ರಾಯಚೂರು: ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ನಲ್ಲಿ ಮಾರಣಾಂತಿಕ ಹಲ್ಲೆಗೆ ಒಳಗಾಗಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಫೆಬ್ರವರಿ 12 ರಂದು ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾದ 35 ವರ್ಷದ ಗಂಗಾಧರ ಚಿಕಿತ್ಸೆ ಫಲಕಾರಿಯಾಗದೆ ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ರಾತ್ರಿ ವೇಳೆ ಮನೆಗೆ ನುಗ್ಗಿದ್ದ ದುಷ್ಕರ್ಮಿಗಳು ಮಲಗಿದ್ದ ಗಂಗಾಧರ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಕೂಡಲೇ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ದವಡೆ ಹಲ್ಲು ಮುರಿದು ಶಾಸ್ವಕೋಶದೊಳಗೆ ರಕ್ತ ಹರಿದ ಹಿನ್ನೆಲೆ ಗಂಗಾಧರ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಅವಿವಾಹಿತನಾಗಿರುವ ಗಂಗಾಧರ್ ಮನೆಯ ಪಕ್ಕದಲ್ಲೇ ಪ್ರತ್ಯೇಕ ಕೋಣೆಯಲ್ಲಿ ಮಲಗಿದ್ದರು. ಎಂದಿನಂತೆ ಫೆ. 12ರಂದು ಕೂಡ ಬಾಗಿಲನ್ನು ಹಾಕದೇ ಮಲಗಿದ್ದ ಗಂಗಾಧರ್ ಮೇಲೆ ಹಲ್ಲೆ ನಡೆದಿತ್ತು. ಘಟನೆ ಹಿನ್ನೆಲೆ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸ್ ವಿಶೇಷ ತಂಡ ರಚಿಸಲಾಗಿದ್ದು ತನಿಖೆ ಮುಂದುವರೆದಿದೆ.