– ಅಥಣಿ ಟಿಕೆಟ್ ಕೈತಪ್ಪಿದ್ದಕ್ಕೆ ಲಕ್ಷ್ಮಣ ಸವದಿ ರೆಬೆಲ್
– ತಡರಾತ್ರಿ ಸಿಎಂ ಮನೆಯಲ್ಲಿ ಸವದಿ ಪ್ರತ್ಯಕ್ಷ
– ಮನವೊಲಿಕೆಗೆ ಬಿಎಸ್ವೈ ಕಸರತ್ತು
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ನಡೆದಿದ್ದು, ಅಥಣಿ ಕ್ಷೇತ್ರದ ಅಭ್ಯರ್ಥಿಗಾಗಿ ಹುಡುಕಾಟ ನಡೆಸಿದ್ದ ಕಾಂಗ್ರೆಸ್ ಭರ್ಜರಿ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದೆ.
ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ಸೆಳೆಯುವ ತಂತ್ರವನ್ನು ಬೆಳಗಾವಿ ಕಾಂಗ್ರೆಸ್ ನಾಯಕರು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮುಂದೆ ಪ್ರಸಾಪಿಸಿದ್ದಾರೆ. ಹೀಗಾಗಿ ಲಕ್ಷ್ಮಣ ಸವದಿ ಜೊತೆಗೆ ಮಾತುಕತೆ ನಡೆಸಲು ಬೆಳಗಾವಿ ನಾಯಕರು ಮೆಗಾ ಪ್ಲ್ಯಾನ್ ರೂಪಿಸಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ.
ಮಹೇಶ್ ಕುಮಟಳ್ಳಿ ಅವರಿಗೆ ಅಥಣಿ ಟಿಕೆಟ್ ಕೊಟ್ಟಿದ್ದಕ್ಕೆ ಲಕ್ಷ್ಮಣ ಸವದಿ ಮುನಿಸಿಕೊಂಡಿದ್ದಾರೆ. ಹೀಗಾಗಿ ಗುರುವಾರ ನಡೆದ ಅನರ್ಹರ ಬಿಜೆಪಿ ಸೇರ್ಪಡೆ ಸಮಾರಂಭಕ್ಕೂ ಗೈರಾಗಿದ್ದರು. ಅಷ್ಟೇ ಅಲ್ಲದೆ ಬುಧವಾರ ಬಿಜೆಪಿ ನಾಯಕರ ಕೈಗೆ ಸಿಗದೆ ತಿರುಗಾಡಿದ್ದರು. ಉಪ ಚುನಾವಣೆ ಬಳಿಕ ಡಿಸಿಎಂ ಸ್ಥಾನದಿಂದ ಕೆಳಗಿಳಿಸುವ ಆತಂಕ ಲಕ್ಷ್ಮಣ ಸವದಿ ಅವರಿಗೆ ಶುರುವಾಗಿದೆ. ಬಿಜೆಪಿ ಮುಖಂಡ ಉಮೇಶ್ ಕತ್ತಿ ಅವರಿಗೆ ಮಂತ್ರಿಗಿರಿ ನೀಡಿದರೆ ಸವದಿ ಅವರ ರಾಜಕೀಯ ಭವಿಷ್ಯ ಮುಕ್ತಾಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಆಪರೇಷನ್ ಡಿಸಿಎಂ ರಾಜಕೀಯ ಚಟುವಟಿಕೆ ಗರಿಗೆದರಿದೆ ಎಂಬ ಮಾತು ಕೇಳಿ ಬರುತ್ತಿದೆ.
ಬಿಜೆಪಿ ಬಿಟ್ಟಿದ್ದ ಬಾಣವೇ ಈಗ ಕಾಂಗ್ರೆಸ್ ಅಸ್ತ್ರವಾಗಿ ಬಳಿಸಿಕೊಳ್ಳುತ್ತಿದೆ. ಈ ಹಿಂದೆ ಕಾಂಗ್ರೆಸ್ ಸಚಿವರಿಗೆ ಬಿಜೆಪಿ ಗಾಳ ಹಾಕಿತ್ತು. ಆದರೆ ಇಂದು ಕಾಂಗ್ರೆಸ್ ಡಿಸಿಎಂಗೆ ಗಾಳ ಹಾಕಲು ಮುಂದಾಗಿದೆ. ಹೀಗಾಗಿ ಬೆಳಗಾವಿ ಕಾಂಗ್ರೆಸ್ ನಾಯಕರಿಂದ ಶುರು ಆಪರೇಷನ್ ಶುರುವಾಗಿದೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.
ಇತ್ತ ಆಪರೇಷನ್ ಹಸ್ತದ ಸುದ್ದಿ ತಿಳಿದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೈ ಅಲರ್ಟ್ ಆಗಿದ್ದಾರೆ. ಈ ನಿಟ್ಟಿನಲ್ಲಿ ರೆಬೆಲ್ ಲಕ್ಷ್ಮಣ ಸವದಿ ಅವರ ಮನವೊಲಿಸಲು ಮುಂದಾಗಿದ್ದಾರೆ. ಸಿಎಂ ಯಡಿಯೂರಪ್ಪ ಅವರು ತುರ್ತಾಗಿ ಸವದಿ ಅವರಿಗೆ ಬುಲಾವ್ ಕೊಟ್ಟಿದ್ದಾರೆ. ಹೀಗಾಗಿ ತಡರಾತ್ರಿ ಧವಳಗಿರಿ ನಿವಾಸದಲ್ಲಿ ಡಿಸಿಎಂ ಬಸರಾಜ್ ಬೊಮ್ಮಾಯಿ ಅವರೊಂದಿಗೆ ಲಕ್ಷ್ಮಣ ಸವದಿ ಆಗಮಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಪ್ಲ್ಯಾನ್ ಅನ್ನು ಬುಡಮೇಲು ಮಾಡಲು ಸಿಎಂ ಯಡಿಯೂರಪ್ಪ ಅವರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.