ಬೆಂಗಳೂರು: ಇಲಾಖೆಯ ಬಲವರ್ಧನೆಗೆ ಶ್ರಮಿಸಿ ಇಲ್ಲವೇ ಜಾಗ ಖಾಲಿ ಮಾಡಿ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ಹೆಬ್ಬಾಳದಲ್ಲಿ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ಹೊರಹಾಕಿದರು.
ಕೇಂದ್ರ ಸ್ಥಾನದಲ್ಲಿ ಅಧಿಕಾರಿಗಳು ಇರುವುದೇ ಇಲ್ಲ. ರೈತರ ಸಮಸ್ಯೆಗಳಿಗೆ ಸ್ಪಂದನೆ ನೀಡುತ್ತಿಲ್ಲ ಎಂಬ ಆರೋಪ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ ಎಂದು ಸಚಿವರು ಅಧಿಕಾರಿಗಳನ್ನು ಪ್ರಶ್ನೆ ಮಾಡಿದರು. ಕೃಷಿಯೊಂದಿಗೆ ರೈತಾಪಿ ವರ್ಗ ಪಶುಸಂಗೋಪನೆಯನ್ನು ಅವಲಂಬಿಸಿದ್ದಾರೆ. ಸಕಾಲದಲ್ಲಿ ಜಾನುವಾರುಗಳ ಆರೋಗ್ಯ ನೋಡಿಕೊಳ್ಳಲು ಅವರೆಲ್ಲ ನಮ್ಮ ಇಲಾಖೆಯನ್ನು ಅವಲಂಬಿಸಿದ್ದಾರೆ. ಇಂತಹ ಸಮಯದಲ್ಲಿ ಕರ್ತವ್ಯ ಲೋಪವಾದರೆ ಪಶುಪಾಲಕರಿಗೆ ಆರ್ಥಿಕ ಸಂಕಷ್ಟ, ಜಾನುವಾರುಗಳು ಜೀವ ಕಳೆದುಕೊಳ್ಳುವಂತಹ ಪರಿಸ್ಥಿತಿ ಎದುರಾಗುತ್ತದೆ ಎಂದು ಅವರು ಮಾತನಾಡಿದರು. ಇದನ್ನೂ ಓದಿ: ಕೋವಿಡ್ ಟಫ್ ರೂಲ್ಸ್ ಜಾರಿಯಾದ್ರೂ ಪಾದಯಾತ್ರೆ ಮಾಡೇ ಮಾಡ್ತೀವಿ: ಸಿದ್ದರಾಮಯ್ಯ
ಉತ್ತರಪ್ರದೇಶದಲ್ಲಿ 17 ಸಾವಿರ ಜಾನುವಾರುಗಳಿಗೆ ಒಬ್ಬ ಪಶುವೈದ್ಯರಿದ್ದಾರೆ. ಆದರೆ ನಮ್ಮಲ್ಲಿ ಅಂದಾಜು 4 ಸಾವಿರ ಜಾನುವಾರುಗಳಿಗೆ ಒಬ್ಬ ಪಶುವೈದ್ಯರಿದ್ದಾರೆ. ಇಂತಹ ಸಮಯದಲ್ಲಿ ನಿರ್ಹವಣೆ ಬೇರೆ ರಾಜ್ಯಕ್ಕೆ ಹೋಲಿಸಿದರೆ ನಮ್ಮಲ್ಲಿ ಹೆಚ್ಚು ಒತ್ತಡವಿಲ್ಲ. ಹೀಗಾಗಿ ಜಾನುವಾರುಗಳಿಗೆ ಹೆಚ್ಚು ಸಮರ್ಪಕವಾಗಿ ಚಿಕಿತ್ಸೆ ನೀಡಬಹುದಾಗಿದೆ. ನಿಮಗೆ ಬೇರೆ ರಾಜ್ಯದ ಪಶುವೈದ್ಯರಷ್ಟು ಒತ್ತಡವಿಲ್ಲ. ಹೀಗಾಗಿ ಜವಾಬ್ದಾರಿಯಿಂದ ಸಮಯಪ್ರಜ್ಞೆಯಿಂದ ಕರ್ತವ್ಯ ನಿರ್ವಹಣೆ ಮಾಡಿ ಎಂದು ತಿಳಿಸಿದರು. ಇದನ್ನೂ ಓದಿ: ಬಿಜೆಪಿಯವರಿಗೆ ಮೆದುಳಿಗೆ ನಾಲಿಗೆಗೆ ಕನೆಕ್ಷನ್ ಇಲ್ಲ: ಶಿವರಾಜ್ ತಂಗಡಗಿ