ಅಶ್ವಯುಜ ಶುಕ್ಲ ಪಾಡ್ಯಮಿಯಿಂದ ದಶಮಿಯತನಕ ಆಚರಿಸಲ್ಪಡುವ ಪವಿತ್ರ ಮಹಿಮೆಯಿಂದ ಕೂಡಿದ ಹಬ್ಬವೇ ನವರಾತ್ರಿ. ಒಂಬತ್ತು ರಾತ್ರಿಗಳ ಆಚರಿಸಲ್ಪಡುವ ಹಬ್ಬವಾಗಿರುವುದರಿಂದ ಇದಕ್ಕೆ ನವರಾತ್ರಿ ಎಂದು ಹೆಸರು ಬಂದಿದೆ.
ನವರಾತ್ರಿ ಹಬ್ಬದ ಒಂಭತ್ತು ದಿನವೂ ಶಕ್ತಿ ದೇವಿ ಜಗನ್ಮಾತೆಯನ್ನು ಆರಾಧಿಸಲಾಗುತ್ತದೆ. ನವರಾತ್ರಿಯ ಮೊದಲ ಮೂರು ದಿನ ಮಹಾಕಾಳಿ ಅಥವಾ ದುರ್ಗೆಯನ್ನೂ, ನಂತರ ಮೂರು ದಿನ ಮಹಾಲಕ್ಷ್ಮಿಯನ್ನೂ, ಕೊನೆಯ ಮೂರು ದಿನ ಮಹಾ ಸರಸ್ವತಿಯನ್ನು ಪೂಜಿಸಲಾಗುತ್ತಿದೆ. ಮಹಾಕಾಳಿ ತಾಮಸ ಗುಣಕ್ಕೂ, ಮಹಾಲಕ್ಷ್ಮಿ ರಾಜಸಗುಣಕ್ಕೂ, ಮಹಾಸರಸ್ವತಿ ಸಾತ್ವಿಕ ಗುಣದ ಸಂಕೇತ. ನವರಾತ್ರಿ ಆಚರಿಸುವ ಭಕ್ತರು ತಾಮಸದಿದ ರಾಜಸದೆಡೆಗೆ, ರಾಜಸದಿಂದ ಸಾತ್ವಿಕದೆಡೆಗೆ ಬಂದಾಗ ಹಬ್ಬ ಹೆಚ್ಚು ಅರ್ಥಪೂರ್ಣವಾಗುತ್ತದೆ.
ನವರಾತ್ರಿ ವೇಳೆ ದೇವಿಯ ಪೂಜೆ, ದೇವಿ ಭಾಗವತ, ದುರ್ಗ ಸಪ್ತಶತೀ, ಲಲಿತಾ ಸಹಸ್ರನಾಮ ಪವಿತ್ರ ಸ್ತೋತ್ರಗಳ ಮತ್ತು ಮಂತ್ರಗಳ ಪಠಣ ಹಾಗೂ ಪಾರಾಯಣ ನಡೆಯುತ್ತದೆ. ನವದುರ್ಗೆಯರ ಆರಾಧನೆಯ ಹಿನ್ನೆಲೆಯಲ್ಲಿ ಇಂದಿನಿಂದ ಪ್ರತಿದಿನ ದೇವಿಯ ಒಂದೊಂದು ಅವತಾರದ ವಿವರಣೆಯನ್ನು ಪಬ್ಲಿಕ್ ಟಿವಿ ಪ್ರಕಟಿಸಲಿದೆ.
ಒಂಬತ್ತು ದುರ್ಗೆಯರು:
1. ಶೈಲಪುತ್ರಿ
2. ಬ್ರಹ್ಮಚಾರಿಣಿ
3. ಚಂದ್ರಘಂಟಾ
4. ಕೂಷ್ಮಾಂಡಾ
5. ಸ್ಕಂದ ಮಾತೆ
6. ಕಾತ್ಯಾಯನಿ
7. ಕಾಳರಾತ್ರಿ
8. ಮಹಾಗೌರಿ
9. ಸಿದ್ಧಿದಾತ್ರಿ
ಪರ್ವತ ರಾಜ ಹಿಮವಂತನ ಪುತ್ರಿಯೇ ಶೈಲಪುತ್ರಿ. ದಸರಾ ದಿನ ಈ ದೇವಿಯನ್ನು ಮೊದಲಿಗೆ ಆರಾಧಿಸುತ್ತಾರೆ. ಈ ದೇವಿಯನ್ನು ಆರಾಧಿಸಲು ಒಂದು ಕಥೆಯಿದೆ. ಪ್ರಜಾಪತಿ ಬಹ್ಮನ ಮಗನಾದ ದಕ್ಷ ತನ್ನ 27 ಮಂದಿ ಪುತ್ರಿಯರನ್ನು ಚಂದ್ರನಿಗೆ ಮದುವೆ ಮಾಡಿ ಕೊಟ್ಟಿದ್ದ. ಉಳಿದವರಲ್ಲಿ ಒಬ್ಬಳಾದ ದಾಕ್ಷಾಯಿಣಿ ಶಿವನನ್ನು ವರಿಸಿದ್ದಳು.
ದಕ್ಷ ಮಹಾರಾಜನಿಗೆ ಅಳಿಯ ಶಿವನನ್ನು ಕಂಡರೆ ಆಗುತ್ತಿರಲಿಲ್ಲ. ಹಿಮಾವೃತವಾಗಿರುವ ಕೈಲಾಸ ಅಥವಾ ಸ್ಮಶಾನದಲ್ಲಿ ವಾಸ, ಕುತ್ತಿಗೆಗೆ ನಾಗರಹಾವು ಇರುವ ಶಿವನಿಗಿಂತ ನನ್ನ ಚೆಲುವೆಯಾಗಿರುವ ಮಗಳಿಗೆ ಉತ್ತಮನಾಗಿರುವ ವರ ಸಿಗುತ್ತಿದ್ದ ಎಂದು ಹೇಳಿಕೊಳ್ಳುತ್ತಿದ್ದ.
ಶಿವನ ವಿಚಾರದಲ್ಲಿ ಅಸಮಾಧಾನವನ್ನು ಹೊರಹಾಕುತ್ತಿದ್ದ ದಕ್ಷ ಒಂದು ದೊಡ್ಡ ಯಜ್ಞವನ್ನು ಆಯೋಜಿಸಿದ್ದ. ಈ ಯಜ್ಞಕ್ಕೆ ಆಗಮಿಸುವಂತೆ ಎಲ್ಲ ಮಕ್ಕಳಿಗೆ, ಬಂಧು ಮಿತ್ರರಿಗೆ ಆಹ್ವಾನ ನೀಡಿದ್ದ. ಈ ಸಮಾರಂಭಕ್ಕೆ ದಕ್ಷ ಪ್ರವೇಶಿಸುತ್ತಿದ್ದಂತೆ ಬ್ರಹ್ಮ ಮತ್ತು ಶಿವ ಬಿಟ್ಟು ಉಳಿದ ಎಲ್ಲರೂ ಎದ್ದು ನಿಂತು ಗೌರವ ಸೂಚಿಸಿದರು. ಈ ವೇಳೆ ದಕ್ಷ, “ಶಿವ ದೇವರು ಆಗಿರಬಹುದು. ಆದರೆ ಅವನಿಗೆ ನಾನು ಮಾವ. ಸಂಬಂಧದಲ್ಲಿ ನಾನು ಆತನಿಗಿಂತ ದೊಡ್ಡವ. ಶಿವ ಎದ್ದು ನಿಂತು ನನಗೆ ಗೌರವ ನೀಡಬಹುದಿತ್ತು. ಈ ರೀತಿ ಅಗೌರವ ಸಲ್ಲಿಸಿದ್ದು ಸರಿಯಲ್ಲ” ಎಂದು ಮನಸ್ಸಿನಲ್ಲೇ ಕಹಿಯನ್ನು ಅನುಭವಿಸಿದ.
