ನವದೆಹಲಿ: ವಯನಾಡಿನ (Wayanad) ಭೂಕುಸಿತಗೊಂಡ (Landslides) ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಶನಿವಾರ ಭೇಟಿ ನೀಡಲಿದ್ದು, ಪರಿಹಾರ ಮತ್ತು ಪುನರ್ವಸತಿ ಪರಿಶೀಲಿಸಲಿದ್ದಾರೆ.
ಅವರು ಬೆಳಗ್ಗೆ 11 ಗಂಟೆ ಸುಮಾರಿಗೆ ಕಣ್ಣೂರು ತಲುಪಲಿದ್ದಾರೆ. ನಂತರ ವಯನಾಡಿನಲ್ಲಿ ಭೂಕುಸಿತ ಪೀಡಿತ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಬಳಿಕ ದುರಂತದಲ್ಲಿ ಬದುಕುಳಿದವರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅಧಿಕಾರಿಗಳು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ತಂಡಗಳ ಪ್ರಯತ್ನ ಹಾಗೂ ಇಲ್ಲಿನ ಸ್ಥಿತಿಗತಿಗಳ ಬಗ್ಗೆ ಅವರಿಗೆ ತಿಳಿಸುತ್ತೇವೆ ಎಂದು ಹೇಳಿದ್ದಾರೆ.
ನಂತರ ಪ್ರಧಾನಿ ಮೋದಿಯವರು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಘಟನೆ ಮತ್ತು ನಡೆಯುತ್ತಿರುವ ಪರಿಹಾರ ಪ್ರಯತ್ನಗಳ ಬಗ್ಗೆ ವಿವರವಾಗಿ ಚರ್ಚಿಸಲಿದ್ದಾರೆ.
ಜು.30 ರಂದು ವಯನಾಡಲ್ಲಿ ಭೂಕುಸಿತ ಸಂಭವಿಸಿದ ನಂತರ ಕನಿಷ್ಠ 226 ಜನರು ಸಾವನ್ನಪ್ಪಿದ್ದರು. ಅನೇಕರು ಈ ದುರಂತದಲ್ಲಿ ನಾಪತ್ತೆಯಾಗಿದ್ದಾರೆ. ಇದು ಕೇರಳಕ್ಕೆ ಅಪ್ಪಳಿಸಿದ ಅತಿದೊಡ್ಡ ನೈಸರ್ಗಿಕ ವಿಕೋಪಗಳಲ್ಲಿ ಒಂದಾಗಿದೆ.