ಕಾರವಾರ: ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಸಾವಿನಿಂದ ಉದ್ವಿಗ್ನಗೊಂಡಿದ್ದ ಕಾರವಾರದ ಹೊನ್ನಾವರ ಈಗ ಸಹಜ ಸ್ಥಿತಿಯತ್ತ ಮರಳುತ್ತಿದೆ.
ಸೂಕ್ತ ತನಿಖೆಗೆ ಆಗ್ರಹಿಸಿ ಕಾರವಾರ ಮತ್ತು ಕುಮಟಾದಲ್ಲಿ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ನೀಡಿದ್ದ ಬಂದ್ ಹಿಂಸಾಚಾರದ ರೂಪ ಪಡೆದಿತ್ತು. ಗಲಾಟೆಯಲ್ಲಿ ಓರ್ವ ಪೇದೆ ಗಂಭೀರವಾಗಿ ಗಾಯಗೊಂಡಿದ್ದು, ಹತ್ತಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದರು. ಹೀಗಾಗಿ ಕಾರವಾರದ ತಾಲೂಕುಗಳಲ್ಲಿ 3 ದಿನಗಳ ಕಾಲ ನಿಷೇಧಾಜ್ಞೆ ಹೇರಲಾಗಿದೆ.
ಸಾರ್ವಜನಿಕ ಸಭೆ, ಸಮಾರಂಭ ಮತ್ತು ಮೆರವಣಿಗೆಗಳನ್ನು ನಿಷೇಧಿಸಲಾಗಿದೆ. ಜೊತೆಗೆ ಹೊನ್ನಾವರದಲ್ಲಿ ಸತತ ಐದನೇ ದಿನವೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಸ್ಟೇಟಸ್ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ಚಂಡ್ಯಾ ಮೂಲದ ಶಿಕ್ಷಕ ತಿಮ್ಮಪ್ಪ ನಾಯ್ಕ ಎಂಬುವರನ್ನು ಬಂಧಿಸಲಾಗಿದೆ.
ಇಂದು ಶಿರಸಿಯಲ್ಲಿ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ಬಂದ್ಗೆ ಕರೆ ಕೊಟ್ಟಿದ್ದು, 2000 ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ. ಅಲ್ಲದೆ ಪರೇಶ್ ಮೇಸ್ತ ಮರಣೋತ್ತರ ಪರೀಕ್ಷೆ ಬಗ್ಗೆ ಕೆಲವೊಂದು ಪ್ರಶ್ನೆಗಳನ್ನು ಕೇಳಿ ಹೊನ್ನಾವರ ಪೊಲೀಸರು ಉತ್ತರ ಪಡೆದುಕೊಂಡಿದ್ದಾರೆ. ಸಂಪೂರ್ಣ ಮರಣೋತ್ತರ ಪರೀಕ್ಷೆಯ ವರದಿ ಬರಬೇಕಿದೆ.
ಕುಮಟಾದ ಮಾಸ್ತಿಕಟ್ಟೆ ರಸ್ತೆ ಬಳಿ ಪಶ್ಚಿಮ ವಲಯ ಐ.ಜಿ.ಪಿ ಹೇಮಂತ್ ನಿಂಬಾಳ್ಕರ್ ಕಾರಿಗೆ ಉದ್ರಿಕ್ತರ ಗುಂಪು ಬೆಂಕಿ ಹಚ್ಚಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಕಾರ್ ಚಾಲಕನಿಗೆ ಬಾಟಲಿಯಿಂದ ಹೊಡೆದು ಕೊಲೆಗೆ ಯತ್ನಿಸಲಾಗಿದೆ. ಎರಡು ಕೋಮಿನವರನ್ನು ಒಡೆದು ಆಳುವವ ಪ್ರಚೋದನೆ ಇದಾಗಿದೆ ಎಂದು ಹೇಳಿದ್ದಾರೆ.