ಹುಬ್ಬಳ್ಳಿ: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ನೊಂದಿಗೆ ಯಾವುದೇ ಮೈತ್ರಿ ಇಲ್ಲವೆಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸದ್ಯ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ನೊಂದಿಗೆ ಯಾವುದೇ ಮೈತ್ರಿ ಇಲ್ಲವೆಂದು ತಿಳಿಸಿದ್ದಾರೆ. ಅಲ್ಲದೆ ಮೈತ್ರಿ ವಿಚಾರ ಜಿಲ್ಲಾ ಮಟ್ಟದ ನಾಯಕರಿಗೆ ಬಿಟ್ಟಿದ್ದು, ಈ ವಿಚಾರವಾಗಿ ಜಿಲ್ಲಾ ಮಟ್ಟದ ನಾಯಕರುಗಳ ಯಾವ ರೀತಿ ತೀರ್ಮಾನ ಕೈಗೊಳ್ಳುತ್ತಾರೋ ಹಾಗೆ ಮುಂದುವರೆಯುತ್ತೆ ಎಂದು ಹೇಳಿದರು.
ಲೋಕಸಭಾ ಮೈತ್ರಿ ವಿಚಾರವನ್ನು ಸಮನ್ವಯ ಸಮಿತಿಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಬಹುತೇಕ ಲೋಕಸಭಾ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಅಲಯನ್ಸ್ ಆಗುತ್ತವೆ. ಸಮ್ಮಿಶ್ರ ಸರ್ಕಾರದಲ್ಲಿನ ಯಾವುದೇ ಸಮಸ್ಯೆಗಳನ್ನು ಬಹಿರಂಗವಾಗಿ ಚರ್ಚೆ ನಡೆಸುವುದು ಸರಿಯಲ್ಲ. ಅದಕ್ಕಾಗಿ ಸಮನ್ವಯ ಸಮಿತಿಯನ್ನು ಸಿದ್ದಪಡಿಸಿದ್ದೇವೆ. ಎಲ್ಲರೂ ಸಮಿತಿಯ ರೀತಿ-ನೀತಿಗಳಿಗೆ ಬದ್ಧರಾಗಿರಬೇಕು. ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಮನ್ವಯತೆಯಿಂದ ನಡೆಯಬೇಕಿದೆ. ಹೀಗಾಗಿ ಕೆಲವೊಂದು ಹೊಂದಾಣಿಕೆ ಮಾಡಿಕೊಳ್ಳುವುದು ಅನಿವಾರ್ಯ ಎಂದು ಅವರು ತಿಳಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews