ಮಂಗಳೂರು: ನಿನ್ನೆ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಪಂಚಾಭೂತಗಳಲ್ಲಿ ಲೀನರಾದರು.
ಪ್ರವೀಣ್ ಮೃತದೇಹವನ್ನು ಪುತ್ತೂರಿನಿಂದ ಮೆರವಣಿಗೆ ಮೂಲಕ ಅವರ ಸ್ವಗೃಹಕ್ಕೆ ತರಲಾಗಿತ್ತು. ಸಾರ್ವಜನಿಕರ ಅಂತಿಮ ದರ್ಶನದ ಬಳಿಕ ಬಿಲ್ಲವ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಮಂತ್ರ ಪಠಣದ ಬಳಿಕ ಮನೆ ಸಮೀಪದಲ್ಲೇ ಪ್ರವೀಣ್ ಚಿತೆಗೆ ಮೂವರು ಮಾವಂದಿರಾದ ಶೀನಪ್ಪ ಪೂಜಾರಿ, ಲಿಂಗಪ್ಪ ಪೂಜಾರಿ, ಲೋಕೇಶ್ ಪೂಜಾರಿ ಅಗ್ನಿ ಸ್ಪರ್ಶ ಮಾಡಿದ್ದಾರೆ.
ಹಿಂದೂ ಸಂಪ್ರದಾಯದಂತೆ ಪ್ರವೀಣ್ ನೆಟ್ಟಾರ್ ಅವರ ಅಂತ್ಯ ಸಂಸ್ಕಾರವನ್ನು ನೆರವೇರಿಸಿದರು. ಸಂಘಪರಿವಾರದ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು. ಇತ್ತ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಇದನ್ನೂ ಓದಿ: ಪ್ರವೀಣ್ ಹತ್ಯೆ ಖಂಡಿಸಿ ಬಾಗಲಕೋಟೆ ಯುವ ಮೋರ್ಚಾದ ಕಾರ್ಯಕರ್ತರು ರಾಜೀನಾಮೆ
ಘಟನೆ ಏನು?: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು(31), ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು. ಇದನ್ನೂ ಓದಿ: ನಳಿನ್ ಕುಮಾರ್ ಕಾರನ್ನು ಎತ್ತಲು ಪ್ರಯತ್ನಿಸಿದ ಕಾರ್ಯಕರ್ತರು – ಬೆಳ್ಳಾರೆಯಲ್ಲಿ ಲಾಠಿಚಾರ್ಜ್