ಉಡುಪಿ: ರೈಲು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಎರ್ಮಾಳಿನಲ್ಲಿ ನಡೆದಿದೆ.
ಎರ್ಮಾಳು ಗ್ರಾಮ ಸಮೀಪದ ರೈಲ್ವೆ ಹಳಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರ ಮಾಹಿತಿ ಪ್ರಕಾರ ಅದಮಾರು ಗ್ರಾಮದ ರವಿ ದೇವಾಡಿಗ ಎಂಬ ವ್ಯಕ್ತಿಯ ಶವ ಇದು ಎಂದು ಗುರುತಿಸಲಾಗಿದೆ. ರವಿ ದೇವಾಡಿಗ ಸೋಮವಾರ ಮಧ್ಯಾಹ್ನ ಮನೆಯಿಂದ ಕೆಲಸಕ್ಕೆಂದು ತೆರಳಿದ್ದರು. ನಂತರ ರಾತ್ರಿ ಮನೆಗೆ ವಾಪಸ್ ಬಂದಿರಲಿಲ್ಲ.
ಪೊಲೀಸರು ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಉಡುಪಿಯ ಆರ್ಪಿಎಫ್ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆಯನ್ನು ನಡೆಸಿದ್ದಾರೆ. ರವಿ ಆತ್ಮಹತ್ಯೆ ಮಾಡಿಕೊಂಡಿದ್ದಾನಾ ಅಥವಾ ರೈಲ್ವೆ ಟ್ರ್ಯಾಕ್ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ರೈಲು ಡಿಕ್ಕಿ ಹೊಡೆದು ಮೃತಪಟ್ಟಿದ್ದಾರಾ ಎಂಬ ಬಗ್ಗೆ ಇನ್ನಷ್ಟೇ ತನಿಖೆ ಆಗಬೇಕಿದೆ. ಮೇಲ್ನೋಟಕ್ಕೆ ಗಮನಿಸಿದಾಗ ಇದೊಂದು ರೈಲು ಅಪಘಾತ ಎಂದು ಸ್ಥಳೀಯರು ಹೇಳುತ್ತಿದ್ದಾರೆ.