ಲಕ್ನೋ: ತಮ್ಮ ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು ಪ್ರಧಾನಿ ನರೇಂದ್ರ ಮೋದಿ ಜಮ್ಮು-ಕಾಶ್ಮೀರದ ಸದ್ಯದ ಪರಿಸ್ಥಿತಿಯನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಬಿಎಸ್ಪಿ ನಾಯಕಿ ಮಾಯಾವತಿ ಆರೋಪಿಸಿದ್ದಾರೆ.
ಲಕ್ನೋದಲ್ಲಿ ಇಂದು ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಕೆಲ ದಿನಗಳಿಂದ ಜಮ್ಮು-ಕಾಶ್ಮೀರದಲ್ಲಿ ನಡೆಯುತ್ತಿರುವ ಉಗ್ರರ ದಾಳಿಯಿಂದ ಪ್ರಜೆಗಳು ಆತಂಕದಲ್ಲಿದ್ದಾರೆ. ಆದ್ರೆ ತಮ್ಮ ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು ಮೋದಿ ಮತ್ತು ಬಿಜೆಪಿ ನಾಯಕರು ಮಾತ್ರ ಜಮ್ಮು-ಕಾಶ್ಮೀರದ ಸ್ಥಿತಿಗತಿಯನ್ನು ಹೇಗೆ ರಾಜಕೀಯಕ್ಕೆ ಉಪಯೋಗಿಸಿಕೊಳ್ಳುತ್ತಿದ್ದಾರೆ ಎಂಬ ವಿಷಯ ಜನತೆಗೆ ಗೊತ್ತಾಗುತ್ತಿದೆ ಎಂದು ಟೀಕಿಸಿದರು.
ರಾಜಕೀಯಕೋಸ್ಕರ ದೇಶದ ಭದ್ರತೆ ವಿಚಾರವನ್ನು ಕಡೆಗಣಿಸಲಾಗುತ್ತಿದೆ. ಇಂತಹ ಸ್ಥಿತಿಯನ್ನು ಎದುರಿಸಲು ಭಾರತಕ್ಕೆ ದೃಢ ನಿರ್ಧಾರ ತೆಗೆದುಕೊಂಡು ಸಮಸ್ಯೆಗಳನ್ನು ಪರಿಹರಿಸುವ ನಾಯಕರು ಬೇಕಾಗಿದ್ದಾರೆ. ದೇಶದ ಭದ್ರತೆ, ಸಮಸ್ಯೆ ಬಗ್ಗೆ ಗಮನ ಹರಿಸುವ ಬದಲು ಪ್ರಧಾನಿಯವರು ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲು ಮೆಗಾ ವಿಡಿಯೋ ಕಾನ್ಫರೆನ್ಸ್ ಮಾಡಿದರು. ಶತ್ರು ದೇಶ ನಮ್ಮ ಮೇಲೆ ಹಗೆ ಸಾಧಿಸುತ್ತಿರುವ ಸಂದರ್ಭದಲ್ಲಿ ಪ್ರಧಾನಿ ಮಾತ್ರ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ಇದು ದೇಶಕ್ಕೆ ಹಾಗೂ ಜನತೆಯ ಭಾವನೆಗಳಿಗೆ ದ್ರೋಹ ಬಗೆಯುವ ಕೆಲಸ. ಒಂದು ರೀತಿ ಹಾಸ್ಯಾಸ್ಪದ ವರ್ತನೆ ಎಂದು ಮಾಯಾವತಿ ಟಾಂಗ್ ನೀಡಿದ್ದಾರೆ.
ಮಾಯಾವತಿ-ಅಖಿಲೇಶ್ ಯಾದವ್ ಜೊತೆಗೂಡಿ ಲೋಕಸಭೆ ಚುನಾವಣೆಯನ್ನು ಮೈತ್ರಿ ಮೂಲಕ ಎದುರಿಸಲು ಮುಂದಾಗಿದ್ದಾರೆ. ಆದರಿಂದ ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಉತ್ತರಾಖಂಡ್ ಮೂರು ರಾಜ್ಯಗಳಲ್ಲಿ ಈ ಮೈತ್ರಿ ಅಖಾಡಕ್ಕೆ ಇಳಿಯಲು ತಿರ್ಮಾನಿಸಿದ್ದು, ಲೋಕಸಭೆಯಲ್ಲಿ ಒಟ್ಟು 110 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಲೋಕಸಭೆ ಚುನಾವಣೆಗೆ ಕೆಲವು ದಿನಗಳು ಮಾತ್ರ ಬಾಕಿಯಿದ್ದು, ಎಲ್ಲಾ ರಾಜಕೀಯ ಪಕ್ಷದ ನಾಯಕರು ಚುನಾವಣಾ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv