ನವದೆಹಲಿ: ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರು ಕೇಂದ್ರ ಶಿಕ್ಷಣ ಸಚಿವ ಹುದ್ದೆಗೆ ರಾಜೀನಾಮೆ ನೀಡುವ ನಿರ್ಧಾರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಶ್ಲಾಘಿಸಿದ್ದಾರೆ. ಅವರ ರಾಜೀನಾಮೆ ವೈಯಕ್ತಿಕ ಮಹತ್ವಾಕಾಂಕ್ಷೆಗಿಂತ ರಾಷ್ಟ್ರೀಯ ಹಿತಾಸಕ್ತಿಯನ್ನು ಕಾಪಾಡುವ ಮಾರ್ಗ ಎಂದು ಬಣ್ಣಿಸಿದ್ದಾರೆ.
X ನಲ್ಲಿ ಈ ಬಗ್ಗೆ ಅವರು ಪೋಸ್ಟ್ ಮಾಡಿದ್ದಾರೆ. ಪೋಸ್ಟ್ನಲ್ಲಿ ಭಾರತೀಯ ಜನತಾ ಪಕ್ಷದ (BJP) ಕಾರ್ಯಕರ್ತರಿಗೆ ಹುದ್ದೆಗಿಂತ ರಾಷ್ಟ್ರ, ಯುವಕರು ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿ ಮುಖ್ಯ. ಧರ್ಮೇಂದ್ರ ಪ್ರಧಾನ್ ಅವರ ಹುದ್ದೆಗೆ ರಾಜೀನಾಮೆ ನೀಡಿರುವುದು ಈ ತತ್ವದ ಪ್ರತಿಬಿಂಬವಾಗಿದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ನೇಮಕ
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ದೇಶದ ಯುವಕರ ಭಾವನೆಗಳನ್ನು ಗೌರವಿಸುತ್ತದೆ. ಅಲ್ಲದೇ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಸುಧಾರಣೆಗಳಿಗೆ ಬದ್ಧವಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಲು ಮೋದಿಯವರು ತೆಗೆದುಕೊಂಡ ನಿರ್ಧಾರಗಳನ್ನು ಅವರು ಶ್ಲಾಘಿಸಿದ್ದಾರೆ. ಈ ಕ್ರಮಗಳು ರಾಷ್ಟ್ರೀಯ ಅರ್ಹತಾ-ಪ್ರವೇಶ ಪರೀಕ್ಷೆ (NEET) ನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನ್ಯಾಯವನ್ನು ನೀಡುತ್ತವೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಯ ಪರಿಣಾಮಕಾರಿ ಅನುಷ್ಠಾನ, ಪಿಎಂ ಶ್ರೀ ಶಾಲೆಗಳ ವಿಸ್ತರಣೆ, ಡಿಜಿಟಲ್ ಶಿಕ್ಷಣದ ಉತ್ತೇಜನ, ಕೌಶಲ್ಯ ಅಭಿವೃದ್ಧಿಯನ್ನು ಬಲಪಡಿಸುವುದು ಮತ್ತು ಉದ್ಯಮ-ಶೈಕ್ಷಣಿಕ ಸಮನ್ವಯವನ್ನು ಹೆಚ್ಚಿಸುವಲ್ಲಿ ಪ್ರಧಾನ್ ಅವರ ಶ್ರಮ ಗಣನೀಯವಾದದ್ದು ಎಂದು ಅವರು ಸ್ಮರಿಸಿಕೊಂಡಿದ್ದಾರೆ.
ಪರೀಕ್ಷೆಗಳನ್ನು ಹೆಚ್ಚು ಸಮಗ್ರ ಮತ್ತು ವಿದ್ಯಾರ್ಥಿ ಕೇಂದ್ರಿತವಾಗಿಸಲು ಪ್ರಧಾನ್ ಅವರ ಪ್ರಯತ್ನಗಳು ಗಮನಾರ್ಹವಾಗಿವೆ. ಅವರ ಅಧಿಕಾರಾವಧಿಯು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಅವರ ಸಮರ್ಪಣೆಗೆ ಸಾಕ್ಷಿಯಾಗಿದೆ ಎಂದು ಪೋಸ್ಟ್ನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ, ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುತ್ತೇನೆ: ಜೋಶಿ
