ಬೆಂಗಳೂರು: ನಾಗರಿಕ ಹಕ್ಕುಗಳನ್ನ ರಕ್ಷಿಸುವಲ್ಲಿ ರಾಜಕೀಯ ಪಕ್ಷಗಳು ವಿಫಲ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್. ಎಸ್ ದೊರೆಸ್ವಾಮಿ ಕಳವಳ ಹೊರಹಾಕಿದ್ದಾರೆ.
ನಗರದ ಫ್ರೀಡಂಪಾರ್ಕ್ ಬಳಿ ಮಾತನಾಡಿದ ಅವರು, ದೇಶದಲ್ಲಿ ಆರ್ಥಿಕ ಸ್ಥಿತಿ ಅದಃಪತನದತ್ತ ಸಾಗುತ್ತಿದೆ. ನೋಟ್ ಬ್ಯಾನ್, ಜಿಎಸ್ಟಿ ಸಂಕಟದಿಂದ ದೇಶದ ಜನತೆ ಅನಗತ್ಯವಾಗಿ ತೊಂದರೆಗೆ ಸಿಲುಕಿದ್ದಾರೆ. ರಾಜಕೀಯ ಪಕ್ಷಗಳು ನಾಗರಿಕ ಹಕ್ಕುಗಳನ್ನು ರಕ್ಷಣೆ ಮಾಡುವಲ್ಲಿ ವಿಫಲವಾಗಿವೆ. ನಮ್ಮ ಹಕ್ಕುಗಳನ್ನು ನಾವೇ ರಕ್ಷಿಸಿಕೊಳ್ಳುವ ಅನಿವಾರ್ಯತೆ ಬಂದಿದೆ ಎಂದು ಹೆಚ್. ಎಸ್ ದೊರೆಸ್ವಾಮಿ ಹಾಗೂ ಇತಿಹಾಸಕಾರ ರಾಮಚಂದ್ರ ಗುಹಾ ನಗರದ ಫ್ರೀಡಂಪಾರ್ಕ್ ಬಳಿ ಪ್ರತಿಭಟನೆ ನಡೆಸಿದರು.
ಪ್ರಜಾಧಿಕಾರ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದರು. ದೇಶದ ಜ್ಯಾತತೀತ ಸ್ವರೂಪವನ್ನ ನಾಶ ಮಾಡಲು ಮುಸ್ಲಿಂರನ್ನ ಹೊರತುಪಡಿಸುವ ಸಿಎಎ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಸ್ವಾತಂತ್ರ್ಯ ಸಂಸ್ಥೆಗಳಾದ ಇಡಿ, ಐಟಿ, ಸಿಬಿಐ, ಆರ್ಬಿಐಯನ್ನು ತನ್ನ ಹಿಡಿತದಲ್ಲಿ ಇಟ್ಟುಕೊಂಡಿದೆ. ಕೇಂದ್ರ ಸರ್ಕಾರ ರೈತರ ಬಗ್ಗೆ ನಿರ್ಲಕ್ಷ್ಯ ಧೋರಣೆ ತಾಳುತ್ತಿದೆ. ದೇಶದ ಆರ್ಥಿಕ ಸ್ಥಿತಿ ಚಿಂತಾಜನಕವಾಗಿದೆ. ಕೇಂದ್ರ ಸರ್ಕಾರ ಜನ ವಿರೋಧಿ ಯೋಜನೆಗಳನ್ನು ಜಾರಿಗೆ ತರುತ್ತಿದೆ ಎಂದು ಪ್ರತಿಭಟನೆಯಲ್ಲಿ ಆಕ್ರೋಶವನ್ನು ಹೊರಹಾಕಿದರು.