ಬಳ್ಳಾರಿ: ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಬೆಲೆಯೇ ಇಲ್ಲವಾ ಎನ್ನುವ ಪ್ರಶ್ನೆಯೊಂದು ಇದೀಗ ಮೂಡಿದೆ. ಕೈ ಕಾರ್ಯಕರ್ತರಿಗೊಂದು ಶಾಕಿಂಗ್ ನ್ಯೂಸ್ ಎದುರಾಗಿದೆ.
ಹೌದು. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಇಲ್ಲದವರಿಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ಸಿಗುತ್ತೆ. ಅಷ್ಟೇ ಅಲ್ಲ ಆಪರೇಷನ್ ಕಮಲಕ್ಕೆ ಒಳಗಾದ ಮೊದಲ ವ್ಯಕ್ತಿಗೆ ಮರಳಿ ಅಧ್ಯಕ್ಷ ಸ್ಥಾನ ನೀಡಿ ಕಾಂಗ್ರೆಸ್ ಹೈಕಮಾಂಡ್ ಇದೀಗ ಮುಜಗರಕ್ಕೆ ಒಳಗಾಗಿದೆ.
ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಗೆ ಸೋಮವಾರವಷ್ಟೇ ನೂತನ ಅಧ್ಯಕ್ಷರಾಗಿ ರಫೀಕ್ ಎಂಬವರನ್ನು ನೇಮಿಸಿ ಎಐಸಿಸಿ ಆದೇಶ ಹೊರಡಿಸಿದೆ. ಆದ್ರೆ ಬಳ್ಳಾರಿ ಜಿಲ್ಲೆಯಲ್ಲಿ ಈ ಹಿಂದೆ ಕಾಂಗ್ರೆಸ್ ಪಕ್ಷದಿಂದ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದ ರಫೀಕ್, 2005 ರಲ್ಲಿ ರೆಡ್ಡಿಗಳಿಂದ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರ್ಪಡೆಗೊಂಡಿದ್ದರು. ಆಪರೇಷನ್ ಕಮಲಕ್ಕೆ ಒಳಗಾಗಿದ್ದ ಮೊದಲ ವ್ಯಕ್ತಿಯನ್ನೇ ಇದೀಗ ಮರಳಿ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಿರುವುದು ಪ್ರಾಮಾಣಿಕ ಕಾರ್ಯಕರ್ತರಿಗೆ ಮುಜುಗರವನ್ನುಂಟು ಮಾಡಿದೆ.
ಅಲ್ಲದೇ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಇಲ್ಲದವರಿಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಭವನ ನಿರ್ಮಿಸಿಕೊಡಲು ಒಂದೂವರೆ ಕೋಟಿ ರೂಪಾಯಿ ಖರ್ಚು ಮಾಡುವುದಾಗಿ ಭರವಸೆ ನೀಡಿದ್ದಕ್ಕೆ ಅಧ್ಯಕ್ಷಗಿರಿ ಮಾರಾಟ ಮಾಡಲಾಗಿದೆ ಎಂದು ಕೈ ಕಾರ್ಯಕರ್ತರು ಆರೋಪಿಸುತ್ತಿದ್ದಾರೆ. ಅಲ್ಲದೇ ಈ ಹಿಂದೆ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸ್ಥಾನವನ್ನೂ ಸಹ ಬಿಎಸ್ಆರ್ ನಿಂದ ಬಂದವರಿಗೆ ನೀಡಿರುವುದರಿಂದ ಪ್ರಾಮಾಣಿಕ ಕಾರ್ಯಕರ್ತರಿಗೆ ಕಾಂಗ್ರೆಸ್ ಪಕ್ಷದಲ್ಲಿ ಬೆಲೆಯಿಲ್ಲವೇ ಎನ್ನುವಂತಾಗಿದೆ.