– ನಮ್ಮ ಸರ್ಕಾರ ಇನ್ನು ಸಾಲ ಮನ್ನಾ ನಿರ್ಧಾರ ತೆಗೊಂಡಿಲ್ಲ
ತುಮಕೂರು: ಬ್ಯಾಂಕ್ನಿಂದ ರೈತರಿಗೆ ನೋಟಿಸ್ ನೀಡುವುದು ತಪ್ಪಲ್ಲ. “ಕಮರ್ಷಿಯಲ್ ಬ್ಯಾಂಕ್ಗೆ ರೈತರ ಸಾಲ ವಸೂಲಿ ಮಾಡಬೇಡಿ ಎಂದು ಹೇಳುವುದು ಕಷ್ಟ” ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಾಲ ಮನ್ನಾ ಮಾಡಿದರೂ ರೈತರಿಗೆ ನೋಟಿಸ್ ನೀಡುತ್ತಿರುವುದರ ಕುರಿತು ಪ್ರತಿಕ್ರಿಯಿಸಿದ ಅವರು, ರೈತರಿಗೆ ಸಾಲದ ಕುರಿತು ನೋಟಿಸ್ ನೀಡಬೇಡಿ ಎಂದು ನಮ್ಮ ಸಹಕಾರಿ ಬ್ಯಾಂಕ್ಗಳಿಗೆ ನಿರ್ದೇಶನ ಕೊಡಬಹುದು. ಆದರೆ ಕಮರ್ಷಿಯಲ್ ಬ್ಯಾಂಕ್ಗಳಿಗೆ ರೈತರ ಸಾಲ ವಸೂಲಿ ಮಾಡಬೇಡಿ ಎಂದು ಹೇಳುವುದು ಕಷ್ಟ. ಅಲ್ಲದೆ ಸಾಲ ಮನ್ನಾ ನಿರ್ಧಾರವನ್ನು ನಮ್ಮ ಸರ್ಕಾರ ಇನ್ನು ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಾಲ ವಸೂಲಾತಿಗೆ ಬ್ಯಾಂಕ್ಗಳು ಪ್ರತಿ ಸಾರಿ ಅದಾಲತ್ ಮಾಡುತ್ತವೆ. ಸಾಲ ಕಟ್ಟದೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್ ನೀಡಿರಬಹುದು. ಸರ್ಕಾರ ಸಾಲಮನ್ನಾ ಯೋಜನೆಯ ಹಣವನ್ನು ಬ್ಯಾಂಕಿಗೆ ತುಂಬದೆ ಬ್ಯಾಂಕಿನವರಿಗೆ ನೋಟಿಸ್ ಕೊಡಬೇಡಿ ಎಂದು ಹೇಳಲು ಆಗುವುದಿಲ್ಲ. ಬ್ಯಾಂಕಿನವರು ಸಾಲದ ನೋಟಿಸ್ ಕೊಡುವುದರಲ್ಲಿ ತಪ್ಪಿಲ್ಲ. ಆದರೆ ರೈತರ ಆಸ್ತಿಗಳನ್ನು ಜಪ್ತಿ ಮಾಡಿ ಕಿರುಕುಳ ನೀಡದಂತೆ ಎಚ್ಚರಿಕೆ ನೀಡಿದ್ದೇವೆ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.