ಕೋಲಾರ: ಮಾರಿಕುಪ್ಪಂ-ಬೆಂಗಳೂರು ಸ್ವರ್ಣ ಪ್ಯಾಸೆಂಜರ್ ರೈಲು ಬದಲಾವಣೆ ಖಂಡಿಸಿ ಕೆಜಿಎಫ್ ನಗರದ ಮಾರಿಕುಪ್ಪಂ ರೈಲು ನಿಲ್ದಾಣದಲ್ಲಿ ಬೆಳಂಬೆಳಗ್ಗೆ ರೈಲು ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ.
ಕೋಲಾರ ಜಿಲ್ಲೆಯ ಕೆಜಿಎಫ್ ಮಾರಿಕುಪ್ಪಂ ರೈಲ್ವೆ ನಿಲ್ದಾಣದಲ್ಲಿ ಸಂಸದ ಕೆ.ಎಚ್.ಮುನಿಯಪ್ಪ ಪುತ್ರಿ ರೂಪ ಶಶಿಧರ್ ನೇತೃತ್ವದಲ್ಲಿ, ಹಲವು ದಲಿತ ಸಂಘಟನೆಗಳು ಸೇರಿದಂತೆ ನೂರಾರು ಪ್ರಯಾಣಿಕರು ರೈಲು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.
ಮುಂಜಾನೆಯ 6.30 ರ ಸ್ವರ್ಣ ಪ್ಯಾಸೆಂಜರ್ ರೈಲು ಬದಲಾಗಿ ಪುಷ್ ಪುಲ್ ರೈಲು ಹಾಕಿರುವುದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಅಲ್ಲದೆ ಬದಲಾದ ರೈಲಿನ ಬೋಗಿಗಳು ಕಡಿಮೆ ಇರುವ ಕಾರಣ ಪ್ರತಿನಿತ್ಯ ಹೊಟ್ಟೆಪಾಡಿಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವವರಿಗೆ ಬಹಳಷ್ಟು ತೊಂದರೆಯಾಗುತ್ತಿರುವ ಹಿನ್ನಲೆಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದಿದ್ದಾರೆ.
ಕೆ.ಜಿ.ಎಫ್ ನ ಮಾರಿಕುಪ್ಪಂ ಪೊಲೀಸರು ಹಾಗೂ ರೈಲ್ವೆ ಪೊಲೀಸರು ಪ್ರತಿಭಟನೆ ತಡೆಯಲು ಹರಸಾಹಸ ಪಡುತ್ತಿದ್ದು, ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.