ದಿಸ್ಪುರ್: ಕಸ್ಟಡಿಯಲ್ಲಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿ ಆಕ್ರೋಶಗೊಂಡಿದ್ದ ಸ್ಥಳೀಯ ಗುಂಪೊಂದು ಶನಿವಾರ ಸಂಜೆ ಅಸ್ಸಾಂನ ನಾಗಾಂವ್ನಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದೆ.
ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ವೇಳೆ ಮೂವರು ಗಾಯಗೊಂಡಿದ್ದು, ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ರಾತ್ರಿ ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ರಸ್ತೆಯಲ್ಲಿ ಕಂಡುಬಂದಿದ್ದ. ಅವನನ್ನು ಪೊಲೀಸ್ ಠಾಣೆಗೆ ಕರೆತರಲಾಗಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕುಡಿದ ಅಮಲಿನಲ್ಲಿದ್ದ ವ್ಯಕ್ತಿ ಸಫಿಕುಲ್ ಇಸ್ಲಾಂನನ್ನು ಪೊಲೀಸರು ಠಾಣೆಗೆ ಕರೆತಂದಾಗ, ಆತನ ಬಿಡುಗಡೆಗೆ 10,000 ರೂ. ಲಂಚ ಕೇಳಿದ್ದರು. ಆತನಿಗೆ ಹಣ ನೀಡಲು ಸಾಧ್ಯವಾಗದಿದ್ದಾಗ ಹಲ್ಲೆ ನಡೆಸಿ, ಹತ್ಯೆಗೈದಿದ್ದಾರೆ ಎಂದು ಆತನ ಕುಟುಂಬದವರು ಆರೋಪಿಸಿದ್ದಾರೆ. ಇದನ್ನೂ ಓದಿ: ಇಂದು 155 ಕೇಸ್ – 166 ಮಂದಿ ಆಸ್ಪತ್ರೆಯಿಂದ ಬಿಡುಗಡೆ
ಸಫಿಕುಲ್ನನ್ನು ಭೇಟಿಯಾಗಲು ಆತನ ಕುಟುಂಬಸ್ಥರು ಶನಿವಾರ ಪೊಲೀಸ್ ಠಾಣೆಗೆ ಹೋದಾಗ ಆತ ಅಸ್ವಸ್ಥನಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದರು. ನಾವು ಆಸ್ಪತ್ರೆಗೆ ಹೋದಾದ ಆತ ಮೃತಪಟ್ಟಿದ್ದು, ದೇಹವನ್ನು ಶವಾಗಾರದಲ್ಲಿ ಇರಿಸಲಾಗಿತ್ತು ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಡುವು ನೀಡಿದ ಮಳೆರಾಯ
ಘಟನೆಯಿಂದ ಆಕ್ರೋಶಗೊಂಡಿದ್ದ ಮೃತ ಸಫಿಕುಲ್ ಕುಟುಂಬ ಸ್ಥಳೀಯ ನಿವಾಸಿಗಳ ದೊಡ್ಡ ಗುಂಪಿನೊಂದಿಗೆ ಪೊಲೀಸ್ ಠಾಣೆಗೆ ನುಗ್ಗಿ, ಬೆಂಕಿ ಹಚ್ಚಿದ್ದಾರೆ ಎಂದು ವರದಿಯಾಗಿದೆ.