ಇಸ್ಲಾಮಾಬಾದ್: ಪಾಕಿಸ್ತಾನವು ತನ್ನ ಸೇನಾ ಕಾಯ್ದೆಗೆ ತಿದ್ದುಪಡಿ ತರಲು ಬುಧವಾರ ನಿರ್ಧರಿಸಿದೆ. ಇದರಿಂದಾಗಿ ಪಾಕಿಸ್ತಾನದಲ್ಲಿ ಮರಣದಂಡನೆ ಎದುರಿಸುತ್ತಿರುವ ಭಾರತದ ಕಮಾಂಡರ್ ಕುಲಭೂಷಣ್ ಜಾಧವ್ ಅವರು ನಾಗರಿಕ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ಸಿಗಲಿದೆ.
ಭಾರತ ಪರ ಗೂಢಚರ್ಯೆ ನಡೆಸುತ್ತಿದ್ದ ಆರೋಪದ ಅಡಿ 49 ವರ್ಷದ ಕುಲಭೂಷಣ್ ಜಾಧವ್ ಅವರನ್ನು ಪಾಕಿಸ್ತಾನವು ಬಂಧಿಸಿ 2017ರಲ್ಲಿ ಮರಣ ದಂಡನೆಗೆ ಗುರಿ ಮಾಡಿತ್ತು. ಪಾಕ್ ಸೇನಾ ಕಾಯ್ದೆ ಪ್ರಕಾರ, ಸೇನಾ ನ್ಯಾಯಾಲಯದಲ್ಲಿ ಶಿಕ್ಷೆಗೆ ಗುರಿಯಾದ ವ್ಯಕ್ತಿ ಅಥವಾ ಗುಂಪುಗಳು ನಾಗರಿಕ ನ್ಯಾಯಾಲಯದಲ್ಲಿ ಪ್ರಶ್ನಿಸಿ ಅರ್ಜಿ ಸಲ್ಲಿಸಲು ಅವಕಾಶ ಇರಲಿಲ್ಲ. ಈ ಕಾಯ್ದೆಗೆ ತಿದ್ದುಪಡೆ ತರಲು ಪಾಕಿಸ್ತಾನ ಮುಂದಾಗಿದೆ.
ಪಾಕಿಸ್ತಾನವು ತನ್ನ ಸೇನಾ ಕಾಯ್ದೆಗೆ ತರಲಿರುವ ತಿದ್ದಪಡಿಯಿಂದಾಗಿ ಕುಲಭೂಷಣ್ ಜಾಧವ್ ನಾಗರಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಏನಿದು ಪ್ರಕರಣ?
ಭಾರತದ ಪರ ಗೂಢಚರ್ಯೆ ನಡೆಸುತ್ತಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ, ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು. 2017ರ ಏಪ್ರಿಲ್ ನಲ್ಲಿ ಫೀಲ್ಡ್ ಜನರಲ್ ಕೋರ್ಟ್ ಮಾರ್ಷಲ್ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ಐಎಸ್ಪಿಆರ್) ತಿಳಿಸಿತ್ತು.
ವಿಚಾರಣೆ ವೇಳೆ ರಾ ಪರ ನಾನು ಗೂಢಚರ್ಯೆ ನಡೆಸುತ್ತಿದ್ದ ವಿಚಾರವನ್ನು ಕುಲಭೂಷಣ ಜಾಧವ್ ತಪ್ಪೊಪ್ಪಿಕೊಂಡಿದ್ದರು ಎಂದು ಐಎಸ್ಪಿಆರ್ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿತ್ತು. ಕೂಲಭೂಷಣ್ ಜಾಧವ್ ನೌಕಾ ಸೇನೆಯ ನಿವೃತ್ತ ಅಧಿಕಾರಿಯಾಗಿದ್ದರು. ಆದರೆ ಅವರು ರಾ ಪರವಾಗಿ ಗೂಢಚರ್ಯೆ ನಡೆಸುತ್ತಿರುವ ಆರೋಪವನ್ನು ಭಾರತ ಸರ್ಕಾರ ನಿರಾಕರಿಸಿತ್ತು. 2016ರ ಮಾರ್ಚ್ 3ರಂದು ಬಲೂಚಿಸ್ತಾನದ ಮಶೇಕಲ್ ಎಂಬಲ್ಲಿ ಕುಲಭೂಷಣ್ ಜಾಧವ್ ಅವರು ಅರೆಸ್ಟ್ ಅಗಿದ್ದರು. ಅಲ್ಲದೆ 2017ರಲ್ಲಿ ಪಾಕಿಸ್ತಾನದ ಮಿಲಿಟರಿ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿತ್ತು.
ವಿಯೆನ್ನಾ ಒಪ್ಪಂದದ ಪ್ರಕಾರ ಕುಲಭೂಷಣ್ಗೆ ಭಾರತ ರಾಜತಾಂತ್ರಿಕ ನೆರವು ನೀಡಲು ಅವಕಾಶ ಮಾಡಿಕೊಡಬೇಕಿತ್ತು. ಈ ಕುರಿತು 16 ಬಾರಿ ಭಾರತದ ಮಾಡಿದ್ದ ಮನವಿಯನ್ನು ಪಾಕಿಸ್ತಾನ ತಿರಸ್ಕರಿಸಿತ್ತು. ಹೀಗಾಗಿ ಭಾರತ ಮೇ 2017ರಂದು ಅಂತರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋಗಿತ್ತು. ಪ್ರಕರಣವನ್ನು ಕೈಗೆತ್ತಿಕೊಂಡ 10 ಸದಸ್ಯರುಳ್ಳ ನ್ಯಾಯಪೀಠ 18 ಮೇ 2017ರಂದು ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ವಿಧಿಸಿದ್ದ ಶಿಕ್ಷೆಗೆ ತಡೆ ನೀಡಿತ್ತು.
ಭಾರತ ಗಲ್ಲುಶಿಕ್ಷೆಯನ್ನು ರದ್ದುಗೊಳಿಸಬೇಕೆಂದು ಮನವಿ ಮಾಡಿಕೊಂಡಿದ್ದು, ನಿವೃತ್ತ ನೌಕಾ ಸೇನಾಧಿಕಾರಿ ಕುಲಭೂಷಣ್ರನ್ನು ಇರಾನ್ನಿಂದ ಪಾಕಿಸ್ತಾನ ಕಿಡ್ನಾಪ್ ಮಾಡಿತ್ತು ಎಂಬ ಅಂಶವನ್ನು ಕೋರ್ಟ್ ನಲ್ಲಿ ಭಾರತ ಮಂಡಿಸಿತ್ತು.
ಕುಲಭೂಷಣ್ ಜಾಧವ್ ಪ್ರಕರಣದ ಕುರಿತು ವಿಚಾರಣೆ ನಡೆಸಿದ್ದ ಅಂತರಾಷ್ಟ್ರೀಯ ಕೋರ್ಟ್ (ಐಸಿಜೆ) ಶೀಘ್ರದಲ್ಲಿ ರಾಜತಾಂತ್ರಿಕ ಸಂಪರ್ಕ ಕಲ್ಪಿಸುವಂತೆ ಪಾಕಿಸ್ತಾನಕ್ಕೆ ಆದೇಶ ನೀಡಿತ್ತು. ಈ ಹಿನ್ನೆಯಲ್ಲಿ ರಾಜತಾಂತ್ರಿಕ ನಿಯಮ ಹಾಗೂ ಪಾಕಿಸ್ತಾನದ ಕಾನೂನುಗಳಿಗೆ ಅನುಸಾರವಾಗಿ ಕುಲಭೂಷಣ್ ಜಾಧವ್ ಅವರಿಗೆ ಸೆಪ್ಟೆಂಬರ್ 2ರಂದು ರಾಜತಾಂತ್ರಿಕ ಸಂಪರ್ಕದ ಅವಕಾಶ ನೀಡಲಾಗುವುದು ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ವಕ್ತಾರ ಮೊಹಮ್ಮದ್ ಫೈಸಲ್ ತಿಳಿಸಿದ್ದರು. ಹೀಗಾಗಿ ಅಂದು ಪಾಕಿಸ್ತಾನದಲ್ಲಿರುವ ಭಾರತದ ಉಪ ಹೈಕಮಿಷನರ್ ಗೌರವ್ ಅಹ್ಲುವಾಲಿಯಾ ಅವರು ಕುಲಭೂಷಣ್ ಜಾಧವ್ ಅವರನ್ನು ಭೇಟಿಯಾಗಿದ್ದರು. ಆದರೆ ಪಾಕಿಸ್ತಾನವು ಭೇಟಿಯಾದ ಸ್ಥಳವನ್ನು ಗೌಪ್ಯವಾಗಿಟ್ಟಿದೆ. ಆದರೆ ಎರಡನೇ ಬಾರಿಯ ರಾಜತಾಂತ್ರಿಕ ಸಂಪರ್ಕವನ್ನು ಕಲ್ಪಿಸಲು ಪಾಕಿಸ್ತಾನ ನಿರಾಕರಿಸಿತ್ತು.