ಮುಂಬೈ: ಭ್ರಷ್ಟಾಚಾರದ ಮೂಲಕ ರಾಜ್ಯದ ಅಭಿವೃದ್ಧಿಯನ್ನು ಕುಂಠಿತಗೊಳಿಸುವಲ್ಲಿ ಕಾಂಗ್ರೆಸ್ (Congress) ಹಾಗೂ ಮಿತ್ರಪಕ್ಷಗಳು ಪಿಹೆಚ್ಡಿ ಮಾಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ವಾಗ್ದಾಳಿ ನಡೆಸಿದ್ದಾರೆ.
ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ಚಿಮೂರ್ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಅವರು ಮಾತನಾಡಿದರು. ಈ ವೇಳೆ, ಉದ್ಧವ್ ಠಾಕ್ರೆ ಅವರ ಶಿವಸೇನೆ, ಶರದ್ ಪವಾರ್ ಅವರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ) ಮತ್ತು ಕಾಂಗ್ರೆಸ್ನ ಮೈತ್ರಿಯ ಮಹಾ ವಿಕಾಸ್ ಅಘಾಡಿ (Maha Vikas Aghadi ) ಮಹಾರಾಷ್ಟ್ರದ ಬೆಳವಣಿಗೆಗೆ ಹಾನಿಕಾರಕವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಚಂದ್ರಾಪುರದ ಜನರು ರೈಲು ಸಂಪರ್ಕಕ್ಕೆ ಹಲವು ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತಿದ್ದಾರೆ. ಕಾಂಗ್ರೆಸ್ ಮತ್ತು ಅಘಾಡಿ ಅದಕ್ಕೆ ಅವಕಾಶ ನೀಡಲಿಲ್ಲ. ಮಹಾರಾಷ್ಟ್ರದ ಕ್ಷಿಪ್ರ ಅಭಿವೃದ್ಧಿಯು ಅಘಾಡಿಗೆ ಸಾಧ್ಯವಿಲ್ಲ. ಅವರು ಅಭಿವೃದ್ಧಿ ಕಾರ್ಯಗಳಿಗೆ ಬ್ರೇಕ್ ಹಾಕುವಲ್ಲಿ ಪಿಹೆಚ್ಡಿ ಮಾಡಿದ್ದಾರೆ. ಕಾಂಗ್ರೆಸ್ ಅದರಲ್ಲಿ ಡಬಲ್ ಪಿಹೆಚ್ಡಿ ಮಾಡಿದೆ. ಅವರೆಲ್ಲ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ಮತ್ತು ಗಾಂಧಿ ಕುಟುಂಬದ ವಿರುದ್ಧ, ದೇಶವನ್ನು ಆಳಲು ಹುಟ್ಟಿದೆ ಎಂಬುದು ಕಾಂಗ್ರೆಸ್ನ ಮನಸ್ಥಿತಿಯಾಗಿದೆ. ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ಹಿಂದುಳಿದ ಸಮುದಾಯಗಳ ಪ್ರಗತಿಗೆ ಅದು ಅಡ್ಡಿಪಡಿಸಿದೆ. ದಲಿತರು, ಹಿಂದುಳಿದವರು ಮತ್ತು ಆದಿವಾಸಿಗಳು ಪ್ರಗತಿ ಸಾಧಿಸಲು ಕಾಂಗ್ರೆಸ್ ಎಂದಿಗೂ ಅವಕಾಶ ನೀಡಲಿಲ್ಲ ಎಂದು ಆರೋಪಿಸಿದರು.
ಮಹಾರಾಷ್ಟ್ರದಲ್ಲಿ 288 ಸ್ಥಾನಗಳಿಗೆ ನ.20 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ನ.23 ರಂದು ಫಲಿತಾಂಶ ಪ್ರಕಟವಾಗಲಿದೆ.