ಚಿಕ್ಕಬಳ್ಳಾಪುರ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅನಿರುದ್ಧ್ ಶ್ರವಣ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅನಿರುದ್ಧ್ ಶ್ರವಣ್ ಅವರು, ಜಿಲ್ಲೆಯ ಸಮಸ್ತ ಅಭಿವೃದ್ಧಿ, ಹಾಗೂ ಪಾರದರ್ಶಕ ಆಡಳಿತ ನಡೆಸಲು ಎಲ್ಲಾ ಕಾನೂನಾತ್ಮಕ ಕ್ರಮಗಳನ್ನ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಇದೇ ವೇಳೆ ಜಿಲ್ಲೆಯ ಯಾವುದೇ ಅಭಿವೃದ್ಧಿ ಕಾರ್ಯಗಳ ಕುರಿತು ಸಾರ್ವಜನಿಕರು ನೇರ ಮಾಹಿತಿ ಪಡೆಯಬಹುದು. ಈ ವಿಚಾರದಲ್ಲಿ ಮಾಧ್ಯಮಗಳಿಗೂ ಹೆಚ್ಚಿನ ಜವಾಬ್ದಾರಿ ಇದೆ. ತಮ್ಮ ಕಾರ್ಯಕ್ಕೆ ಮಾಧ್ಯಮಗಳು ಸಹ ಸಹಕಾರ ನೀಡಬೇಕು. ಸರ್ಕಾರ ಕೈಗೊಳ್ಳುವ ಎಲ್ಲಾ ಯೋಜನೆಗಳು ಜನರಿಗೆ ತಲುಪಿಸುವ ಕಾರ್ಯ ಮಾಡಲಾಗುತ್ತದೆ. ಜಿಲ್ಲೆಯಲ್ಲಿ 2 ವರ್ಷ ಸೇವೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಅವಧಿಯಲ್ಲಿ ಪ್ರಮುಖ ಸಮಸ್ಯೆಗಳ ಪರಿಹಾರ ಕೈಗೊಳ್ಳುವ ಕಾರ್ಯ ಮಾಡಲಾಗುವುದು ಎಂದರು. ಇದೇ ವೇಳೆ ಜಿಲ್ಲೆಯ ಗಂಭೀರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಈ ಹಿಂದೆ ಕಲಬುರಗಿ ಜಿಲ್ಲಾಪಂಚಾಯತ್ ಸಿಇಓ ಆಗಿ 2 ವರ್ಷ ಕಾರ್ಯನಿರ್ವಹಿದ್ದ ಅನಿರುದ್ಧ್ ಶ್ರವಣ್ ಅವರು ಉದ್ಯೋಗ ಖಾತರಿ ಯೋಜನೆ ಅನುಷ್ಠಾನದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದರು. ಅಲ್ಲದೇ ಪಬ್ಲಿಕ್ ಟಿವಿಯ ಪಬ್ಲಿಕ್ ಹೀರೋ ಖ್ಯಾತಿಗೆ ಭಾಜನರಾಗಿದ್ದರು. ಬಳಿಕ ಅವರಿಗೆ ಜಿಲ್ಲಾಧಿಕಾರಿಯಾಗಿ ಬಡ್ತಿ ನೀಡಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಯಾಗಿದ್ದ ದೀಪ್ತಿ ಅದಿತ್ಯಾ ಕಾನಡೆ ಅವರು ದೀರ್ಘಾವಧಿ ರಜೆ ಪಡೆದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ಅನಿರುದ್ಧ್ ಶ್ರವಣ್ ರನ್ನ ಸರ್ಕಾರ ನೇಮಕ ಮಾಡಿದೆ.