ಇಸ್ಲಾಮಾಬಾದ್: ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸಿರುವ ಕೇಂದ್ರ ಸರ್ಕಾರದ ನಿರ್ಧಾರದಿಂದ ಪಾಕಿಸ್ತಾನ ತೀವ್ರ ಆತಂಕಕ್ಕೊಳಗಾಗಿದ್ದು, ಭಾರತದ ನಿರ್ಧಾರವನ್ನು ಪ್ರಶ್ನಿಸಿ ಅಂತರಾಷ್ಟ್ರೀಯ ಕೋರ್ಟ್ ಮೊರೆ ಹೋಗಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಸುದ್ದಿಸಂಸ್ಥೆಯೊಂದು ವರದಿ ಮಾಡಿದ್ದು, ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸಿದ ಭಾರತದ ನಿರ್ಧಾರವನ್ನು ಅಂತರಾಷ್ಟ್ರೀಯ ಕೋರ್ಟ್ನಲ್ಲಿ ಪ್ರಶ್ನಿಸಲು ನಿರ್ಧರಿಸಿದ್ದೇವೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿ ಅವರು ಪಾಕಿಸ್ತಾನದ ಸುದ್ದಿ ವಾಹಿನಿಗೆ ತಿಳಿಸಿದ್ದಾರೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.
Pakistani government has decided to approach the International Court of Justice over Kashmir issue: Pakistan media pic.twitter.com/SAnOeeSCwe
— ANI (@ANI) August 20, 2019
ಎಲ್ಲ ಕಾನೂನು ಅಂಶಗಳನ್ನು ಪರಿಶೀಲಿಸಿದ ನಂತರ ಪಾಕಿಸ್ತಾನ ಈ ನಿರ್ಧಾರಕ್ಕೆ ಬಂದಿದೆ ಎಂದು ಖುರೇಷಿ ಮಾಹಿತಿ ನೀಡಿದ್ದಾರೆ.
ಭಾರತದ ನಿರ್ಧಾರವನ್ನು ಪಾಕಿಸ್ತಾನ ಕಳೆದ ವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಪ್ರಶ್ನಿಸಿತ್ತು. ಸಭೆಯ ನಂತರ ಪ್ರಮುಖ ದೇಶಗಳ ಸದಸ್ಯರು ಭಾರತದ ನಿಲುವನ್ನು ಬೆಂಬಲಿಸಿದ್ದರು.
ಈ ಕುರಿತು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಸರಣಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಭಾರತ ಸರ್ಕಾರ ಪ್ಯಾಸಿಸ್ಟ್, ರ್ಯಾಸಿಸ್ಟ್ ಎಂದು ಕರೆದಿದ್ದರು. ಮಾತ್ರವಲ್ಲದೆ, ನ್ಯೂಕ್ಲಿಯರ್ ಅರ್ಸೆನಲ್ ಭಾರತದ ಕಂಟ್ರೋಲ್ನಲ್ಲಿದೆ ಎಂದು ಕಿಡಿ ಕಾರಿದ್ದರು.
ಸೋಮವಾರವಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ 30 ನಿಮಿಷಗಳ ಕಾಲ ಫೋನ್ನಲ್ಲಿ ಮಾತನಾಡಿದ್ದು, ದ್ವಿಪಕ್ಷೀಯ ವಿಷಯಗಳಲ್ಲದೆ, ಪ್ರಾದೇಶಿಕ ಸ್ಥಿತಿಗತಿ ಕುರಿತು ಸಹ ಉಭಯ ನಾಯಕರು ಚರ್ಚಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಹಿಂಸಾಚಾರಕ್ಕೆ ಪ್ರಚೋದನೆ ನೀಡುವವರ ಮುಂದೆ ಶಾಂತಿ ಮಾತುಕತೆ ಫಲಿಸುವುದಿಲ್ಲ ಎಂದು ತಿಳಿಸಿದ್ದರು.