ಶ್ರಮವಹಿಸುತ್ತೇವೆ. ಕಳೆದ 70 ವರ್ಷಗಳಿಗೆ ಹೋಲಿಸಿದರೆ ನಮ್ಮ 10 ವರ್ಷದ ಆಡಳಿತಾವಧಿಯಲ್ಲಿ ಹೆಚ್ಚಿನ ವೈದ್ಯರು ಹೊರಹೊಮ್ಮುವಂತೆ ಮಾಡುತ್ತೇವೆ ಎಂದು ಮೋದಿ ಹೇಳಿದ್ದಾರೆ.