ಮಂಗಳೂರು: ಪೊಲೀಸರ ಅನುಮತಿ ಇಲ್ಲದೆ ಮಂಗಳೂರು ಕಮಿಷನರೇಟ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಪಾಪ್ಯುಲರ್ ಫ್ರಂಟ್ ಆಫ್ಇಂಡಿಯಾ (ಪಿಎಫ್ಐ) ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.
ಸುರತ್ಕಲ್ ಠಾಣೆ ವ್ಯಾಪ್ತಿಯ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿ ಪಿಎಫ್ಐ ಕಾರ್ಯಕರ್ತರನ್ನು ಬಂಧಿಸಿದ್ದರು. ಆದರೆ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿ ಅಕ್ರಮವಾಗಿ ಕೂಡಿಟ್ಟು ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ಇವತ್ತು ಬೆಳಗ್ಗೆ ಕಮಿಷನರೇಟ್ ಮುಂದೆ ಪಿಎಫ್ಐ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಗಿತ್ತು.
ಅನುಮತಿ ಪಡೆಯದೇ ಪ್ರತಿಭಟನೆಗೆ ಮುಂದಾಗಿದ್ದ ಕಾರ್ಯಕರ್ತರಿಗೆ ಪೊಲೀಸರು ಎಚ್ಚರಿಕೆ ನೀಡಿದ್ರೂ, ಜಗ್ಗದ ಪ್ರತಿಭಟನಾ ನಿರತರನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದರು. ನೂರಾರು ಕಾರ್ಯಕರ್ತರು ಸೇರಿದ್ದರಿಂದ ಉದ್ವಿಗ್ನ ಸ್ಥಿತಿ ನೆಲೆಸಿತ್ತು. ಬಳಿಕ ಕೆಲವು ಕಾರ್ಯಕರ್ತರನ್ನು ಬಲವಂತವಾಗಿ ಹೊತ್ತೊಯ್ದು ಪೊಲೀಸರು ಬಂಧಿಸಿದರು.