ಕಠ್ಮಂಡು: ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಜಲನಾಥ್ ಖನಾಲ್ (Jhalanath Khanal) ಅವರ ಪತ್ನಿ ರಾಜ್ಯಲಕ್ಷ್ಮಿ ಚಿತ್ರಾಕರ್ (Rajyalaxmi Chitrakar) ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾರೆ.
ಜನರಲ್-ಝಡ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿದೆ. ಪ್ರತಿಭಟನಾಕಾರರು (Gen Z protestors) ರಾಜಕೀಯ ನಾಯಕರನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ. 2ನೇ ದಿನವೂ ಪ್ರತಿಭಟನೆ ಮುಂದುವರಿದಿದ್ದು, ಸಂಸತ್ ಭವನ, ಸುಪ್ರೀಂ ಕೋರ್ಟ್, ಅಧಿಕೃತ ಸರ್ಕಾರಿ ಕಟ್ಟಡಗಳು ಮಾತ್ರವಲ್ಲದೇ ಪ್ರಮುಖ ನಾಯಕರ ಮನೆಗಳಿಗೆ ಬೆಂಕಿ ಹಚ್ಚಿ, ವಿಧ್ವಂಸಕ ಕೃತ್ಯಗಳನ್ನ ಎಸಗಿದ್ದಾರೆ. ಇದನ್ನೂ ಓದಿ: ನೇಪಾಳದಲ್ಲಿ ಅಲ್ಲೋಲ ಕಲ್ಲೋಲ – ಹಣಕಾಸು ಸಚಿವನನ್ನ ಬೀದಿಯಲ್ಲಿ ಅಟ್ಟಾಡಿಸಿ ಹೊಡೆದ ಉದ್ರಿಕ್ತರು

ಇದರಿಂದಾಗಿ ನೇಪಾಳದ ಮಾಜಿ ಪ್ರಧಾನಿ ಪುಷ್ಪ ಕಮಲ್ ದಹಲ್ ಅಲಿಯಾಸ್ ಪ್ರಚಂಡ, ಶೇರ್ ಬಹದ್ದೂರ್ ದೇವುಬಾ ಮತ್ತು ಜಲನಾಥ್ ಖಾನಲ್ ಅವರ ನಿವಾಸಗಳನ್ನು ಹಾನಿಗೊಳಿಸಿದ್ದಾರೆ. ಜಲನಾಥ್ ಮನೆಗೆ ಬೆಂಕಿ ಹಚ್ಚಿದ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ನೇಪಾಳದ ಮಾಜಿ ಪ್ರಥಮ ಮಹಿಳೆ ರಾಜ್ಯಲಕ್ಷ್ಮಿ ಚಿತ್ರಾಕರ್ ಸಾವನ್ನಪ್ಪಿದ್ದಾರೆ.
ಬೆಂಕಿ ಹಚ್ಚಿದಾಗ ರಾಜ್ಯಲಕ್ಷ್ಮಿ ಮನೆಯ ಒಳಗೆಯೇ ಇದ್ದರು. ಗಾಯಗೊಂಡಿದ್ದ ಅವರನ್ನ ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಸುಟ್ಟ ಗಾಯಗಳಿಂದ ತೀವ್ರವಾಗಿ ಬಳಲುತ್ತಿದ್ದ ಚಿತ್ರಾಕರ್ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ನೇಪಾಳದ ಏರ್ಪೋರ್ಟ್ ಬಳಿ ಹೊಗೆ ಕಂಡು ದೆಹಲಿಗೆ ವಾಪಸಾದ ವಿಮಾನ – ಏರ್ ಇಂಡಿಯಾ, ಇಂಡಿಗೋ ಹಾರಾಟ ರದ್ದು
ಪ್ರಧಾನಿ ಜೊತೆಗೆ ನಾಲ್ವರು ಸಚಿವರ ರಾಜೀನಾಮೆ
ಇಂದು ಮುಂಜಾನೆ ಉದ್ರಿಕ್ತಗೊಂಡ ಪ್ರತಿಭಟನಾಕಾರರು ಪ್ರಧಾನಿ ಕೆಪಿ ಶರ್ಮಾ ಓಲಿ ಮನೆಗೆ ನುಗ್ಗಿ ಬೆಂಕಿ ಹಚ್ಚಿದ್ದಾರೆ. ಈ ಬೆನ್ನಲ್ಲೇ ಪ್ರಧಾನಿ ಹುದ್ದೆಗೆ ಓಲಿ ರಾಜೀನಾಮೆ ನೀಡಿದ್ದಾರೆ. ಪ್ರಧಾನಿಗಳೊಂದಿಗೆ ನಾಲ್ವರು ಸಚಿವರೂ ರಾಜೀನಾಮೆ ನೀಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಇನ್ನೂ ಅತಿಯಾದ ಭ್ರಷ್ಟಾಚಾರ, ಸೋಷಿಯಲ್ ಮೀಡಿಯಾ ಮೇಲಿನ ನಿಷೇಧ ವಿರೋಧಿಸಿ ನೇಪಾಳದಾದ್ಯಂತ ಭುಗಿಲೆದ್ದಿರುವ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನೆಯಲ್ಲಿ ಕನಿಷ್ಠ 19 ಮಂದಿ ಸಾವನ್ನಪ್ಪಿದ್ದು, 300ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಇದನ್ನೂ ಓದಿ: ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ರಾಜೀನಾಮೆ
 


 
		 
		 
		 
		 
		
 
		 
		 
		 
		