ಸಿನಿಮಾಗಳಲ್ಲಿ ಜನಮೆಚ್ಚಿದ ನಟರ ಪ್ರಭೆಯನ್ನು ಬಳಸಿಕೊಳ್ಳೋದು ಮಾಮೂಲು. ಆದರೆ ಅಂಥಾ ನಟರ ಅಸಲಿ ಅಭಿಮಾನಿಗಳೇ ಥ್ರಿಲ್ ಆಗುವಂತೆ ಚಿತ್ರವೊಂದನ್ನು ರೂಪಿಸೋದು ಸವಾಲಿನ ಸಂಗತಿ. ಈ ವಿಚಾರದಲ್ಲಿ ಗುರುದೇಶಪಾಂಡೆ ನಿರ್ದೇಶನದ ಪಡ್ಡೆಹುಲಿ ಚಿತ್ರ ಗೆದ್ದಿದೆ. ಅದರಿಂದಾಗಿಯೇ ಇಡೀ ಕರ್ನಾಟಕದ ಉದ್ದಗಲಕ್ಕೂ ಹರಡಿಕೊಂಡಿರುವ ಸಾಹಸಸಿಂಹ ವಿಷ್ಣುವರ್ಧನ್ ಅವರ ಅಭಿಮಾನಿಗಳೆಲ್ಲ ಪಡ್ಡೆಹುಲಿಯತ್ತ ಆಕರ್ಷಿತರಾಗಿದ್ದಾರೆ.
ಎಂ.ರಮೇಶ್ ರೆಡ್ಡಿಯವರು ತೇಜಸ್ವಿನಿ ಎಂಟರ್ ಪ್ರೈಸಸ್ ಬ್ಯಾನರ್ ಅಡಿ ನಿರ್ಮಾಣ ಮಾಡಿರೋ ಚಿತ್ರ ಪಡ್ಡೆಹುಲಿ. ಈ ಸಿನಿಮಾದೊಳಗಿನ ವಿಷ್ಣು ಅಭಿಮಾನ ಥರ ಥರದಲ್ಲಿ ಅನಾವರಣಗೊಳ್ಳುತ್ತಲೇ ಬಂದಿದೆ. ಈ ಅಭಿಮಾನದ ಹಿಂದೆ ರಿಯಲ್ ಆದ ಕಥಾನಕಗಳೂ ಇವೆ. ಯಾಕಂದ್ರೆ ಈ ಚಿತ್ರದಲ್ಲಿ ವಿಷ್ಣು ಅಭಿಮಾನಿಯಾಗಿ ನಟಿಸಿರೋ ಶ್ರೇಯಸ್ ನಿಜ ಜೀವನದಲ್ಲಿಯೂ ಸಾಹಸ ಸಿಂಹನ ಅಪ್ಪಟ ಅಭಿಮಾನಿ!
ಅಷ್ಟಕ್ಕೂ ಶ್ರೇಯಸ್ ಅವರ ತಂದೆ ನಿರ್ಮಾಪಕರಾದ ಕೆ.ಮಂಜು ಅವರೂ ವಿಷ್ಣು ಅಭಿಮಾನಿಯೇ. ಮಂಜು ಅವರು ವಿಷ್ಣುವರ್ಧನ್ ಅವರ ನಿಕಟ ಸಂಪರ್ಕ ಹೊಂದಿದ್ದವರು. ವಿಷ್ಣು ಮೇಲೆ ಅಪಾರವಾದ ಪ್ರೀತಿ ಹೊಂದಿರೋ ಮಂಜು ತಮ್ಮ ಮಗನ ಮೊದಲ ಚಿತ್ರದ ಮೂಲಕ ಅದನ್ನು ಹೊರಗೆಡವಿದ್ದಾರೆ. ವಿಷ್ಣು ಹುಟ್ಟುಹಬ್ಬದಂದು ಬಿಡುಗಡೆಯಾಗಿದ್ದ ರಾಪ್ ಸಾಂಗ್ ಸೇರಿದಂತೆ ಎಲ್ಲದರಲ್ಲಿಯೂ ಪಡ್ಡೆಹುಲಿ ವಿಷ್ಣು ಅಭಿಮಾನದಿಂದಲೇ ಮಿರುಗುತ್ತಿದೆ!