ಕಲಬುರಗಿ: ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆದಿಲ್ಲ. ಕೇವಲ ಭ್ರಷ್ಟಾಚಾರದಲ್ಲೇ ಸರ್ಕಾರ ಕಾಲ ಕಳೆಯುತ್ತಿದೆ ಎಂದು ಕೆಪಿಸಿಸಿ ವಕ್ತಾರ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆದಿಲ್ಲ. ಕೇವಲ ಭ್ರಷ್ಟಾಚಾರದಲ್ಲೇ ಸರ್ಕಾರ ಕಾಲ ಕಳೆಯುತ್ತಿದೆ. ಕೇಂದ್ರ ಸರ್ಕಾರಕ್ಕೆ ರಾಜ್ಯದ ಬಗ್ಗೆ ಅಲರ್ಜಿ, ರಾಜ್ಯ ಸರ್ಕಾರಕ್ಕೆ ಕಲ್ಯಾಣ ಕರ್ನಾಟಕದ ಬಗ್ಗೆ ಅಲರ್ಜಿ. ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನವನ್ನ ದುರ್ಬಲಗೊಳಿಸಲು ಸರ್ಕಾರ ಯತ್ನಿಸುತ್ತಿದೆ. ಡಬಲ್ ಇಂಜಿನ್ ಸರ್ಕಾರ ಬಂದಾಗಿನಿಂದ ಈ ಭಾಗದ ಯೋಜನೆಗಳು ಮಾಯವಾಗಿವೆ. ರೈತರಿಗೆ ಇದುವರೆಗೂ ಯಾವುದೇ ರೀತಿಯ ಪರಿಹಾರ ದೊರೆತಿಲ್ಲ. ಕಾನೂನು ಸುವ್ಯವಸ್ಥೆ ಅಂತು ಸಂಪೂರ್ಣ ಹದಗೆಟ್ಟಿ ಹೋಗಿದೆ ಎಂದಿದ್ದಾರೆ. ಇದನ್ನೂ ಓದಿ: ಮುಗಿದ ಅಧ್ಯಾಯ – ಕಾಂಗ್ರೆಸ್ಗೆ ಸಿಎಂ ಇಬ್ರಾಹಿಂ ಗುಡ್ಬೈ
ಬಿಜೆಪಿಯವರಿಗೆ ಹಳೇ ಆಟ ಆಡಿ ಬೇಜಾರಾಗಿದೆ. ಇದೀಗ ಹೊಸ ಆಟ ಶುರು ಮಾಡಿಕೊಂಡಿದ್ದಾರೆ. 50 ವರ್ಷದಲ್ಲಿ ಉಂಟಾಗದ ನಿರುದ್ಯೋಗ ಇಂದಿನ ಸರ್ಕಾರದಲ್ಲಿ ಹೆಚ್ಚಾಗಿದೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ಉದ್ಯೋಗ ಕಲ್ಪಿಸುವ ಯೋಜನೆಗಳು ಬಂದಿಲ್ಲ. ಕದ್ದಿಮುಚ್ಚಿ ಈ ಭಾಗದ ಯುವಕರ ಉದ್ಯೋಗ ಭವಿಷ್ಯ ಕತ್ತಲೆಗೆ ಒಯ್ಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ನೈಟ್ ಕರ್ಫ್ಯೂ ನಡುವೆ ಸಿಲಿಕಾನ್ ಸಿಟಿಯಲ್ಲಿ ಭೀಕರ ಅಪಘಾತ
ಕೊರೊನಾದಿಂದ ಆರ್ಥಿಕ ನಷ್ಟ ನೆಪವೊಡ್ಡಿ ಕಲ್ಯಾಣ ಕರ್ನಾಟಕ ಭಾಗದ ಹುದ್ದೆ ಭರ್ತಿಗೆ ತಡೆ ನೀಡಿದೆ. ಕೇವಲ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಾತ್ರ ಸರ್ಕಾರಕ್ಕೆ ಆರ್ಥಿಕ ಸಂಕಷ್ಟನಾ? ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಈ ಭಾಗದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. 371(ಜೆ) ಮಾನದಂಡಗಳನ್ನು ನೇಮಕಾತಿಯಲ್ಲಿ ಸರಿಯಾಗಿ ಅನುಸರಿಸುತ್ತಿಲ್ಲ. 45 ಪಿಎಸ್ಐ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಸರ್ಕಾರದ ಅವಿವೇಕಿತನದಿಂದ ನಮ್ಮ ಭಾಗದ ಜನರಿಗೆ ನಿರಂತರ ಅನ್ಯಾಯವಾಗುತ್ತಿದೆ ಎಂದು ಕಿಡಿಕಾರಿದ್ದಾರೆ.