– ಕಾಂಗ್ರೆಸ್ಗೆ ಯಾರು ಮತ ಹಾಕಿದ್ರು ಅಂತ ತಿಳಿಯುತ್ತೆ
ಗಾಂಧಿನಗರ: ಕಾಂಗ್ರೆಸ್ಗೆ ಯಾರು ಮತ ಹಾಕಿದರು ಅಂತ ನೋಡಲು ಪ್ರಧಾನಿ ನರೇಂದ್ರ ಮೋದಿ ಅವರು ಮತಗಟ್ಟೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಇಟ್ಟಿದ್ದಾರೆ ಎಂದು ಗುಜರಾತ್ನ ಬಿಜೆಪಿ ಶಾಸಕ ರಮೇಶ್ ಕಟಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ದಾಹೊದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಸ್ವಂತ್ ಸಿನ್ಹಾ ಬಾಭೋರ್ ಅವರ ಪರ ಶಾಸಕರು ಪ್ರಚಾರ ಮಾಡುತ್ತಿದ್ದರು. ಈ ವೇಳೆ ಗ್ರಾಮವೊಂದರಲ್ಲಿ ಮಾತನಾತನಾಡಿದ ಶಾಸಕರು, ನೀವು ಮತದಾನ ಮಾಡುವಾಗ ಮತಯಂತ್ರ (ಇವಿಎಂ)ದಲ್ಲಿರುವ ಜಸ್ವಂತ್ ಸಿನ್ಹಾ ಬಾಭೋರ್ ಅವರ ಭಾವಚಿತ್ರ ಹಾಗೂ ಕಮಲದ ಚಿಹ್ನೆಯ ಪಕ್ಕದಲ್ಲೇ ಹಸಿರು ಗುಂಡಿ ಇರುತ್ತದೆ. ಅದನ್ನು ನೀವು ಒತ್ತಬೇಕು. ಸಿಸಿಟಿವಿ ಕ್ಯಾಮೆರಾಗಳು ಇರುವುದರಿಂದ ಯಾರು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದಾರೆ ಎನ್ನುವುದು ತಿಳಿಯುತ್ತದೆ ಎಂದು ತಿಳಿಸಿದ್ದಾರೆ.
ನೀವು ಯಾರಿಗೆ ಮತ ಹಾಕುತ್ತೀರಿ ಎನ್ನುವುದನ್ನು ತಿಳಿಯಲು ಪ್ರಧಾನಿ ನರೇಂದ್ರ ಮೋದಿ ಅವರು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ. ಕಾಂಗ್ರೆಸ್ಗೆ ಮತ ಹಾಕಿದ ಮತದಾರರಿಗೆ ಉದ್ಯೋಗ ಸೇರಿದಂತೆ ಯಾವುದೇ ಸೌಕರ್ಯಗಳು ಸಿಗುವುದಿಲ್ಲ. ಆದರೆ ಬಿಜೆಪಿಗೆ ಮತದಾನ ಮಾಡಿದವರಿಗೆ ಎಲ್ಲ ರೀತಿಯ ಸೌಕರ್ಯಗಳು ಸಿಗಲಿವೆ ಎಂದು ಹೇಳಿದ್ದಾರೆ.
ರಮೇಶ್ ಕಾತ್ರಾ ಅವರು ದಾಹೊದ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಫತೇಪುರ್ ಶಾಸಕರಾಗಿದ್ದಾರೆ. ಹೀಗಾಗಿ ತಮ್ಮ ಪಕ್ಷದ ಅಭ್ಯರ್ಥಿ ಜಸ್ವಂತ್ ಸಿನ್ಹಾ ಬಾಭೋರ್ ಅವರ ಪರ ಪ್ರಚಾರ ನಡೆಸಿದ್ದಾರೆ. ಸಿಸಿಟಿವಿ ಕ್ಯಾಮೆರಾ ಬಗ್ಗೆ ಶಾಸಕರು ನೀಡಿರುವ ಹೇಳಿಕೆಯ ಬಗ್ಗೆ ವಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಮೊದಲು ಸುಲ್ತಾನಪುರದ ಬಿಜೆಪಿ ಅಭ್ಯರ್ಥಿಯಾಗಿರುವ, ಕೇಂದ್ರ ಸಚಿವೆ ಮನೇಕಾ ಗಾಂಧಿ, ಮುಸ್ಲಿಮರ ಮತಗಳ ಹೊರತಾಗಿ ನಾನು ಜಯ ಸಾಧಿಸುತ್ತೇನೆ. ಮುಸ್ಲಿಂ ಸಮುದಾಯದ ಮತ ಪಡೆಯದೇ ಜಯ ಸಾಧಿಸಲು ನನಗೆ ಇಷ್ಟವಿಲ್ಲ. ಗೆದ್ದ ಮೇಲೆ ಕೆಲಸ ಕೇಳಿಕೊಂಡು ಮುಸ್ಲಿಮರು ಬಂದಾಗ ನಾನು ನೂರು ಬಾರಿ ಯೋಚಿಸಿ ಉದ್ಯೋಗ ನೀಡೋದು ಬೇಡ ಎಂದು ನಿರ್ಧರಿಸಬೇಕಾಗುತ್ತದೆ. ಮತದ ಬದಲಾಗಿ ಉದ್ಯೋಗ ನೀಡೋದು ವ್ಯವಹಾರ ಎಂದು ಮುಸ್ಲಿಮರು ತಿಳಿದುಕೊಳ್ಳಬೇಕಿದೆ. ನಾವೇನು ಮಹಾತ್ಮ ಗಾಂಧೀಜಿಯ ಕುಟುಂಬಸ್ಥರು ಅಲ್ಲ. ಕೇವಲ ಕೊಡುವುದು ಗೊತ್ತಿಲ್ಲ. ನಮ್ಮ ಕೆಲಸಕ್ಕೆ ಪ್ರತಿಯಾಗಿ ನೀವು ನಮಗೆ ಮತ ನೀಡಬೇಕೆಂದು ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದರು.