ಹೈದರಾಬಾದ್: ಈರುಳ್ಳಿ ಖರೀದಿಸಲು ಸರತಿಯಲ್ಲಿ ನಿಂತಿದ್ದ ವ್ಯಕ್ತಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ.
ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ಗುಡಿವಾಡದ ಸಂಬಯ್ಯ(55) ಮೃತಪಟ್ಟ ವ್ಯಕ್ತಿಯಾಗಿದ್ದು, ರಾಜ್ಯ ಸರ್ಕಾರ ಸಬ್ಸಿಡಿ ದರದಲ್ಲಿ ಈರುಳ್ಳಿ ಮಾರಾಟ ಮಾಡುತ್ತಿರುವ ರೈತರ ಮಾರುಕಟ್ಟೆಯಲ್ಲಿ ಘಟನೆ ನಡೆದಿದೆ. ಸರ್ಕಾರ ಪ್ರತಿ ಕೆ.ಜಿ.ಗೆ 25 ರೂ.ನಂತೆ ಈರುಳ್ಳಿಯನ್ನು ಮಾರಾಟ ಮಾಡುತ್ತಿದೆ. ರಿಯಾಯ್ತಿ ಈರುಳ್ಳಿ ಖರೀದಿಸಲು ರೈತರ ಮಾರುಕಟ್ಟೆಗೆ ಸಂಬಯ್ಯ ಬಂದಿದ್ದರು. ಆಗ ಸರತಿಯಲ್ಲಿ ನಿಂತಾಗ ಕುಸಿದು ಬಿದ್ದಿದ್ದಾರೆ.
ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ದಾರಿ ಮಧ್ಯೆಯೇ ಸಂಬಯ್ಯ ಅವರು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ವ್ಯಕ್ತಿ ಮೃತಪಟ್ಟಿರುವ ಕುರಿತು ವೈದ್ಯರು ದೃಢಪಡಿಸಿದ್ದಾರೆ.
ಘಟನೆ ನಂತರ ತೆಲುಗು ದೇಶಂ ಪಕ್ಷ(ಟಿಡಿಪಿ) ವಿಧಾನಸಭೆಯಲ್ಲಿ ಚರ್ಚಿಸಲು ಮುಂದಾಗಿತ್ತು. ಆದರೆ ಸ್ಪೀಕರ್ ಇದಕ್ಕೆ ಅವಕಾಶ ನೀಡಲಿಲ್ಲ. ವ್ಯಕ್ತಿ ಸಾವನ್ನಪ್ಪಿರುವ ಕುರಿತು ಸರ್ಕಾರ ಯಾಕೆ ಸ್ಪಷ್ಟನೆ ನೀಡಿಲ್ಲ ಎಂದು ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಪ್ರಶ್ನಿಸಿದರು.
ಸರ್ಕಾರ ಸಬ್ಸಿಡಿ ದರದಲ್ಲಿ ಈರುಳ್ಳಿ ನೀಡುತ್ತಿದ್ದ ಮಾರಿಕಟ್ಟೆಯಲ್ಲಿ ಸರತಿಯಲ್ಲಿ ನಿಂತಿದ್ದಾಗ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈ ಕುರಿತು ಸರ್ಕಾರ ಏಕೆ ಹೇಳಿಕೆ ಬಿಡುಗಡೆ ಮಾಡಿಲ್ಲ. ಸರ್ಕಾರ ಈರುಳ್ಳಿ ತಲುಪಿಸಲು ಗ್ರಾಮದ ಸ್ವಯಂ ಸೇವಕರನ್ನೇ ಏಕೆ ಆಯ್ಕೆ ಮಾಡಿಕೊಂಡಿತು? ಮನೆ ಮನೆಗೆ ಈರುಳ್ಳಿ ತಲುಪಿಸಲು ಸರ್ಕಾರದಿಂದಲೇ ಏಕೆ ಸ್ವಯಂ ಸೇವಕರನ್ನು ನೇಮಿಸಲಿಲ್ಲ? ಈರುಳ್ಳಿಯನ್ನು ಗ್ರಾಹಕರಿಗೆ ತಲುಪಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.