ಕೆಲ ಸಮಯದ ಬಳಿಕ ದಕ್ಷ ಮತ್ತೊಂದು ಯಜ್ಞವನ್ನು ಆಯೋಜಿಸಿದ. ಈ ಬಾರಿ ಮಗಳು ದಾಕ್ಷಾಯಿಣಿ ಮತ್ತು ಶಿವನಿಗೆ ಆಹ್ವಾನ ನೀಡದೇ ಎಲ್ಲ ಮಕ್ಕಳಿಗೆ ಆಹ್ವಾನ ನೀಡಿದ್ದ. ತಂದೆ ಯಾಗವನ್ನು ಆಯೋಜಿಸಿದ ವಿಚಾರ ತಿಳಿದು ಮಗಳು ಶಿವನ ಜೊತೆ,”ನಾವು ಈ ಕಾರ್ಯಕ್ರಮದಲ್ಲಿ ಭಾಗಿಯಾಗೋಣವೇ” ಎಂದು ಕೇಳುತ್ತಾಳೆ. ಇದಕ್ಕೆ ಶಿವ,”ಯಾವುದೇ ಶುಭ ಸಮಾರಂಭಕ್ಕೆ ಆಹ್ವಾನ ಇಲ್ಲದೇ ಹೋಗಬಾರದು. ತವರು ಮನೆ ಸೇರಿದಂತೆ ಎಲ್ಲಿಗೂ ಹೋಗಬಾರದು” ಎಂದು ತಿಳಿಹೇಳುತ್ತಾನೆ. ಇದಕ್ಕೆ ದಾಕ್ಷಾಯಿಣಿ,”ಕೆಲಸದ ಒತ್ತಡದಲ್ಲಿ ಯಾವುದೋ ಅನಿವಾರ್ಯ ಕಾರಣದಿಂದಾಗಿ ತಂದೆಗೆ ಮರೆತುಹೋಗಿರಬಹುದು. ತಂದೆ ಮನೆಗೆ ಹೋಗಲು ಮಗಳಿಗೆ ಆಹ್ವಾನ ಯಾಕೆ ಬೇಕು”ಎಂದು ಪ್ರಶ್ನಿಸುತ್ತಾಳೆ. ತೆರಳುವುದು ಬೇಡ ಎಂದು ಹೇಳಿದರೂ ಪತ್ನಿಯ ಹಠಕ್ಕೆ ಕರಗಿ ಶಿವ ತಂದೆಯ ಮನೆಗೆ ಹೋಗಲು ಅನುಮತಿ ನೀಡುತ್ತಾನೆ.
ಪತಿಯಿಂದ ಅನುಮತಿ ಸಿಕ್ಕಿದ್ದೆ ತಡ ದಾಕ್ಷಾಯಿಣಿ ಶಿವನ ವಾಹನ ನಂದಿಯನ್ನೇರಿ, ಕೈಗೆ ಸಿಕ್ಕ ಉಡುಗೊರೆಯನ್ನು ಹಿಡಿದುಕೊಂಡು ತಂದೆಯ ಯಜ್ಞ ಸಮಾರಂಭಕ್ಕೆ ತೆರಳುತ್ತಾಳೆ. ಮಗಳನ್ನು ನೋಡಿದ ಕೂಡಲೇ ದಕ್ಷ,”ನಾನು ನಿನಗೆ ಆಹ್ವಾನ ನೀಡಿಲ್ಲ. ಬಂದಿದ್ದು ಯಾಕೆ? ನಿನ್ನ ಪತಿಯನ್ನೂ ಕರೆದುಕೊಂಡು ಬಂದಿದ್ದೀಯಾ” ಎಂದು ಪ್ರಶ್ನೆ ಮಾಡುತ್ತಾನೆ. ತಂದೆ ಮನ ನೋಯಿಸಿದರೂ ಆ ನೋವನ್ನು ತಡೆದುಕೊಳ್ಳುತ್ತಾಳೆ. ಯಜ್ಞ ಆರಂಭವಾದ ಬಳಿಕವೂ ದಕ್ಷ ಮತ್ತೆ ಶಿವನ ವಿರುದ್ಧ ಕಿಡಿಕಾರುತ್ತಾನೆ.”ನೀನು ಪತಿಯನ್ನು ಸೇರು. ಇಲ್ಲಿಂದ ಹೊರಟು ಹೋಗು” ಎಂದು ಅವಮಾನಿಸುತ್ತಾನೆ. ಈ ಎಲ್ಲರ ಮುಂದೆ ಆದ ಅವಮಾನವನ್ನು ಸಹಿಸದ ದಾಕ್ಷಾಯಿಣಿ ಶಿವನನ್ನು ಧ್ಯಾನಿಸುತ್ತಾ,”ಪತಿಯೇ ನಾನು ನಿಮ್ಮ ಮಾತನ್ನು ಕೇಳಿ ಇಲ್ಲಿಗೆ ಬಾರಬಾರದಿತ್ತು. ತಂದೆ ನಿಮಗೆ ಮಾಡಿದ ಈ ಅವಮಾನವನ್ನು ನಾನು ಸಹಿಸಲಾರೆ” ಎಂದು ಪ್ರಾರ್ಥಿಸಿ ಮುಂದಿದ್ದ ಯಜ್ಞ ಕುಂಡಕ್ಕೆ ಹಾರಿ ಪ್ರಾಣತ್ಯಾಗ ಮಾಡುತ್ತಾಳೆ.
