ಬೆಂಗಳೂರು: ಗೋವಿಂದರರಾಜನಗರ ಕ್ಷೇತ್ರದ ಶಾಸಕ ಪ್ರಿಯಾಕೃಷ್ಣ(Priya Krishna) ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿಲ್ಲ ಎಂದು ಅಸಮಾಧಾನಗೊಂಡ ಬೆಂಬಲಿಗರು ಹಾಗೂ ಎಂ. ಕೃಷ್ಣಪ್ಪ ಅಭಿಮಾನಿಗಳು ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದಾರೆ.
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಸಂಪುಟ ವಿಸ್ತರಣೆಗೆ ಅನುಮತಿ ಸಿಕ್ಕಿದ ಬೆನ್ನಲ್ಲೇ ಬೆಂಗಳೂರಿನ ನಾಗರಭಾವಿಯಲ್ಲಿರುವ ಅಜ್ಜಯ್ಯನ ಶಾಖಾ ಮಠಕ್ಕೆ ಆಗಮಿಸಿದ್ದರು. ಈ ವೇಳೆ ರಸ್ತೆಗೆ ಅಡ್ಡಲಾಗಿ ನಿಂತ ಕಾರ್ಯಕರ್ತರು ಸಿಎಂ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಸಿಎಂ ಕಾರು ಯು-ಟರ್ನ್ ಹೊಡೆದು ಹಿಂತಿರುಗಿತು. ಆದರೂ ಕಾರ್ಯಕರ್ತರು ಕಾರಿನ ಹಿಂದೆ ಓಡಿ ಆಕ್ರೋಶ ವ್ಯಕ್ತಪಡಿಸಿದರು.
ನಾಗರಭಾವಿ ಸರ್ಕಲ್ ಹಾಗೂ ವಿಜಯನಗರ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಕೃಷ್ಣಪ್ಪ ಬೆಂಬಲಿಗರು ಮತ್ತು ಮಹಿಳಾ ಕಾರ್ಯಕರ್ತೆಯರು ರಸ್ತೆ ಮಧ್ಯೆ ಕುಳಿತು, ಮಲಗಿ ವಾಹನಗಳ ಸಂಚಾರವನ್ನು ಸಂಪೂರ್ಣ ತಡೆದರು.
ರಸ್ತೆಗೆ ನುಗ್ಗಿದ ಪ್ರತಿಭಟನಾಕಾರರು ಟೈರ್ ಸುಟ್ಟು ಬೆಂಕಿ ಹಚ್ಚುವ ಮೂಲಕ ರಸ್ತೆ ತಡೆ ನಡೆಸಿದ್ದಾರೆ. ಪ್ರತಿಭಟನೆಯಿಂದಾಗಿ ಮೈಸೂರು ರಸ್ತೆಯಲ್ಲಿ ಸುಮಾರು 4 ಕಿಲೋಮೀಟರ್ಗೂ ಹೆಚ್ಚು ದೂರ ಸಾಗುವಷ್ಟು ಟ್ರಾಫಿಕ್ ಜಾಮ್ ಆಗಿತ್ತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿ ಪರಿಸ್ಥಿತಿಯನ್ನು ಹತೋಟಿಗೆ ತರಲು ಹರಸಾಹಸ ಪಡುತ್ತಿದ್ದಾರೆ.
