ಆಪರೇಷನ್ ಕಮಲ ನಿಂತಿಲ್ಲ – ಮತ್ತೆ 8 ಶಾಸಕರ ರಾಜೀನಾಮೆ ಸಾಧ್ಯತೆ

1 Min Read

ಬೆಂಗಳೂರು: 15 ಶಾಸಕರು ರಾಜೀನಾಮೆ ನೀಡಿದ್ದರೂ ಮತ್ತಷ್ಟು ದೋಸ್ತಿ ಪಕ್ಷದ ಶಾಸಕರು ರಾಜೀನಾಮೆ ನೀಡುವ ಸಾಧ್ಯತೆಯಿದೆ.

ಹೌದು. ರಾಜೀನಾಮೆ ನೀಡಿದ ಶಾಸಕರ ಪೈಕಿ ಹಳೆ ಮೈಸೂರು ಭಾಗದವರು ಇದ್ದಾರೆ. ಈ ಭಾಗದಲ್ಲಿ ಬಿಜೆಪಿಗೆ ಗಟ್ಟಿ ನೆಲೆ ಇಲ್ಲ. ಉಪಚುನಾವಣೆ ನಡೆದರೆ ಇಲ್ಲಿ ಜಯಗಳಿಸುವುದು ಅಷ್ಟು ಸುಲಭವಲ್ಲ. ಹೀಗಾಗಿ ಉತ್ತರ ಕರ್ನಾಟಕ ಭಾಗದ 8 ಶಾಸಕರನ್ನು ಸೆಳೆಯಲು ಬಿಜೆಪಿ ಮುಂದಾಗಿದೆ.

ಉತ್ತರ ಕರ್ನಾಟಕದಲ್ಲಿ ಬಿಜೆಪಿಯ ಹಿಡಿತ ಹೆಚ್ಚಿದೆ. ಅದರಲ್ಲೂ ಹಲವಾರು ಕ್ಷೇತ್ರಗಳಲ್ಲಿ ಲಿಂಗಾಯತರೇ ನಿರ್ಣಾಯಕರಾಗಿದ್ದಾರೆ. ಹೀಗಾಗಿ 8 ಮಂದಿ ಲಿಂಗಾಯತ ಶಾಸಕರನ್ನು ಸೆಳೆಯಲು ತೆರೆಮರೆಯಲ್ಲಿ ಪ್ರಯತ್ನ ನಡೆಸುತ್ತಿದೆ ಎನ್ನುವ ವಿಚಾರ ಮೂಲಗಳಿಂದ ಲಭ್ಯವಾಗಿದೆ.

ಒಂದು ವೇಳೆ ರಾಜೀನಾಮೆ ನೀಡಿರುವ ಶಾಸಕರು ಸೋತರೆ ಮತ್ತೆ ಸರ್ಕಾರ ಅಲ್ಪ ಮತಕ್ಕೆ ಕುಸಿಯಬಹುದು. ಈ ರೀತಿ ಆಗದಂತೆ ತಡೆಯಲು ಬಿಜೆಪಿ ಈಗ ಉತ್ತರ ಕರ್ನಾಟಕ ಭಾಗದ ಶಾಸಕರನ್ನು ಸೆಳೆಯಲು ಪ್ರಯತ್ನ ನಡೆಸುತ್ತಿದೆ.

ಅತೃಪ್ತ ಶಾಸಕರ ಜೊತೆ ಸ್ನೇಹಿತರಾಗಿರುವ ಶಾಸಕರನ್ನು ಸೆಳೆಯಲು ಬಿಜೆಪಿ ಮುಂದಾಗಿದ್ದು, ಈಗಾಗಲೇ ಕೆಲ ಶಾಸಕರು ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.

ಜೆಡಿಎಸ್ಸಿನ ಹುಣಸೂರು ಶಾಸಕ ಎಚ್ ವಿಶ್ವನಾಥ್, ಮಾಹಾಲಕ್ಷ್ಮಿ ಲೇ ಔಟ್ ಶಾಸಕ ಗೋಪಾಲಯ್ಯ ಹಾಗೂ ಕೆ. ಆರ್ ಪೇಟೆಯ ನಾರಾಯಣ ಗೌಡ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್ಸಿನ ಶಾಸಕರಾದ ಯಶವಂತಪುರದ ಎಸ್.ಟಿ ಸೋಮಶೇಖರ್, ಗೋಕಾಕ್ ಕ್ಷೇತ್ರದ ರಮೇಶ್ ಜಾರಕಿಹೊಳಿ, ಮಸ್ಕಿಯ ಪ್ರತಾಪ್ ಗೌಡ ಪಾಟೀಲ್, ಹಿರೇಕೆರೂರು ಶಾಸಕ ಬಿ.ಸಿ ಪಾಟೀಲ್, ಅಥಣಿಯ ಮಹೇಶ್ ಕುಮಟಳ್ಳಿ, ಕೆ.ಆರ್ ಪುರಂನ ಭೈರತಿ ಬಸವರಾಜ್, ಯಲ್ಲಾಪುರದ ಶಿವರಾಂ ಹೆಬ್ಬಾರ್, ರಾಜರಾಜೇಶ್ವರಿ ನಗರದ ಮುನಿರತ್ನ ಹಾಗೂ ಶಿವಾಜಿನಗರದ ರೋಷನ್ ಬೇಗ್, ಚಿಕ್ಕಬಳ್ಳಾಪುರದ ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಕಾಗವಾಡದ ಶ್ರೀಮಂತ ಪಾಟೀಲ್, ವಿಶ್ವಾಸಮತಯಾಚನೆ ಬಾರದೇ ಕೈ ಕೊಟ್ಟಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *