ಹಾಸನ: ಲೋಕಸಭಾ ಚುನಾವಣೆ (Lok Sabha Election 2024) ಹೊಸ್ತಿಲಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಪ್ರೀತಂಗೌಡ ಬೆಂಬಲಿಗರು ಬಿಗ್ ಶಾಕ್ ಕೊಟ್ಟಿದ್ದಾರೆ.
ಪ್ರೀತಂಗೌಡ ಬಲಗೈ ಬಂಟ ಉದ್ದೂರು ಪುರುಷೋತ್ತಮ್ ಸೇರಿದಂತೆ ಹಲವು ನಾಯಕರು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರನ್ನು ಭೇಟಿ ಮಾಡಿದ್ದಾರೆ. ಪ್ರೀತಂಗೌಡ ಯಾವುದೇ ಸೂಚನೆ ನೀಡದ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿಯನ್ನು ಭೇಟಿಯಾಗಿದ್ದಾರೆ. ಈ ಮೂಲಕ ಪ್ರೀತಂಗೌಡ ಆಪ್ತರು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಕೊಟ್ಟಿದ್ದು, ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗೆ ಒಳಪೆಟ್ಟು ಬೀಳುವ ಆತಂಕ ಎದುರಾಗಿದೆ.
ಪ್ರೀತಂಗೌಡ (Preetham Gowda) ಹಾಗೂ ಅವರ ಬೆಂಬಲಿಗರು ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ತಿರುಗಿಬಿದ್ದಿದ್ದು, ಬಹಿರಂಗವಾಗಿಯೇ ಶ್ರೇಯಸ್ ಪಟೇಲ್ ಪರ ಪ್ರಚಾರಕ್ಕಿಳಿದಿದ್ದಾರೆ. ಇದೀಗ ಹಾಸನ ಕ್ಷೇತ್ರದಲ್ಲಿ (Hassan Lok Sabha constituency) ಬಿಜೆಪಿ ಹಾಗೂ ಜೆಡಿಎಸ್ ಎರಡೂ ಪಕ್ಷಗಳಿಗೂ ಪ್ರೀತಂಗೌಡ ಹಾಗೂ ಅವರ ಬೆಂಬಲಿಗರ ನಡೆ ತಲೆನೋವಾಗಿ ಪರಿಣಮಿಸಿದೆ. ಇದರಿಂದ ಕಾಂಗ್ರೆಸ್ ಅಭ್ಯರ್ಥಿಗೆ ಲಾಭವಾಗುವ ಸಾಧ್ಯತೆ ಹೆಚ್ಚಾಗಿದೆ.
ಜೆಡಿಎಸ್ (JDS) ಹಾಗೂ ಬಿಜೆಪಿ (BJP) ಮೈತ್ರಿ ಆದಾಗಿನಿಂದ ಪ್ರೀತಂಗೌಡ ಹಾಗೂ ಅವರ ಬೆಂಬಲಿಗರು ಅಸಮಾಧಾನ ಹೊರಹಾಕಿದ್ದರು. ಇಬ್ಬರ ನಡುವಿನ ಅಸಮಾಧಾನ ಶಮನಗೊಳಿಸಲು ಎರಡೂ ಪಕ್ಷಗಳ ಮುಖಂಡರು ಪ್ರಯತ್ನಿಸಿದ್ದರು. ಅಸಮಾಧಾನ ಬಗೆಹರಿಯದ ಹಿನ್ನೆಲೆ ಪ್ರೀತಂಗೌಡ ಬೆಂಬಲಿಗರು ಕಾಂಗ್ರೆಸ್ ಅಭ್ಯರ್ಥಿಗೆ ತಮ್ಮ ಬೆಂಬಲ ಸೂಚಿಸಿದ್ದಾರೆ. ಅಲ್ಲದೇ ಬಹಿರಂಗವಾಗಿ ಪ್ರಚಾರಕ್ಕೆ ಮುಂದಾಗಿದ್ದಾರೆ.