ನವದೆಹಲಿ: ಕಳಸಾ ಬಂಡೂರಿ ನಾಲಾ ಯೋಜನೆಗೆ ಮತ್ತೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಕಾಮಗಾರಿ ಆರಂಭಿಸಲು ನಮ್ಮ ತಕರಾರಿಲ್ಲ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಸ್ಪಷ್ಟಪಡಿಸಿದ್ದಾರೆ.
ಈ ಸಂಬಂಧ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಜಾವ್ಡೇಕರ್, ಕುಡಿಯುವ ನೀರಿನ ಯೋಜನೆಗೆ ಪರಿಸರ ಇಲಾಖೆ ಒಪ್ಪಿಗೆ ಬೇಕಿಲ್ಲ, ಹೀಗಾಗಿ ಕಳಸಾ ಬಂಡೂರಿ ಯೋಜನೆ ಆರಂಭಿಸಬಹುದು. ನ್ಯಾಯಾಧೀಕರಣ ಆದೇಶದ ಹೊರಡಿಸಿದ ಮೇಲೆ ಅರಣ್ಯ ಮತ್ತು ವನ್ಯಜೀವಗಳ ಇಲಾಖೆಯಿಂದ ಒಪ್ಪಿಗೆ ಪಡೆದು ಕಾಮಗಾರಿ ಆರಂಭಿಸಬಹುದು ಎಂದು ತಿಳಿಸಿದ್ದಾರೆ.
ಕಳಸಾ ಬಂಡೂರಿ ಯೋಜನೆ ಆರಂಭಿಸಲು ಕೇಂದ್ರ ಸರ್ಕಾರದ ತಡೆ ಇಲ್ಲ ನಿಮ್ಮ ಮನವಿಯನ್ನು ಆಧರಿಸಿ ಈ ಸಂಬಂಧ ಇದ್ದ ಗೊಂದಲಗಳನ್ನು ಬಗೆಹರಿಸಿದ್ದೇವೆ ಎಂದು ಭಾವಿಸಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಮಹದಾಯಿ ನ್ಯಾಯಾಧೀಕರಣ ತೀರ್ಪಿನ ಬಳಿಕ ಕಳಸಾ ಬಂಡೂರಿ ಕಾಮಗಾರಿ ಆರಂಭಿಸಿಲು ಕೇಂದ್ರ ಪರಿಸರ ಇಲಾಖೆ ಒಪ್ಪಿಗೆ ನೀಡಿತ್ತು. ಈ ವೇಳೆ ಗೋವಾ ಸರ್ಕಾರದ ನಿಯೋಗ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಭೇಟಿಯಾಗಿ ಅನುಮತಿ ರದ್ದು ಮಾಡುವಂತೆ ಮನವಿ ಮಾಡಿತ್ತು. ಇದರ ಬೆನ್ನಲ್ಲೇ ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣ ಬಾಕಿ ಇರುವ ಕಾರಣ ಅನುಮತಿ ತಡೆ ಹಿಡಿಯಲಾಗಿದೆ ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ಪತ್ರ ಬರೆಯಲಾಗಿತ್ತು. ಈ ಪತ್ರದ ಬೆನ್ನಲ್ಲೇ ರಾಜ್ಯದಲ್ಲಿ ಹೋರಾಟಗಳು ನಡೆದಿದ್ದವು. ಅಲ್ಲದೆ ತಡೆ ರದ್ದು ಮಾಡುವಂತೆ ಕಳೆದ ವಾರ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಶಾಸಕ ಉಮೇಶ್ ಕತ್ತಿ ಅವರು ಜಾವ್ಡೇಕರ್ ಭೇಟಿ ಮಾಡಿ ಕಾಮಗಾರಿಗೆ ಯೋಜನೆಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದರು.