ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಆಡಳಿತ ಪಕ್ಷ ಆಲ್ ಇಂಡಿಯಾ ಅಣ್ಣ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ)ಯ ಡ್ಯಾಡಿ (ತಂದೆ) ಎಂದು ಡೈರಿ ಅಭಿವೃದ್ಧಿ ಸಚಿವ ಕೆ.ಟಿ.ರಾಜೇಂತಿರ ಬಾಲಾಜಿ ಹೇಳಿದ್ದಾರೆ.
ವಿರುದುನಗರ್ ಜಿಲ್ಲೆಯ ಶ್ರೀವಿಲ್ಲಿಪುತುರ್ನಲ್ಲಿ ಶುಕ್ರವಾರ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಅಮ್ಮ (ಎಐಎಡಿಎಂಕೆ ನಾಯಕಿ ಜಯಲಲಿತಾ) ಅವರ ಮೃತರಾದ ಬಳಿಕ ಪ್ರಧಾನಿ ಮೋದಿ ಅವರು ಎಐಎಡಿಎಂಕೆಗೆ ತಂದೆಯಂತೆ ಮಾರ್ಗದರ್ಶನ ಮಾಡಿದ್ದಾರೆ ಎಂದು ಹೊಗಳಿದರು.
ಪ್ರಧಾನಿ ನರೇಂದ್ರ ಮೋದಿ ನಮ್ಮ ತಂದೆ. ಜಯಲಲಿತಾ ಅವರನ್ನು ಕಳೆದುಕೊಂಡ ಬಳಿಕ ನಮಗೆ ಮಾರ್ಗದರ್ಶನ ಮತ್ತು ಬೆಂಬಲ ನೀಡುತ್ತಾ ಬಂದಿದ್ದಾರೆ. ಅವರು ಕೇವಲ ನಮಗಷ್ಟೇ ತಂದೆಯಲ್ಲ, ಇಡೀ ದೇಶಕ್ಕೆ ತಂದೆಯಾಗಿದ್ದಾರೆ. ಇದೇ ಕಾರಣಕ್ಕೆ ಎಐಎಡಿಎಂಕೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂದು ತಿಳಿಸಿದರು.
ಎಐಎಡಿಎಂಕೆ 2014ರ ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನ ಒಟ್ಟು 39 ಸೀಟುಗಳಲ್ಲಿ 37 ಸ್ಥಾನ ಪಡೆದಿತ್ತು. ಆದರೆ ಈ ಬಾರಿ ಎಐಎಡಿಎಂಕೆಯು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಹೀಗಾಗಿ 39 ಸೀಟುಗಳ ಪೈಕಿ, ಐದು ಸ್ಥಾನಗಳನ್ನು ಬಿಜೆಪಿಗೆ ನೀಡಲಾಗಿದೆ.
ಎಐಎಡಿಎಂಕೆ ನಾಯಕಿ ಜಯಲಲಿತಾ ಅವರು 2014ರ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ “ತಮಿಳುನಾಡಿನ ಮಹಿಳೆಯೋ ಅಥವಾ ಗುಜರಾತಿನ ಮೋದಿಯೋ?” ಎಂಬ ಘೋಷವಾಕ್ಯದ ಭಾರೀ ಪ್ರಚಾರ ಮಾಡಿದ್ದರು. ಈ ಘೋಷಣೆ ಮೂಲಕ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ ಟಾಂಗ್ ಕೊಟ್ಟಿದ್ದರು.
ನನ್ನ ನೇತೃತ್ವದ ತಮಿಳುನಾಡು ಸರ್ಕಾರವು ಗುಜರಾತ್ನ ನರೇಂದ್ರ ಮೋದಿ ಸರ್ಕಾರಕ್ಕಿಂತಲೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ತಮಿಳುನಾಡಿನ ಮಹಿಳೆ ಜನರಿಗೆ ಉತ್ತಮ ಆಡಳಿತ ನೀಡುತ್ತಿದ್ದಾರೆ ಎಂದು ಕಳೆದ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ವ್ಯಂಗ್ಯವಾಡಿದ್ದರು.
ಇತ್ತ ಮಿಜೋರಾಂ ರಾಜ್ಯಪಾಲ ಸ್ಥಾನಕ್ಕೆ ಕುಮ್ಮನಂ ರಾಜಶೇಖರ್ ರಾಜೀನಾಮೆ ನೀಡಿದ್ದು, ಬಿಜೆಪಿಯ ಅಭ್ಯರ್ಥಿಯಾಗಿ ಕೇರಳದ ತಿರುವನಂತಪುರಂನಿಂದ ಸ್ಪರ್ಧಿಸುವ ಇಚ್ಛೇ ವ್ಯಕ್ತಪಡಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv