ಹುಬ್ಬಳ್ಳಿ: ಜನವರಿ 2ರಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ.
ನವಲಗುಂದ ತಾಲೂಕಿನಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೇರವೇರಿಸುವ ಮುನ್ನ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸಿಎಂ ಯಡಿಯೂರಪ್ಪ ಇಂದು ಮಾಧ್ಯಮಗಳ ಜೊತೆ ಮಾತನಾಡಿದರು.
ಈ ವೇಳೆ ತುಮಕೂರಿನಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮೋದಿ ಆಗಮಿಸಲಿದ್ದು, ಕಾರ್ಯಕ್ರಮ ಆಯೋಜನೆ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ಸಿಎಂ ತಿಳಿಸಿದರು.
ರಾಜ್ಯದಲ್ಲಿ ಪೌರತ್ವ ಕಾಯ್ದೆಯನ್ನ ಜಾರಿಗೆ ತರುತ್ತೇವೆ. ಅದರಲ್ಲಿ ಯಾವುದೇ ಅನುಮಾನ ಬೇಡ. ರಾಜ್ಯದಲ್ಲಿ ಆದಷ್ಟು ಬೇಗ ಸಿಎಎ(ಪೌರತ್ವ ತಿದ್ದುಪಡಿ ಕಾಯ್ದೆ) ಜಾರಿಯಾಗುತ್ತದೆ ಎಂದು ಈ ವೇಳೆ ತಿಳಿಸಿದರು.
ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ 12 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದೇವೆ. ಹೀಗಾಗಿ ಇನ್ನು ಮೂರೂವರೆ ವರ್ಷ ನಮ್ಮದೇ ಸರ್ಕಾರ ಇರುತ್ತದೆ. ಇದೇ ತಿಂಗಳ ಅಂತ್ಯದಲ್ಲಿ ದೆಹಲಿಗೆ ಹೋಗಿ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ ಮಾಡುತ್ತೇವೆ. ನಮಗೆ ಬೆಂಬಲ ನೀಡಿದವರಿಗೆ ನಾವು ನೀಡಿದ ಭರವಸೆ ಈಡೇರಿಸುತ್ತೇವೆ ಎಂದು ಸಿಎಂ ಸ್ಪಷ್ಟಪಡಿಸಿದರು.
ಮಹದಾಯಿ ವಿಚಾರದಲ್ಲಿ ಕೇಂದ್ರ ಪರಿಸರ ಇಲಾಖೆ ನೀಡಿರುವ ಒಪ್ಪಿಗೆಯನ್ನು ಮರಳಿ ಪಡೆದಿರುವ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಕೇಂದ್ರದ ನಾಯಕರ ಜೊತೆ ಚರ್ಚೆ ಮಾಡುತ್ತೇವೆ. ಈ ಕುರಿತು ಸಂಬಂಧಪಟ್ಟವರೊಂದಿಗೆ ಮಾತನಾಡಿ, ನ್ಯಾಯ ಕೊಡಿಸುವೆ. ಮಹದಾಯಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಲು ಬಿಡಲ್ಲ. ನ್ಯಾಯ ಕೊಡಿಸುವೆ ಎಂದು ಬಿಎಸ್ವೈ ಭರವಸೆ ನೀಡಿದರು.