ಪತಿಯನ್ನು ಅವಮಾನಿಸಿದ್ದನ್ನು ಸಹಿಸದೆ ಯಜ್ಞ ಕುಂಡಕ್ಕೆ ಹಾರಿಕೊಂಡಿದ್ದ ದಾಕ್ಷಾಯಿಣಿಗೆ ಅಂದಿನಿಂದ `ಸತಿ’ ಎಂಬ ಹೆಸರು ಬಂತು. ಸತಿ ಮುಂದಿನ ಜನ್ಮದಲ್ಲಿ ಹಿಮವಂತನ ಪುತ್ರಿಯಾಗಿ ಜನಿಸಿ ‘ಶೈಲಪುತ್ರಿ’ ಎಂದು ಹೆಸರುವಾಸಿಯಾಗುತ್ತಾಳೆ. ಮತ್ತೆ ಶಿವನ ಮಡದಿಯಾಗುತ್ತಾಳೆ. ಮದುವೆಯಾದ ಬಳಿಕ ಶಿವ ಪತ್ನಿಗೆ ವರ್ಷದಲ್ಲಿ 10 ದಿನ ಮಾತ್ರ ತವರು ಮನೆಗೆ ತೆರಳಲು ಅನುಮತಿ ನೀಡುತ್ತಾನೆ. ಅದರ ಸೂಚನೆ ಏನೋ ಎಂಬಂತೆ ಈಗಲೂ ದಸರಾ ಸಮಯದಲ್ಲಿ ಮದುವೆಯಾದ ಹೆಣ್ಣುಮಕ್ಕಳನ್ನು ತವರಿಗೆ ಆಮಂತ್ರಿಸಿ ಗೌರವಿಸುವ ಸಂಪ್ರದಾಯ ನಡೆಯುತ್ತದೆ. ಶೈಲಪುತ್ರಿ ವೃಷಭ ವಾಹನದ ಮೇಲೆ ಕುಳಿತು, ಬಲಗೈಯಲ್ಲಿ ತ್ರಿಶೂಲ ಮತ್ತು ಎಡಗೈಯಲ್ಲಿ ಕಮಲಪುಷ್ಪ ಹಿಡಿದುಕೊಂಡಿರುತ್ತಾಳೆ.
ದಸರಾ ಸುದ್ದಿಗಳು:
1. ನವರಾತ್ರಿಯ ಕೊನೆಯ ದಿನ ಆಚರಿಸುವ ಆಯುಧ ಪೂಜೆಯ ಮಹತ್ವವೇನು?
2. ಮೈಸೂರು ದಸರಾ: ರತ್ನ ಖಚಿತ ಸಿಂಹಾಸನದ ಜೋಡಣೆ ಕಾರ್ಯ ಆರಂಭ
3. ದಸರಾಗೆ ನಿಮ್ಮ ಮನೆಯಲ್ಲಿರಲಿ ಮೈಸೂರು ಪಾಕ್
4. ಮೈಸೂರು ಪಾಕ್ ಕಂಡು ಹಿಡಿದಿದ್ದು ಯಾರು? ಇಲ್ಲಿದೆ ಮಾಹಿತಿ
5. ಗೊಂಬೆ ಹಬ್ಬದ ಸಿದ್ಧತೆ ಹೀಗಿರಲಿ
6. ದಸರಾ ಹಬ್ಬಕ್ಕೆ ಸ್ಟೈಲಿಶ್ ಆಗಿ ಕಾಣ್ಬೇಕಾ ಹೀಗಿರಲಿ ನಿಮ್ಮ ಸೀರೆ ಆಯ್ಕೆ
7. ನವರಾತ್ರಿ ಸಂಭ್ರಮ – 9 ದಿನ ಯಾವ ಬಣ್ಣದ ಉಡುಪು ಧರಿಸಿ ಪೂಜಿಸಿದ್ರೆ ಉತ್ತಮ? ಇಲ್ಲಿದೆ ವಿವರ
8.ದೇಶದ ವಿವಿಧ ರಾಜ್ಯಗಳಲ್ಲಿ ದಸರಾ ಹೇಗೆ ಆಚರಿಸುತ್ತಾರೆ? – ಇಲ್ಲಿದೆ ಮಾಹಿತಿ
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv