ಚಾಮರಾಜನಗರ: ಅಕ್ರಮವಾಗಿ ಚಾಮರಾಜನಗರ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ ಖಾಲಿ ಇದ್ದ ಹುದ್ದೆಗಳನ್ನು ಬರ್ತಿ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ ವಿವಿಧ ಪ್ರಗತಿ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಚಾಮರಾಜನಗರ ಜಿಲ್ಲೆಯ ಕುದೇರು ಗ್ರಾಮದಲ್ಲಿರುವ ಚಾಮರಾಜನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಮುಂದೆ ವಿವಿಧ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿದ್ದರು. ಹಾಲು ಒಕ್ಕೂಟದಲ್ಲಿ ಖಾಲಿ ಇದ್ದ 72 ಹುದ್ದೆಗಳಿಗೆ ಒಕ್ಕೂಟದ ಆಡಳಿತ ಮಂಡಳಿ ಅಕ್ರಮವಾಗಿ ನೇಮಕಾತಿ ಮಾಡಿದೆ ಎಂದು ಆರೋಪಿಸಿ ಅನಿರ್ಧಿಷ್ಟಾವದಿ ಧರಣಿ ಸತ್ಯಾಗ್ರಹ ಆರಂಭಿಸಿದರು.
ಹಾಲು ಒಕ್ಕೂಟದ ವಿರುದ್ಧ ದಿಕ್ಕಾರದ ಘೋಷಣೆಗಳನ್ನ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಈಗಾಗಲೇ ಒಕ್ಕೂಟದಲ್ಲಿ ಖಾಲಿ ಇದ್ದ ವಿವಿಧ ವರ್ಗದ ಹುದ್ದೆಗಳಿಗೆ ಪರೀಕ್ಷೆ ನಡೆಸದೇ ಆಯ್ಕೆ ಮಾಡಿದ ಕ್ರಮ ಸರಿಯಲ್ಲವೆಂದು ಆರೋಪಿಸಿದರು. ಅಲ್ಲದೆ ನೇಮಕಾತಿಯನ್ನ ರದ್ದು ಮಾಡಬೇಕೆಂದು ಒತ್ತಾಯಿಸಿದರು.
ಈಗಾಗಲೇ ನಡೆದಿರುವ ಪರೀಕ್ಷಾ ಪದ್ಧತಿಯಲ್ಲಿ ಬಾರಿ ಪ್ರಮಾಣದ ಅವ್ಯವಹಾರ ನಡೆದಿದ್ದು, ಮರು ಪರೀಕ್ಷೆ ಮಾಡಬೇಕೆಂದು ಆಗ್ರಹಿಸಿದರು. ಚಾಮುಲ್ನಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಬಗ್ಗೆ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗಿದ್ದು, ಮುಂದಿನ ದಿನಗಳಲ್ಲಿ ಪ್ರತಿಭಟನೆ ದಿಕ್ಕು ಬದಲಾಗಲಿದೆ.