ನವದೆಹಲಿ: ಇಂಧನಗಳ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (VAT) ಕಡಿತಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಗಳಿಗೆ ಮನವಿ ಮಾಡಿದ್ದಾರೆ.
ಒಕ್ಕೂಟ ವ್ಯವಸ್ಥೆಗೆ ಸಹಕಾರಿಯಾಗಿ ಈ ಕ್ರಮಕೈಗೊಳ್ಳಬೇಕಿದೆ. ಈ ಮನೋಭಾವದಿಂದಾಗಿ ಕೋವಿಡ್ ವಿರುದ್ಧ ಸುದೀರ್ಘ ಹೋರಾಟ ನಡೆಸಲು ಸಾಧ್ಯವಾಯಿತು. ಯುದ್ಧದ ಪರಿಸ್ಥಿತಿಯಿಂದಾಗಿ ಜಾಗತಿಕವಾಗಿ ಸೃಷ್ಟಿಯಾಗಿರುವ ಆರ್ಥಿಕ ಸಮಸ್ಯೆಗಳ ಪರಿಹಾರಕ್ಕೂ ಅದೇ ರೀತಿ ಮಾಡಬೇಕಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್ ಉಪ-ತಳಿಗಳು ಅಪಾಯವನ್ನುಂಟು ಮಾಡುತ್ತವೆ: ಮೋದಿ ಎಚ್ಚರಿಕೆ
ನಾನು ಯಾರನ್ನೂ ಟೀಕಿಸುತ್ತಿಲ್ಲ, ಚರ್ಚಿಸುತ್ತಿದ್ದೇನಷ್ಟೆ. ಕಾರಣಾಂತರಗಳಿಂದ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ಮತ್ತು ಜಾರ್ಖಂಡ್ ರಾಜ್ಯಗಳು ಇಂಧನದ ಮೇಲಿನ ಮೌಲ್ಯವರ್ಧಿತ ತೆರಿಗೆ ಕಡಿತಗೊಳಿಸಲು ಒಪ್ಪಲಿಲ್ಲ. ಪರಿಣಾಮವಾಗಿ ಹೆಚ್ಚಿನ ಬೆಲೆಗಳ ಹೊರೆ ನಾಗರಿಕರ ಮೇಲೆ ಉಳಿಯಿತು ಎಂದು ಹೇಳಿದ್ದಾರೆ.
ನಾಗರಿಕರ ಮೇಲಿನ ಹೊರೆಯನ್ನು ಕಡಿಮೆ ಮಾಡಲು ಕೇಂದ್ರವು ಕಳೆದ ನವೆಂಬರ್ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿದೆ. ರಾಜ್ಯಗಳು ತಮ್ಮ ತೆರಿಗೆಯನ್ನು ಕಡಿಮೆ ಮಾಡಿ ಅದರ ಲಾಭವನ್ನು ಜನರಿಗೆ ವರ್ಗಾಯಿಸುವಂತೆ ನಾವು ವಿನಂತಿಸಿದ್ದೇವೆ. ಕೆಲವು ರಾಜ್ಯಗಳು ತೆರಿಗೆಯನ್ನು ಕಡಿಮೆ ಮಾಡಿವೆ. ಆದರೆ ಇನ್ನೂ ಕೆಲವು ರಾಜ್ಯಗಳು ಜನರಿಗೆ ಇದರಿಂದ ಯಾವುದೇ ಪ್ರಯೋಜನ ನೀಡಿಲ್ಲ. ಇದರಿಂದಾಗಿ ಈ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚುತ್ತಲೇ ಇದೆ. ಇದರಿಂದ ಈ ರಾಜ್ಯಗಳ ಜನತೆಗೆ ಅನ್ಯಾಯವಾಗಿರುವುದಲ್ಲದೇ ಬೇರೆ ರಾಜ್ಯಗಳ ಮೇಲೂ ಪರಿಣಾಮ ಬೀರಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸದ್ಯಕ್ಕೆ ಟಫ್ ರೂಲ್ಸ್ ಜಾರಿಯಿಲ್ಲ: ಸಿಎಂ