ಚಿಕ್ಕಮಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ರಾಜ್ಯಾದ್ಯಂತ ತಲ್ಲಣ ಸೃಷ್ಟಿಸಿದ್ದು, ಕಾಂಗ್ರೆಸ್ ಸರ್ಕಾರವಿದ್ದಿದ್ದರೇ ಬೀದಿಯಲ್ಲಿ ಕಲ್ಲು ಹೊಡೆಯಬಹುದಿತ್ತು ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಮೊಬೈಲ್ ಸಂಭಾಷಣೆ ಭಾರೀ ವೈರಲ್ ಆಗಿದೆ.
ಸಂಸದ ತೇಜಸ್ವಿ ಸೂರ್ಯ ಹಾಗೂ ಚಿಕ್ಕಮಗಳೂರು ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂದೀಪ್ ಅರವಿನಂಗಡಿ ನಡುವೆ ನಡೆದ ಮೊಬೈಲ್ ಸಂಭಾಷಣೆ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಪ್ರವೀಣ್ ನೆಟ್ಟಾರ್ ಹತ್ಯೆಯಿಂದ ಬೇಸತ್ತು ಚಿಕ್ಕಮಗಳೂರು ಜಿಲ್ಲಾ ಯುವ ಮೋರ್ಚಾದ 9 ಮಂಡಲದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ನಿನ್ನೆ ಸಾಮೂಹಿಕ ರಾಜೀನಾಮೆ ನೀಡಿದ್ದರು. ರಾಜ್ಯದಲ್ಲಿ ಹಿಂದೂಗಳ ಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪ್ರತಿ ಬಾರಿ ಹತ್ಯೆಯಾದಗಲೂ ಸರ್ಕಾರ ಕಠಿಣ ಕ್ರಮಕೈಗೊಳ್ಳುತ್ತೇವೆ ಎಂದು ನೀಡುತ್ತಿರುವ ಭರವಸೆ ಬರೀ ಭರವಸೆಯಾಗಿ ಉಳಿಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರವೀಣ್ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಬೊಮ್ಮಾಯಿ
ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ ಬಳಿಕ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರು ಸಂದೀಪ್ ಅರವಿನಂಗಡಿ ಅವರಿಗೆ ದೂರವಾಣಿ ಕರೆ ಮಾಡಿ ಸಾಮಾಹಿಕ ರಾಜೀನಾಮೆಯನ್ನು ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ.
ಈ ವೇಳೆ ಮಾತುಕತೆ ಸಂದರ್ಭದಲ್ಲಿ ಪ್ರವೀಣ್ ಹತ್ಯೆ ವಿಚಾರವಾಗಿ ನಮಗೂ ಬೇಸರ ಮೂಡಿಸಿದೆ. ನಿಮಗಿಂತ ಹತ್ತು ಪರ್ಸೆಂಟ್ ಜಾಸ್ತಿ ರೋಷವಿದೆ. ರಾಜ್ಯದಲ್ಲಿ ನಮ್ಮದೆ ಸರ್ಕಾರವಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಹತ್ಯೆಯಾಗಿದ್ದರೇ ಬೀದಿಯಲ್ಲಿ ನಿಂತು ಕಲ್ಲು ಹೊಡೆಯಬಹುದಿತ್ತು ಎಂದ ಅವರು, ರಾಜೀನಾಮೆಯನ್ನು ವಾಪಸ್ ಪಡೆದುಕೊಳ್ಳಿ. ಯುವ ಮೋರ್ಚಾದಿಂದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಹತ್ಯೆಕೋರರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸೋಣ ಎಂದು ತಿಳಿಸಿದ್ದಾರೆ.