ದಾವಣಗೆರೆ: ರಾಜ್ಯ ಸರ್ಕಾರ ಗುಟ್ಕಾ ನಿಷೇಧ ಆದೇಶ (Gutka Ban Order) ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಅಡಿಕೆ ಬೆಳೆಗಾರರು ಹಾಗೂ ಬಿಜೆಪಿ ಮುಖಂಡರು ದಾವಣಗೆರೆ (Davanagere) ಎಸಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪಾದಯಾತ್ರೆಯ ನೇತೃತ್ವ ವಹಿಸಿದ್ದ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ (M.P Renukacharya), ಪರಿಷತ್ ಸದಸ್ಯ ಮಾಡಾಳ್ ಮಲ್ಲಿಕಾರ್ಜುನ್ (Madal Mallikarjun) ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆ.26 ರಿಂದ ಅಯಾ ಕ್ಷೇತ್ರಗಳಿಂದ ಪಾದಯಾತ್ರೆ ನಡೆಸಿದ ಬಿಜೆಪಿ ನಾಯಕರು, ಇಂದು ದಾವಣಗೆರೆಗೆ ಆಗಮಿಸಿ ಪ್ರತಿಭಟನೆ ನಡೆಸಿದ್ದಾರೆ. ಎಸಿ ಕಚೇರಿಗೆ ಮುತ್ತಿಗೆ ಹಾಕಿ, ರಸ್ತೆ ತಡೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸಿಗರೇಟ್ ಹಾಗೂ ಮದ್ಯಪಾನ ಲಾಭಿಗೆ ಮಣಿದು ಗುಟ್ಕಾ ನಿಷೇಧ ಮಾಡಲು ಸರ್ಕಾರ ಹೊರಟಿದೆ. ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಗುಟ್ಕಾ, ಪಾನ್ ಮಸಾಲ ಬ್ಯಾನ್ ಆದೇಶ ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ

ಎಸಿ ಕಚೇರಿ ಮುತ್ತಿಗೆ ವೇಳೆ, ಪೊಲೀಸರ ಹಾಗೂ ಹೋರಾಟಗಾರರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಬ್ಯಾರಿಕೇಡ್ಗಳನ್ನು ಕೆಡವಿ ಅಡಿಕೆ ಬೆಳೆಗಾರರು ಹಾಗೂ ಬಿಜೆಪಿ ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದಾರೆ. ಇದರಿಂದ ಪೊಲೀಸರು ಬಿಜೆಪಿ ಮುಖಂಡರು ಹಾಗೂ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.
ವಶಕ್ಕೆ ಪಡೆದ ಪ್ರತಿಭಟನಾಕಾರರನ್ನು ಬಿಡುವಂತೆ ಪೊಲೀಸ್ ವಾಹನದ ಮುಂದೆ ಕೂತು ರೈತರು ಪ್ರತಿಭಟನೆ ಮಾಡಿದ್ದಾರೆ. ವಶಕ್ಕೆ ಪಡೆದ ನಾಯಕರನ್ನು ಹಾಗೂ ರೈತರನ್ನು ಕೆಳಗೆ ಇಳಿಸುವಂತೆ ಪಟ್ಟು ಹಿಡಿದಿದ್ದಾರೆ. ಇದೇ ವೇಳೆ ಪ್ರತಿಭಟನಾಕಾರರು ಟಯರ್ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.
ಸೋಮವಾರ (ಆ.31) ದಾವಣಗೆರೆ ಬಂದ್ಗೆ ಅಡಿಕೆ ಬೆಳೆಗಾರರು ಹಾಗೂ ಬಿಜೆಪಿ ನಾಯಕರು ಕರೆ ನೀಡಿದ್ದಾರೆ. ಈ ಬಗ್ಗೆ ಎಸಿ ಕಚೇರಿ ಬಳಿ ನಡೆಯುತ್ತಿರುವ ಪ್ರತಿಭಟನಾ ಸಭೆಯಲ್ಲಿ ನಿರ್ಣಯಕೈಗೊಳ್ಳಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಗುಟ್ಕಾ ಬ್ಯಾನ್ ವಾಪಸ್ ಭರವಸೆ ನೀಡಿದ ಸಿಎಂ
