ಕೊಲಂಬೋ: ದ್ವೀಪ ದೇಶ ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನಿಂದ ದಿನೇ ದಿನೇ ಪರಿಸ್ಥಿತಿ ಹದಗೆಡುತ್ತಿದೆ. ದಿನನಿತ್ಯದ ಅಗತ್ಯ ವಸ್ತುಗಳ ಕೊರತೆಯನ್ನು ಒಂದೆಡೆ ಜನರು ಎದುರಿಸುತ್ತಿದ್ದರೆ, ವಿದ್ಯುತ್, ಇಂಧನ ಬೆಲೆ ಏರಿಕೆಯೂ ಅಲ್ಲಿನ ಆರ್ಥಿಕತೆಯ ಪರಿಸ್ಥಿತಿಯನ್ನು ಹಿಂಡಿ ಹಿಪ್ಪೆಯನ್ನಾಗಿಸುತ್ತಿದೆ.
ಪೆಟ್ರೊಲ್ ಬೆಲೆ 84 ರೂ.ಏರಿಕೆ ಮಾಡಲಾಗಿದೆ. ಇದರಿಂದಾಗಿ ಒಂದು ಲೀಟರ್ ಪೆಟ್ರೋಲ್ ಬೆಲೆ 338 ರೂ.ಗೆ ಏರಿಕೆ ಮಾಡಲಾಗಿದೆ. ಮಂಗಳವಾರ ರುಂಬಕ್ಕನ ಪ್ರದೇಶದಲ್ಲಿ ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆದಿದೆ. ಪೊಲೀಸರ ಹಾಗೂ ಜನರ ನಡುವೆ ಸಂಘರ್ಷ ಏರ್ಪಟ್ಟು, ಪರಿಸ್ಥಿತಿಯನ್ನು ಪೊಲೀಸರಿಂದ ನಿಯಂತ್ರಣಕ್ಕೆ ತರಲು ಸಾಧ್ಯವಾಗದೇ, ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸರ ಗುಂಡಿನ ದಾಳಿಗೆ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, 12 ಮಂದಿಗೆ ಗಾಯಗಳಾಗಿವೆ. ಇದನ್ನೂ ಓದಿ: ಚೀನಾ ಮೀರಿಸಿದ ಭಾರತ – ವಿಶ್ವದಲ್ಲೇ ಅತೀ ವೇಗದ ಅಭಿವೃದ್ಧಿ
ಮಂಗಳವಾರ ಪ್ರತಿಭಟನಾಕಾರರು ರಂಬುಕ್ಕನದಲ್ಲಿ ರೈಲು ಮಾರ್ಗದ ಬಳಿ ಪ್ರತಿಭಟನೆ ನಡೆಸಿದ್ದರು. ಭದ್ರತಾ ಸಿಬ್ಬಂದಿ ರೈಲು ಮಾರ್ಗವನ್ನು ತೆರವುಗೊಳಿಸುವಂತೆ ಕೇಳಿದಾಗ, ಭದ್ರತಾ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಳಿಕ ಪೊಲೀಸರು ಪ್ರತಿಭಟನಾಕಾರರನ್ನು ಅಲ್ಲಿಂದ ಚದುರಿಸಲು ಪ್ರಯತ್ನಪಟ್ಟರೂ ವಾಹನಗಳಿಗೆ ಬೆಂಕಿ ಹಚ್ಚಲು ಮುಂದಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ವೇಳೆ ಪರಿಸ್ಥಿತಿಯನ್ನು ಹತೋಟಿಗೆ ತರಲು ಸಾಧ್ಯವಾಗದೇ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಈ ವೇಳೆ ಗುಂಡು ತಗುಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, 12 ಮಂದಿಗೆ ಗಾಯಗಳಾಗಿವೆ. 12 ಜನರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಮಲಾ ಹ್ಯಾರಿಸ್ ರಕ್ಷಣಾ ಸಲಹೆಗಾರರಾಗಿ ಭಾರತೀಯ ಮೂಲದ ಶಾಂತಿ ಸೇಠಿ ನೇಮಕ
ಇತ್ತೀಚಿನ ಬೆಳವಣಿಗೆಯಲ್ಲಿ ಶ್ರೀಲಂಕಾದಲ್ಲಿ ನಡೆಯುತ್ತಿರುವ ಸರ್ಕಾರೀ ವಿರೋಧಿ ಪ್ರತಿಭಟನೆಯಲ್ಲಿ ಇದೇ ಮೊದಲ ಬಾರಿಗೆ ಸಾವು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.