ನವದೆಹಲಿ: ಬೆಂಗಳೂರಿನ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಮುಂದಾಗಿದ್ದ ಹಿಂದೂ ಸಂಘಟನೆಗಳಿಗೆ ನಿರಾಸೆಯಾಗಿದೆ. ದೀರ್ಘ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಯಥಾಸ್ಥಿತಿಯನ್ನು ಕಾಪಾಡುವಂತೆ ಆದೇಶಿಸಿದೆ.
ಹೈಕೋರ್ಟ್ ದ್ವಿಸದಸ್ಯ ಪೀಠ ಗಣೇಶೋತ್ಸವ ಆಚರಣೆ ಅನುಮತಿ ನೀಡುವುದು ಸರ್ಕಾರದ ವಿವೇಚನೆಗೆ ಬಿಟ್ಟ ವಿಚಾರ ಎಂದು ಆದೇಶ ಪ್ರಕಟಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ವಕ್ಫ್ ಬೋರ್ಡ್ ಸುಪ್ರೀಂ ಮೊರೆ ಹೋಗಿತ್ತು. ಈ ಪ್ರಕರಣದ ತುರ್ತು ವಿಚಾರಣೆ ಸುಪ್ರೀಂ ಕೋರ್ಟ್ ನ್ಯಾ.ಇಂದಿರಾ ಬ್ಯಾನರ್ಜಿ, ನ್ಯಾ. ಎಎಸ್ ಒಕಾ, ನ್ಯಾ. ಎಂಎಂ ಸುಂದರೇಶ್ ಅವರ ಪೀಠದಲ್ಲಿ ನಡೆಯಿತು.
ವಕ್ಫ್ ಬೋರ್ಡ್ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದರು. ಸರ್ಕಾರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು.
ಎರಡೂ ಕಡೆಯ ವಾದ ಆಲಿಸಿದ ಕೋರ್ಟ್, ಈದ್ಗಾ ಮೈದಾನದ ಆಸ್ತಿಯ ಮಾಲೀಕರು ಯಾರು ಎನ್ನುವ ವಿಚಾರಣೆ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ನಡೆಯುತ್ತಿದೆ. ಏಕಸದಸ್ಯ ಪೀಠದಲ್ಲಿ ವಿಚಾರಣೆ ಮುಂದುವರಿಯಲಿ. ಅಲ್ಲಿಯವರೆಗೆ ಯಥಾಸ್ಥಿತಿಯನ್ನು ಕಾಪಾಡಿಕೊಳ್ಳುವಂತೆ ಆದೇಶಿಸಿತು.