ಕೊಪ್ಪಳ: ಆನೆಗೊಂದಿಯಲ್ಲಿ ವ್ಯಾಸರಾಯರ ವೃಂದಾವನ ಧ್ವಂಸ ಪ್ರಕರಣದ ಹಿನ್ನೆಲೆಯಲ್ಲಿ ನವವೃಂದಾವನಕ್ಕೆ ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಶ್ರೀಗಳು ಭೇಟಿ ನೀಡಿ, ವೃಂದಾವನ ಪುನರ್ ನಿರ್ಮಾಣ ಕಾರ್ಯದ ಕುರಿತು ಚರ್ಚಿಸಿದ್ದಾರೆ.
ನವವೃಂದಾವನ ಧ್ವಂಸಗೊಳಿಸಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಗುರುವಾರ ರಾಯರು ಹಾಗೂ ಸೋಸಲೆ ವ್ಯಾಸರಾಯ ಮಠದ ಶ್ರೀಗಳು ಭೇಟಿ ನೀಡಿದ್ದರು. ಇಂದು ನವವೃಂದಾವನಕ್ಕೆ ಪೇಜಾವರ ಶ್ರೀಗಳು ಭೇಟಿ ನೀಡಿದ್ದಾರೆ. ಈ ವೇಳೆ ನವವೃಂದಾವನ ಧ್ವಂಸದ ಬಗ್ಗೆ ಬೇಸರ ವ್ಯಕ್ತಪಡಿಸಿ, ನವವೃಂದಾವನ ಪುನರ್ ನಿರ್ಮಾಣ ಕಾರ್ಯದ ಕುರಿತು ಭಕ್ತರೊಂದಿಗೆ ಶ್ರೀಗಳು ಚರ್ಚೆ ನಡೆಸಿದ್ದಾರೆ.
ಗಂಗಾವತಿ ತಾಲೂಕಿನ ಆನೆಗುಂದಿ ಸಮೀಪವಿರುವ ನವಬೃಂದಾವನ ಗಡ್ಡೆ ತುಂಗಭದ್ರಾ ನದಿಯ ಮಧ್ಯದಲ್ಲಿದೆ. ಇಲ್ಲಿ ವ್ಯಾಸರಾಜರು ಸೇರಿದಂತೆ ಒಟ್ಟು ಒಂಬತ್ತು ಯತಿಗಳ ಸಮಾಧಿಗಳು ಇವೆ. ದುಷ್ಕರ್ಮಿಗಳು ನಿಧಿಯ ಆಸೆಗಾಗಿ ಬುಧವಾರ ರಾತ್ರಿ ನವಬೃಂದಾವನವನ್ನು ಅಗೆದು ಹಾಕಿದ್ದರು. ಸಮಾಧಿಯ ಕೆಳಭಾಗವನ್ನು ಸಹ ಸಂಪೂರ್ಣ ಅಗೆದಿದ್ದರಿಂದ ನಿಧಿಗಾಗಿ ಹೀಗೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ನವಬೃಂದಾವನದಲ್ಲಿ ಪ್ರತಿವರ್ಷ ರಾಘವೇಂದ್ರ ಮಠದವರಿಂದ ಮತ್ತು ಉತ್ತಾರಾಧಿ ಮಠದಿಂದ ಅದ್ಧೂರಿಯಾಗಿ ಆರಾಧನೆ ಕಾರ್ಯಕ್ರಮ ಜರಗುತ್ತದೆ. ನವಬೃಂದಾವನ ಮಾಲೀಕತ್ವಕ್ಕಾಗಿ ಈ ಎರಡು ಮಠದವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಯಾರ ಪರವೂ ತೀರ್ಪು ಬಂದಿರಲಿಲ್ಲ.