ಸಾಂದರ್ಭಿಕ ಚಿತ್ರ
ಲಕ್ನೋ: ಪಾರ್ಕ್ ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಮುಸ್ಲಿಂ ಉದ್ಯೋಗಿಗಳು ಶುಕ್ರವಾರದ ದಿನ ನಮಾಜ್ ಮಾಡುವುದನ್ನು ತಡೆಯಬೇಕೆಂದು ಉತ್ತರಪ್ರದೇಶ ಪೊಲೀಸರು ನೊಯ್ಡಾದಲ್ಲಿರುವ ಎಲ್ಲಾ ಕಚೇರಿ ಹಾಗೂ ಕಂಪನಿಗಳಿಗೆ ನೋಟಿಸ್ ನೀಡಿದ್ದಾರೆ.
ಶುಕ್ರವಾರ ನಡೆಯುವ ನಮಾಜ್ ಅನ್ನು ಪಾರ್ಕ್ ಸೇರಿದಂತೆ ಇತರೆ ಯಾವುದೇ ತೆರೆದ ಸಾರ್ವಜನಿಕ ಸ್ಥಳಗಳಲ್ಲಿ ನಡೆಸದೇ, ಕೇವಲ ಮಸೀದಿಗಳಲ್ಲೇ ಮಾತ್ರ ನಡೆಸಬೇಕೆಂದು ಮುಸ್ಲಿಂ ನೌಕರರಿಗೆ ಸೂಚನೆ ನೀಡುವಂತೆ ಉತ್ತರ ಪ್ರದೇಶ ಪೊಲೀಸರು ಆದೇಶ ನೀಡಿದ್ದಾರೆ.
ಒಂದು ವೇಳೆ ಕಂಪನಿಗಳ ಉದ್ಯೋಗಿಗಳು ಪಾರ್ಕ್ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವುದನ್ನು ಕಂಡುಬಂದರೆ, ಅದಕ್ಕೆ ನೇರವಾಗಿ ಕಂಪನಿಗಳನ್ನೇ ಹೊಣೆ ಮಾಡಲಾಗುತ್ತದೆ ಎಂದು ಪೊಲೀಸರು ಎಚ್ಚರಿಸಿದ್ದಾರೆ.
ಇತ್ತೀಚೆಗೆ ನೋಯ್ಡಾ ಸೇರಿದಂತೆ ಇತರೆ ನಗರಗಳಲ್ಲಿ ಪಾರ್ಕ್ ಗಳಲ್ಲೆ ನಮಾಜ್ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಪೊಲೀಸ್ ಇಲಾಖೆ ಪ್ರಮುಖವಾಗಿ ನೋಯ್ಡಾದ ಎಲ್ಲಾ ಪೊಲೀಸ್ ಠಾಣೆಗಳಿಗೆ ನೋಟಿಸ್ ನೀಡಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿ ಪಂಕಜ್ ರಾಜ್ ಉತ್ತರ ಪ್ರದೇಶ ಪೊಲೀಸ್ ಇಲಾಖೆಯ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಅಲ್ಲದೇ ಮುಂಬರುವ ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಈ ರೀತಿಯ ಕ್ರಮವನ್ನು ಕೈಗೊಂಡಿದ್ದೇವೆ. ನಮಾಜ್ ಮಾಡುವವರು ಮಸೀದಿಗಳಿಗೆ ತೆರಳಿ ನಮಾಜ್ ಮಾಡುವುದಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ.
ನೋಯ್ಡಾದ ಹಲವು ಕಂಪನಿಗಳ ನೌಕರರು ಪಾರ್ಕ್ ಗಳಲ್ಲೇ ನಮಾಜ್ ಮಾಡುತ್ತಿರುವ ಬಗ್ಗೆ ಸಾಕಷ್ಟು ದೂರು ಬಂದಿದ್ದವು. ಹೀಗಾಗಿ ನೋಯ್ಡಾದ ಎಲ್ಲಾ ಪೊಲೀಸ್ ಠಾಣೆಗಳಿಗೆ ಈ ಬಗ್ಗೆ ನೋಟಿಸ್ ನೀಡಿದ್ದೇವೆ. ಅಲ್ಲದೇ ಉದ್ಯೋಗಿಗಳು ಮಸೀದಿ, ಈದ್ಗಾ ಮೈದಾನಗಳಲ್ಲಿ ನಮಾಜ್ ಸಲ್ಲಿಸುವಂತೆ ಸೂಚನೆ ನೀಡಲು ಕಂಪನಿಗಳಿಗೆ ಸೂಚನೆ ನೀಡಿದ್ದೇವೆಂದು ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv