ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದ್ಯಾಂತ ಪ್ರತಿಭಟನೆ ಕಾವು ಜೋರಾಗಿದೆ. ಉತ್ತರ ಪ್ರದೇಶದಲ್ಲಿ 15 ಮಂದಿ ಸಾವನ್ನಪ್ಪಿದ್ರೆ ರಾಜ್ಯದಲ್ಲಿ ಇಬ್ಬರು ಉಸಿರು ಚೆಲ್ಲಿದ್ದಾರೆ. ಪ್ರತಿಭಟನೆಗಳು ಇನ್ನು ಮುಕ್ತಾಯವಾಗಿಲ್ಲ ದೇಶದಲ್ಲಿ ಆತಂಕ ಪರಿಸ್ಥಿತಿ ನಿರ್ಮಾಣವಾಗಿದೆ.
ಈಗ ಪರಿಸ್ಥಿತಿ ತಣ್ಣಾಗಿಸುವ ನಿಟ್ಟಿನಲ್ಲಿ ಬಿಜೆಪಿ ನಾಯಕರು ದೇಶದ್ಯಾಂತ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. ಮುಂದಿನ ಹತ್ತು ದಿನಗಳ ಕಾಲ ರಾಜ್ಯವಾರು ಪ್ರಮುಖ ಜಿಲ್ಲೆಗಳಲ್ಲಿ ವಿಶೇಷ ಕ್ಯಾಂಪೇನ್ ಮಾಡಲು ನಿರ್ಧರಿಸಿಲಾಗಿದೆ. ಈ ಬಗ್ಗೆ ಇಂದು ದೆಹಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಜೆ.ಪಿ ನಡ್ಡಾ ನೇತೃತ್ವದಲ್ಲಿ ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆಸಲಾಯಿತು. ಸಭೆಯಲ್ಲಿ ಚರ್ಚೆ ಬಳಿಕ ದೇಶದ್ಯಾಂತ ಜಾಗೃತಿ ಮೂಡಿಸುವ ನಿರ್ಧಾರಕ್ಕೆ ಬಿಜೆಪಿ ನಾಯಕರು ಬಂದಿದ್ದಾರೆ.
ಈಗಾಗಲೇ ರಾಜ್ಯ ಬಿಜೆಪಿ ಘಟಕಗಳು ಕಾರ್ಯಕರ್ತರಿಗೆ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯಾಗಾರ ಆರಂಭಿಸಿದೆ. ಬಳಿಕ ಕಾರ್ಯಕರ್ತರ ಮೂಲಕ ದೇಶದ ಜನರ ಮನೆ ಬಾಗಿಲಿಗೆ ತೆರಳಿ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ.
ದೇಶದ ಪ್ರಮುಖ 250 ಪ್ರದೇಶಗಳಲ್ಲಿ ರ್ಯಾಲಿಗಳು, ಸುದ್ದಿಗೋಷ್ಠಿ ನಡೆಸುವ ಮೂಲಕ ಪೌರತ್ವ ಕಾಯ್ದೆ ಬಗ್ಗೆ ತಿಳುವಳಿಕೆ ಮೂಡಿಸಲು ಸಿದ್ಧತೆ ಮಾಡಿಕೊಂಡಿದ್ದು, ಈ ಮೂಲಕ ಮೂರು ಕೋಟಿ ಕುಟುಂಬಗಳನ್ನು ತಲುಪುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬೋಪೇಂದ್ರ ಯಾದವ್ ನವದೆಹಲಿಯಲ್ಲಿ ಹೇಳಿಕೆ ನೀಡಿದ್ದಾರೆ.