ಬಳ್ಳಾರಿ: ವಿಶ್ವ ವಿಖ್ಯಾತ ಹಂಪಿಯ ಸ್ಮಾರಕಗಳನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಲ್ಲಿ ಬೆಂಗಳೂರಿನ ಇಬ್ಬರು ಹಾಗೂ ಹೈದರಾಬಾದ್ನ ಒಬ್ಬ ಯುವಕ ಇದ್ದು, ಮತ್ತೊರ್ವ ಆರೋಪಿಗಾಗಿ ಪೊಲೀಸರು ಬಿಹಾರದಲ್ಲಿ ಹುಡುಕಾಟ ನಡೆಸಿದ್ದಾರೆ ಎನ್ನಲಾಗಿದೆ. ಸದ್ಯ ಬಂಧನಕ್ಕೆ ಒಳಗಾಗಿರುವ ಆರೋಪಿಗಳು ತಮ್ಮ ಕೃತ್ಯದ ಬಗ್ಗೆ ತಪ್ಪೊಪ್ಪಿಗೆ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.
ಪ್ರಕರಣ ಬೆಳಕಿಗೆ ಬಂದ ಬಳಿಕ ಆರೋಪಿಗಳನ್ನು ಬಂಧಿಸಲು ಪೊಲೀಸರು 3 ತಂಡಗಳಲ್ಲಿ ಕಾರ್ಯಾಚರಣೆ ನಡೆಸಿದ್ದರು. ಸದ್ಯ ಒಂದು ತಂಡ ಮತ್ತೊರ್ವ ಆರೋಪಿಯ ಬಂಧನಕ್ಕಾಗಿ ಬಿಹಾರಕ್ಕೆ ತೆರಳಿದ್ದು, ಅಲ್ಲಿ ಶೋಧ ಕಾರ್ಯ ನಡೆಸಿದೆ. ಸದ್ಯ ಆರೋಪಿಗಳು ರಕ್ಷಣೆ ಕೋರಿದ ಹಿನ್ನೆಲೆಯಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಗೌಪ್ಯವಾಗಿಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಏನಿದು ಪ್ರಕರಣ?
ಹಂಪಿಯ ಗಜರಾಜ ಶಾಲೆಯ ಹಿಂಭಾಗದ ಸಾಲು ಕಂಬಗಳನ್ನು ಕಿಡಗೇಡಿಗಳು ಉರುಳಿಸಿ ಧ್ವಂಸ ಮಾಡಿದ್ದರು. ಅಲ್ಲದೇ ಈ ಕೃತ್ಯವನ್ನು ತಮ್ಮ ಮೊಬೈಲ್ ಫೋನಿನಲ್ಲಿ ಸೆರೆ ಹಿಡಿದಿದ್ದರು. ವಿಡಿಯೋವನ್ನು ಆಯುಷ್ ಸಾಹು ಎಂಬುವರು ಇನ್ಸ್ಟಾಗ್ರಾಮ್ ಪೋಸ್ಟ್ ಮಾಡಿದ್ದರು. ಆದರೆ ಈ ವಿಡಿಯೋಗೆ ಟೀಕೆ ವ್ಯಕ್ತವಾದ ಬಳಿಕ ಡಿಲೀಟ್ ಮಾಡಿದ್ದರು.
ಇದೇ ವಿಡಿಯೋವನ್ನು ಬೆಂಗಳೂರಿನ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು, ಸೇವ್ ಹಂಪಿ ಹೆಸರಿನಲ್ಲಿ ಪೋಸ್ಟ್ ಮಾಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಾಕಷ್ಟು ವೈರಲ್ ಆದ ಬಳಿಕ ಪೊಲೀಸ್ ಇಲಾಖೆ, ಪ್ರಾಚ್ಯ ವಸ್ತು ಮತ್ತು ಪುರಾತತ್ವ ಇಲಾಖೆ ಎಚ್ಚೆತ್ತುಕೊಂಡಿತ್ತು.
ಪ್ರಕರಣದ ಬೆಳಕಿಗೆ ಬಂದ ಬಳಿಕ ಬಳ್ಳಾರಿ ಜಿಲ್ಲಾ ಎಸ್ಪಿ ಅರುಣ್ ರಂಗರಾಜನ್ ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲನೆ ನಡೆಸಿದ್ದು. ಅಲ್ಲದೇ ಸ್ಮಾರಕ ನಾಶ ಬಗ್ಗೆ ಹಲವು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv